ಬೆಂಗಳೂರು:ಮುಂಬರುವ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರುಗಳ ಸಭೆ ನಡೆಯಿತು. ಬಿಬಿಎಂಪಿ ಚುನಾವಣೆಗೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಮತ್ತಿತರ ವಿಷಯಗಳ ಕುರಿತು ಅಧ್ಯಕ್ಷರುಗಳ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಎಂ. ಇಬ್ರಾಹಿಂ ಅವರು, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ. ಶನಿವಾರ ಬೆಂಗಳೂರು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರ ಸಭೆ ನಡೆಸಿದ್ದೇವೆ. ಬಿಬಿಎಂಪಿ ಚುನಾವಣೆಯ ನೋಟಿಫಿಕೇಷನ್ ಹೊರ ಬರುತ್ತಿದ್ದಂತೆಯೇ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯಸಭೆಯಲ್ಲಿ ನಮ್ಮನ್ನು ಸೋಲಿಸಿ ದೊಡ್ಡ ಸಾಧನೆ ಮಾಡಿದ್ದೇವೆ ಅಂತ ಕಾಂಗ್ರೆಸ್ನವರು ಅಂದುಕೊಂಡಿದ್ದಾರೆ. ಬಿಜೆಪಿಗೆ ಸಹಾಯ ಮಾಡುವ ಮೂಲಕ ನಮಗೆ ಶಕ್ತಿ ಕೊಟ್ಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ಒಂದೇ ನಾಣ್ಯದ ಎರಡು ಮುಖಗಳೆಂದು ಅವರೇ ಸಾಬೀತು ಮಾಡಿಕೊಂಡಿದ್ದಾರೆ. ಜನ ನಮಗೆ ಮಾನ್ಯತೆ ಮಾಡಿದ್ದಾರೆ ಎಂದು ಹೇಳಿದರು.