ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇಂದು ಬೆಳಗ್ಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಕೊರೊನಾ ಎರಡನೇ ಅಲೆ ಬಗ್ಗೆ ಭಯ ಪಡಬೇಕಾದ ಅಗತ್ಯವಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಕೆ ಮಾಡಬೇಕು. ಜೊತೆಗೆ ಕೇಂದ್ರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇನ್ನೂ ನಾಲ್ಕೈದು ತಿಂಗಳು ಜಾಗ್ರತೆಯಿಂದ ಇರಬೇಕು ಎಂದು ಹೇಳಿದರು.
ಡಿಸೆಂಬರ್ 25 ರಂದು ವಾಜಪೇಯಿ ಅವರ ಹುಟ್ಟುಹಬ್ಬ, ಅಂದು ರೈತರ ದಿನವನ್ನಾಗಿ ನಾವು ಆಚರಿಸುತ್ತಿದ್ದೇವೆ. ಅಂದು ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ನಡೆಸಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಏನೆಲ್ಲಾ ಉಪಯೋಗವಾಗಲಿದೆ ಎಂಬ ಬಗ್ಗೆ ತಿಳುವಳಿಕೆ ಮೂಡಿಸಲಾಗುವುದು. ಜೊತೆಗೆ ಇದು ಹೇಗೆ ರೈತರಿಗೆ ಉಪಕಾರಿ ಎನ್ನುವುದನ್ನು ಮನದಟ್ಟು ಮಾಡಲಾಗುವುದು.
ಎಪಿಎಂಸಿ ಕಾಯ್ದೆಯಿಂದ ಯಾರಿಗೂ ತೊಂದರೆಯಾಗದು. ಎಪಿಎಂಸಿಯನ್ನು ಇನ್ನು ಮೇಲ್ದರ್ಜೆಗೇರಿಸುವ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ. ಇದಕ್ಕಾಗಿ ನಬಾರ್ಡ್ 205 ಕೋಟಿ ರೂಪಾಯಿ ಅನುದಾನ ನೀಡಿದೆ. ಅಲ್ಲದೆ, 35 ಪೈಸೆಗೆ ಇಳಿಸಿದ್ದ ಸೆಸ್ ಅನ್ನು ವರ್ತಕರು ಹಾಗೂ ಪ್ರತಿಪಕ್ಷಗಳ ಆಗ್ರಹದ ಮೇರೆಗೆ 1 ರೂಪಾಯಿಗೆ ಏರಿಸಿ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಂಡಿದ್ದಾರೆ. ಹೀಗಾಗಿ ಆದಾಯದಲ್ಲಿ ನಷ್ಟ ಎಂಬ ಮಾತು ಬಾರದು ಎಂದು ಸಚಿವರು ತಿಳಿಸಿದರು.