ಬೆಂಗಳೂರು :ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿಗಳನ್ನು ಇಂದು ಮಧ್ಯಾಹ್ನ 2.30 ರಿಂದ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.
ಈ ಕುರಿತಂತೆ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಷಮ್ ಹಾಗೂ ಇತರೆ ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿರುವ 9 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.
ಪ್ರಕರಣವನ್ನು ಇತ್ಯರ್ಥಪಡಿಸುವವರೆಗೆ ಸಮವಸ್ತ್ರ ನಿಗದಿಪಡಿಸಿರುವ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ಶಾಲು ಸೇರಿದಂತೆ ಯಾವುದೇ ಧಾರ್ಮಿಕ ಗುರುತನ್ನು ಬಿಂಬಿಸುವ ಉಡುಪುಗಳನ್ನು ಧರಿಸದಂತೆ ತ್ರಿಸದಸ್ಯ ಪೀಠ ಈಗಾಗಲೇ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರಕರಣವನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ದಿನಂಪ್ರತಿ ವಿಚಾರಣೆ ನಡೆಸಲಾಗುತ್ತಿದೆ.
ಬಿಂದಿ, ಕುಂಕುಮ ಓಕೆ, ಹಿಜಾಬ್ ಮೇಲೆ ಕೋಪ ಯಾಕೆ?:ಅರ್ಜಿದಾರ ವಿದ್ಯಾರ್ಥಿನಿಯರ ಪರ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ ಕಾಮತ್, ಪ್ರೊ. ರವಿವರ್ಮ ಕುಮಾರ್, ಡಾ. ವಿನೋದ್ ಕುಲಕರ್ಣಿ ಸೇರಿದಂತೆ ಹಲವರು ವಾದ ಮಂಡಿಸಿದ್ದಾರೆ. ಮಹಿಳೆಯರು ಹಿಜಾಬ್ ಧರಿಸುವಂತೆ ಕುರಾನ್ನಲ್ಲಿ ಹೇಳಲಾಗಿದೆ.