ಬೆಂಗಳೂರು:ಮುಂಬರುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್, ಕೋರ್ ಕಮಿಟಿ ಹಾಗೂ ರಾಜ್ಯಮಟ್ಟದ ಪದಾಧಿಕಾರಿಗಳ ಪಟ್ಟಿಯನ್ನು ಈ ತಿಂಗಳ ಅಂತ್ಯದ ವೇಳೆಗೆ ಪ್ರಕಟಿಸಲು ಸಿದ್ದತೆ ನಡೆಸಿದೆ.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ನಡೆದ ಪ್ರಮುಖ ಮುಖಂಡರ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರ ಆಯ್ಕೆ ಹಾಗೂ ಪದಾಧಿಕಾರಿಗಳ ಪುನರ್ ನೇಮಕ ಮಾಡುವ ಬಗ್ಗೆ ಚರ್ಚಿಸಲಾಗಿದೆ. ವಿಭಾಗ ಮಟ್ಟದ ಪದಾಕಾರಿಗಳೂ ಸೇರಿದಂತೆ ಪಕ್ಷವನ್ನು ಪುನರ್ ಸಂಘಟನೆ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ.
ಕೋರ್ ಕಮಿಟಿ ಸದಸ್ಯರ ಆಯ್ಕೆ ಬಹುತೇಕ ಪೂರ್ಣಗೊಂಡಿದ್ದು, ಈ ಪಟ್ಟಿಯನ್ನು ವರಿಷ್ಠರು ಮುಂದಿನ ವಾರ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಸುಮಾರು 20 ಮಂದಿ ಪ್ರಮುಖರು ಕೋರ್ ಕಮಿಟಿಯಲ್ಲಿ ಸ್ಥಾನ ಪಡೆಯಲಿದ್ದಾರೆಂದು ಮೂಲಗಳು ತಿಳಿಸಿವೆ.