ಕರ್ನಾಟಕ

karnataka

ETV Bharat / city

ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್‌ ವ್ಯವಸ್ಥೆ: ಟೆಂಡರ್ ವಿಳಂಬಕ್ಕೆ ಹೈಕೋರ್ಟ್ ಅಸಮಾಧಾನ - ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ (Technology based Ambulance System) ಜಾರಿಗೆ ಹೊಸದಾಗಿ ಟೆಂಡರ್ ಕರೆಯಲು ಅನುಮೋದನೆ ನೀಡುವುದಕ್ಕೆ ಸಚಿವ ಸಂಪುಟ ವಿಳಂಬ ಮಾಡಿರುವುದಕ್ಕೆ ಹೈಕೋರ್ಟ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Technology based ambulance system
ಟೆಂಡರ್ ವಿಳಂಬಕ್ಕೆ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ

By

Published : Nov 10, 2021, 10:38 PM IST

ಬೆಂಗಳೂರು:ಸಂಚಾರ ದಟ್ಟಣೆ ನಡುವೆಯೂ ಶೀಘ್ರವಾಗಿ ರೋಗಿಗಳು ಅಥವಾ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ (Technology based Ambulance System) ಜಾರಿಗೆ ಹೊಸದಾಗಿ ಟೆಂಡರ್ ಕರೆಯಲು ಅನುಮೋದನೆ ನೀಡುವುದಕ್ಕೆ ಸಚಿವ ಸಂಪುಟ ವಿಳಂಬ ಮಾಡಿರುವುದಕ್ಕೆ ಹೈಕೋರ್ಟ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತು ಭಾರತ್ ಪುನರುತ್ಥಾನ ಟ್ರಸ್ಟ್ (Bharata Punarutthana Trust) ಸಲ್ಲಿಸಿರುವ ಪಿಐಎಲ್ ಅರ್ಜಿಯನ್ನು ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಟೆಂಡರ್ ವಿಳಂಬ ಮಾಡುತ್ತಿರುವ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರದ ಆಡಳಿತ ಹೇಗೆ ಎಂಬುದೇ ಗೊತ್ತಾಗುತ್ತಿಲ್ಲ. ಈ ಕಾರಣಕ್ಕಾಗಿಯೇ ಜನ ನ್ಯಾಯಾಲಯಕ್ಕೆ ಹೆಚ್ಚೆಚ್ಚು ಪಿಐಎಲ್‌ (PIL) ಸಲ್ಲಿಸುತ್ತಿದ್ದಾರೆ. ಸರ್ಕಾರವು ಸ್ವಂತ ಯೋಚನೆಯಲ್ಲೂ ಕೆಲಸ ಮಾಡಲ್ಲ. ಕೋರ್ಟ್ ಆದೇಶದ ಅನುಸಾರವಾಗಿಯೂ ಕೆಲಸ ಮಾಡುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿತು.

ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ್ ದಳವಾಯಿ ವಾದಿಸಿ, ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ ಜಾರಿಗೆ ಮೊದಲು ಕರೆದಿದ್ದ 1800 ಕೋಟಿ ರೂ. ಮೊತ್ತದ ಟೆಂಡರ್ ಅನ್ನು ಸರ್ಕಾರ ರದ್ದುಪಡಿಸಿತ್ತು. ಇದಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಆದೇಶ ಹಿಂಪಡೆದಿದ್ದ ಸರ್ಕಾರ ಹೊಸ ಟೆಂಡರ್ ಕರೆಯುವುದಾಗಿ ತಿಳಿಸಿತ್ತು. ಈವರೆಗೂ ಟೆಂಡರ್ ಕರೆದಿಲ್ಲ ಎಂಬ ವಿಚಾರವನ್ನು ನ್ಯಾಯಾಲಯಕ್ಕೆ ವಿವರಿಸಿದರು.

ಸರ್ಕಾರದ ಪರ ವಕೀಲರು ಮನವಿ ಮಾಡಿ, ಟೆಂಡರ್ ವಿಚಾರವನ್ನು ಸಚಿವ ಸಂಪುಟದ ಮುಂದಿದ್ದು, ಎರಡು ವಾರ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಸರ್ಕಾರದ ಪದೆ ಪದೇ ಕಾಲಾವಕಾಶ ಕೋರಿಕೆಗೆ ಬೇಸರ ವ್ಯಕ್ತಪಡಿಸಿದ ಪೀಠ, ಎಲ್ಲಾ ಪ್ರಕರಣಗಳಲ್ಲೂ ಸರ್ಕಾರ ಹೀಗೇ ಹೇಳುತ್ತಿದೆ. ಪ್ರತಿದಿನವೂ ನಾವು ಅಧಿಕಾರಿಗಳನ್ನು ನ್ಯಾಯಾಲಯಕ್ಕೆ ಕರೆಸಿ ಸೂಚನೆ ನೀಡಬೇಕೆ? ಸರ್ಕಾರದ ಈ ಧೋರಣೆ ಸರಿಯಲ್ಲ ಎಂದು ಹೇಳಿತು.

ಬಳಿಕ ಈ ಸಂಬಂಧ ಕ್ರಮ ಕೈಗೊಳ್ಳಲು ಎರಡು ವಾರ ಕಾಲಾವಕಾಶ ನೀಡಿದ ಪೀಠ, ಅಷ್ಟರಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ ವಿಚಾರಣೆ ಮುಂದೂಡಿತು.

ABOUT THE AUTHOR

...view details