ಕರ್ನಾಟಕ

karnataka

ಗುರು ರಾಘವೇಂದ್ರ ಬ್ಯಾಂಕ್ ಹಗರಣ: ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ

By

Published : Dec 23, 2020, 8:26 PM IST

Updated : Dec 23, 2020, 9:07 PM IST

ಮುಂದಿನ ಜನವರಿ 8ರೊಳಗೆ ಗುರು ರಾಘವೇಂದ್ರ ಬ್ಯಾಂಕ್​ಗೆ ಸೇರಿದ ಎಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಆದೇಶಿಸಿದೆ.

bank
ಗುರು ರಾಘವೇಂದ್ರ ಬ್ಯಾಂಕ್

ಬೆಂಗಳೂರು:ಗುರು ರಾಘವೇಂದ್ರ ಬ್ಯಾಂಕ್​ಗೆ ಸೇರಿದ ಎಲ್ಲ ಆಸ್ತಿಗಳನ್ನು ಮುಂದಿನ ಜನವರಿ 8ರೊಳಗೆ ಜಪ್ತಿ ಮಾಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬ್ಯಾಂಕ್ ಹಗರಣದ ತನಿಖೆ ಕೋರಿ ಕೆ.ಆರ್.ನರಸಿಂಹಮೂರ್ತಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಠೇವಣಿದಾರರ ಹಿತದೃಷ್ಟಿಯಿಂದ ಬ್ಯಾಂಕ್​ನ ಎಲ್ಲ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ಕೆಪಿಐಡಿ ಕಾಯ್ದೆ ಅಡಿ ಕ್ರಮ ಕೈಗೊಳ್ಳಬೇಕು. ಈ ವರದಿಯನ್ನು ಜ. 8ರೊಳಗೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಅಲ್ಲದೆ ಈ ಹಿಂದೆ ಆರ್​ಬಿಐ ಸಲಹೆ ಮೇರೆಗೆ ಬ್ಯಾಂಕ್​ಗೆ ಹೊಸ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಅವರಿಗೆ ಬ್ಯಾಂಕ್​ನ ಬಾಕಿ ಸಾಲ ವಸೂಲಿ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವರದಿ ನೀಡಲು ನವೆಂಬರ್ 20ರಂದು ನಿರ್ದೇಶಿಸಲಾಗಿತ್ತು. ಆದರೆ, ಅಧಿಕಾರಿ ಈವರೆಗೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿರುವ ಕುರಿತು ಯಾವುದೇ ವರದಿ ನೀಡಿಲ್ಲ. ಹೀಗಾಗಿ ಆಡಳಿತಾಧಿಕಾರಿ ಮುಂದಿನ ವಿಚಾರಣೆ ವೇಳೆ ತಪ್ಪದೇ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿತು.

ಇದನ್ನೂ ಓದಿ:ಹೆಚ್​ಡಿಕೆ, ಡಿಕೆಶಿ, ಪರಮೇಶ್ವರ್​ಗೆ ರಿಲೀಫ್​​: ಎಫ್​ಐಆರ್​​​ ರದ್ದುಪಡಿಸಿದ ಹೈಕೋರ್ಟ್

ಇನ್ನು ಆರ್​ಬಿಐ ಆಡಳಿತಾಧಿಕಾರಿ ಹುದ್ದೆಗೆ ಇಬ್ಬರು ನಿವೃತ್ತ ಬ್ಯಾಂಕ್ ಅಧಿಕಾರಿಗಳನ್ನು ಹೆಸರಿಸಿತ್ತು. ಅವರಲ್ಲಿ ಒಬ್ಬರನ್ನು ಈಗಾಗಲೇ ಬ್ಯಾಂಕ್​ಗೆ ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಮತ್ತೊಬ್ಬರನ್ನು ಗುರು ರಾಘವೇಂದ್ರ ಕೋ-ಆಪರೇಟಿವ್ ಸೊಸೈಟಿಗೆ ಆಡಳಿತಾಧಿಕಾರಿಯಾಗಿ ನೇಮಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿತು.

ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿದ್ದು, ಅವುಗಳನ್ನು ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೇ ಕೋರ್ಟ್ ನಿರ್ದೇಶನಗಳ ಪಾಲನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸದ ಕಾರಣಕ್ಕಾಗಿ ನ್ಯಾಯಾಂಗ ನಿಂದನೆ ಅಡಿ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ವಿಚಾರಣೆಯನ್ನು ಜನವರಿ 11ಕ್ಕೆ ಮುಂದೂಡಿತು.

Last Updated : Dec 23, 2020, 9:07 PM IST

ABOUT THE AUTHOR

...view details