ಕರ್ನಾಟಕ

karnataka

ETV Bharat / city

ಹಿಂದುಳಿದ ವರ್ಗವನ್ನು ಸೆಳೆಯುವ ಯತ್ನಕ್ಕೆ ಮುಂದಾದರೇ ವಿಪಕ್ಷ ನಾಯಕ ಸಿದ್ದರಾಮಯ್ಯ!? - 2023ರ ವಿಧಾನಸಭೆ ಚುನಾವಣೆ

ಪಕ್ಷ ಸಂಘಟನೆ ವಿಚಾರದಲ್ಲಿ ಸಾಕಷ್ಟು ಶ್ರಮಿಸುತ್ತಿರುವ ಕಾಂಗ್ರೆಸ್​ ನಾಯಕರು ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ವಿವಿಧ ನಾಯಕರನ್ನು ಒಗ್ಗೂಡಿಸಿ ಚರ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಕಾಲಾವಧಿ ಇರುವ ಸಂದರ್ಭದಲ್ಲೇ ಕಾಂಗ್ರೆಸ್ ನಾಯಕರು ಪೈಪೋಟಿಗೆ ಬಿದ್ದಂತೆ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿರುವುದು ಕುತೂಹಲ ಮೂಡಿಸಿದೆ..

Siddaramaiah
ಸಿದ್ದರಾಮಯ್ಯ

By

Published : Jul 10, 2021, 5:31 PM IST

ಬೆಂಗಳೂರು: ವಿವಿಧ ಸಮುದಾಯಗಳ ನಾಯಕರನ್ನು ಓಲೈಸುವ ಕಾರ್ಯಕ್ಕೆ ಮುಂದಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಹಿಂದುಳಿದ ವರ್ಗದ ನಾಯಕರನ್ನು ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ತಮ್ಮದೇ ನಾಯಕತ್ವದಲ್ಲಿ ಕೊಂಡೊಯ್ಯಲು ಪ್ರಯತ್ನ ನಡೆಸಿರುವ ಸಿದ್ದರಾಮಯ್ಯ, ಈಗಾಗಲೇ ಅಲ್ಪಸಂಖ್ಯಾತ ಸಮುದಾಯವನ್ನು ದೊಡ್ಡಮಟ್ಟದಲ್ಲಿ ತಮ್ಮ ವಿಶ್ವಾಸಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ.

ಅಹಿಂದ ವರ್ಗ ಸದಾ ಇವರೊಂದಿಗೆ ಇದೆ. ಇದೀಗ ಹಿಂದುಳಿದ ವರ್ಗವನ್ನು ಸಹ ತಮ್ಮ ವಿಶ್ವಾಸಕ್ಕೆ ಪಡೆಯುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಾವು ಮುಖ್ಯಮಂತ್ರಿಗಳಾಗಿ 2013 ರಿಂದ 18ರವರೆಗೆ ಕಾರ್ಯನಿರ್ವಹಿಸಿದ ಸಂದರ್ಭ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಿವಿಧ ಸಮುದಾಯಗಳ ಅಭಿವೃದ್ಧಿಗೆ ಹಮ್ಮಿಕೊಂಡ ಯೋಜನೆಗಳ ಕುರಿತು ಗಮನ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರದ ಸಾರಥ್ಯ ವಹಿಸುವ ಹಾಗೂ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಗಾದಿಗೇರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿರುವ ಅವರು, ಬಹಿರಂಗವಾಗಿ ಹೇಳಿಕೆ ನೀಡಲು ಸಾಧ್ಯವಾಗದೆ ಪ್ರತ್ಯೇಕವಾಗಿ ವಿವಿಧ ಸಮುದಾಯದ ಮುಖಂಡರನ್ನು ತಮ್ಮ ವ್ಯಾಪ್ತಿಗೆ ಸೆಳೆದುಕೊಳ್ಳುವ ಯತ್ನಕ್ಕೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಶಿವಾನಂದ ವೃತ್ತ ಸಮೀಪವಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಭೇಟಿನೀಡಿ ಸಮಾಲೋಚನೆ ನಡೆಸಿದರು. ಹಿಂದಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಆಧ್ಯಕ್ಷ, ಹಿರಿಯ ಪತ್ರಕರ್ತ ದ್ವಾರಕಾನಾಥ್, ವಿಧಾನ ಪರಿಷತ್ ಸದಸ್ಯ ರಮೇಶ್, ಮಾಜಿ ಸದಸ್ಯರಾದ ವೇಣುಗೋಪಾಲ, ಮುಖ್ಯಮಂತ್ರಿ ಚಂದ್ರು, ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹಾಗೂ ಕೆ.ಎಲ್. ಮಂಜುನಾಥ್ ಹಾಜರಿದ್ದರು.‌

ಇದನ್ನೂ ಓದಿ:ನಿವಾಸಕ್ಕೆ ಕೈ ನಾಯಕರನ್ನು ಕರೆಸಿಕೊಂಡು ಶಕ್ತಿ ಪ್ರದರ್ಶನ ಮಾಡುತ್ತಿದ್ದಾರಾ ಡಿಕೆಶಿ!?

ಕಾಂತರಾಜ್ ಅವರು ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಕುರಿತು ಮುಖಂಡರು ಚರ್ಚೆ ನಡೆಸಿದರು. ಇದರ ಜೊತೆಜೊತೆಗೆ ಮುಂಬರುವ ದಿನಗಳಲ್ಲಿ ಕಾಣಬಹುದಾದ ರಾಜಕೀಯ ಬೆಳವಣಿಗೆಗಳ ಕುರಿತು ಸಹ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಡಿಕೆಶಿ ಭೇಟಿ :ಮಾತೃವಿಯೋಗಕ್ಕೆ ಒಳಗಾಗಿರುವ ಸಚಿವ ಕೆ. ಗೋಪಾಲಯ್ಯ ಅವರ ಬೆಂಗಳೂರಿನ ಮಹಾಲಕ್ಷ್ಮಿಪುರದ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ವೇಳೆ ಶಾಸಕ ವಿ.ಮುನಿಯಪ್ಪ ಮತ್ತಿತರರು ಜತೆಗಿದ್ದರು.

ಪಕ್ಷ ಸಂಘಟನೆ ವಿಚಾರದಲ್ಲಿ ಸಾಕಷ್ಟು ಶ್ರಮಿಸುತ್ತಿರುವ ಕಾಂಗ್ರೆಸ್​ ನಾಯಕರು ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ವಿವಿಧ ನಾಯಕರನ್ನು ಒಗ್ಗೂಡಿಸಿ ಚರ್ಚಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಕಾಲಾವಧಿ ಇರುವ ಸಂದರ್ಭದಲ್ಲೇ ಕಾಂಗ್ರೆಸ್ ನಾಯಕರು ಪೈಪೋಟಿಗೆ ಬಿದ್ದಂತೆ ತಮ್ಮ ಶಕ್ತಿ ಪ್ರದರ್ಶನ ಮಾಡುತ್ತಿರುವುದು ಕುತೂಹಲ ಮೂಡಿಸಿದೆ.

ABOUT THE AUTHOR

...view details