ಬೆಂಗಳೂರು : ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಡಾ ಕೆ ಸುಧಾಕರ್, ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆಯ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಆಸ್ಪತ್ರೆ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಇದೇ ವೇಳೆ ಆಸ್ಪತ್ರೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಒದಗಿಸುವುದಾಗಿ ತಿಳಿಸಿದರು.
ನಂತರ ಮಾತನಾಡಿದ ಸಚಿವರು, ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್ಲೈನ್ನಲ್ಲಿ ಅಥವಾ ಮೊಬೈಲ್ ಸಂದೇಶ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ ಎಂದರು.
ವೈದ್ಯರ ಆಪಾಯಿಂಟ್ಮೆಂಟ್ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್ಲೈನ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್ ಪಾವತಿ ಮಾಡುವ ವ್ಯವಸ್ಥೆ ತರಲಾಗುವುದು ಎಂದು ಹೇಳಿದರು.
ಜಯನಗರ ಸರ್ಕಾರಿ ಆಸ್ಪತ್ರೆ ಎನ್ಕ್ಯೂಎಸ್ ಗುಣಮಟ್ಟವನ್ನು ಹೊಂದುವಂತೆ ಕ್ರಮ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರಿ ಸೇವೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದೆ. ಈಗ ಪರಿಶೀಲನೆ ನಡೆಸಿದ ಬಳಿಕವೂ ಮತ್ತೊಮ್ಮೆ ಬಂದು ಪರಿಶೀಲನೆ ನಡೆಸಿ ಗುರಿ ತಲುಪಲಾಗಿದೆಯೇ ಎಂದು ಗಮನಿಸಲಾಗುವುದು ಎಂದರು.
51 ಹಾಸಿಗೆಗಳ ಐಸಿಯು ಇಲ್ಲಿದೆ. ಕೋವಿಡ್ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗುವುದು. ಕಾಯಂ ಸಿಬ್ಬಂದಿ ನೇಮಕಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ನೀಡಲಾಗುವುದು. ನಾಲ್ಕು ಆರ್ಥೊಪೆಡಿಕ್ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪ್ರೊಸೀಜರ್ ಮಾತ್ರ ನಡೆಯುತ್ತಿದೆ. ಈ ಸಂಖ್ಯೆಯನ್ನು 100 ಕ್ಕೆ ಏರಿಸಿಕೊಳ್ಳಬೇಕು. ಹಾಗೆಯೇ ಸಭೆ ನಡೆಸಿ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಸೂಚಿಸಲಾಗಿದೆ ಎಂದರು.