ಕರ್ನಾಟಕ

karnataka

By

Published : Nov 19, 2020, 7:27 PM IST

Updated : Nov 19, 2020, 7:53 PM IST

ETV Bharat / city

ನಗರಸಭೆ-ಪುರಸಭೆಗಳಿಗೆ ನಡೆದಿದ್ದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಸಿಂಧು: ಸರ್ಕಾರದ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಅಕ್ಟೋಬರ್ 8ರಂದು ಅಧಿಸೂಚನೆ ಹೊರಡಿಸಿತ್ತು. ಆದರೀಗ ಆ ಅಧಿಸೂಚನೆಯನ್ನು ಹೈಕೋರ್ಟ್​ ರದ್ದುಪಡಿಸಿ ಅದೇಶ ಹೊರಡಿಸಿದೆ.

Highcourt
ಹೈಕೋರ್ಟ್​​​

ಬೆಂಗಳೂರು: ರಾಜ್ಯದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಈಗಾಗಲೇ ನಡೆದಿದ್ದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯೂ ಅಸಿಂಧುಗೊಂಡಿದೆ.

ರಾಜ್ಯದ 59 ನಗರಸಭೆ, 117 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ ಅಕ್ಟೋಬರ್ 8 ರಂದು ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಸ್ಥಳೀಯ ಸಂಸ್ಥೆಗಳ ಸದಸ್ಯರು 20ಕ್ಕೂ ಹೆಚ್ಚು ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸಿದೆ.

ಪೀಠ ತನ್ನ ತೀರ್ಪಿನಲ್ಲಿ, ರಾಜ್ಯ ಸರ್ಕಾರ ಮೀಸಲಾತಿ ನಿಗದಿ ವೇಳೆ ಆವರ್ತನಾ (ರೋಸ್ಟರ್) ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅಕ್ಟೋಬರ್ 8ರಂದು ಹೊರಡಿಸಿದ್ದ ಅಧಿಸೂಚನೆಯನ್ನೂ ರದ್ದುಪಡಿಸಿದೆ. ಹಾಗೆಯೇ ಮುಂದಿನ ನಾಲ್ಕು ವಾರಗಳಲ್ಲಿ ಸರ್ಕಾರ ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ರೂಪಿಸಿರುವ ಆವರ್ತನಾ ನಿಯಮಗಳನ್ನು ಪಾಲಿಸಿ ಹೊಸ ಅಧಿಸೂಚನೆ ಹೊರಡಿಸುವಂತೆಯೂ ನಿರ್ದೇಶಿಸಿದೆ.

ಏಕಸದಸ್ಯ ಪೀಠ ತೀರ್ಪು ಪ್ರಕಟಿಸಿದ ಬಳಿಕ ಸರ್ಕಾರದ ಪರ ವಕೀಲರು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದನ್ನು ಪರಿಗಣಿಸಿ, ತನ್ನ ತೀರ್ಪಿಗೆ 10 ದಿನಗಳ ಕಾಲ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ತನ್ನದೇ ತೀರ್ಪಿಗೆ 10 ದಿನಗಳವರೆಗೆ ತಡೆಯಾಜ್ಞೆ ನೀಡಿರುವುದರಿಂದ ಮುಂದಿನ 10 ದಿನಗಳ ಕಾಲ ಚುನಾವಣಾ ಪ್ರಕ್ರಿಯೆ ಮತ್ತು ಫಲಿತಾಂಶ ಯಥಾಸ್ಥಿತಿಯಲ್ಲಿ ಇರಲಿದೆ.

ಪ್ರಕರಣದ ಹಿನ್ನೆಲೆ:ಸರ್ಕಾರ ಮೀಸಲಾತಿ ಅಧಿಸೂಚನೆ ಪ್ರಕಟಿಸಿದ ಬಳಿಕ ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ವರ್ಗಕ್ಕೆ (ಎಸ್ಟಿ) ನಿಗದಿಪಡಿಸಿರುವ ಕ್ರಮ ಪ್ರಶ್ನಿಸಿ ಹೆಚ್.ವಿ.ಚಂದ್ರೇಗೌಡ ಸೇರಿ ಹಾಸನ ನಗರಸಭೆಯ 21 ಮಂದಿ ಸದಸ್ಯರು ರಿಟ್ ಅರ್ಜಿ ಸಲ್ಲಿಸಿದ್ದರು. ಅಂತೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪುರಸಭೆ, ದಾವಣಗೆರೆ ಜಿಲ್ಲೆಯ ಚನ್ನಗಿರಿ ಪುರಸಭೆ, ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಕ್ರಮ ಪ್ರಶ್ನಿಸಿ ಪ್ರತ್ಯೇಕ ತಕರಾರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ, ಅಕ್ಟೋಬರ್ 15ರಂದು ನಗರಸಭೆ ಮತ್ತು ಅಕ್ಟೋಬರ್ 19ರಂದು ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸಿದ ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಿತ್ತು.

ಈ ಆದೇಶಗಳನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅಕ್ಟೋಬರ್ 21ರಂದು ಹಿರಿಯ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿ, ಮೀಸಲಾತಿ ಅಧಿಸೂಚನೆಗೆ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿತ್ತು. ಅಲ್ಲದೆ ಚುನಾವಣೆ ನಡೆಸಲು ಸರ್ಕಾರಕ್ಕೆ ಅನುಮತಿಸಿತ್ತು. ಇದೇ ವೇಳೆ ಚುನಾವಣೆಯ ಫಲಿತಾಂಶ ಅರ್ಜಿಗಳ ಕುರಿತು ಹೈಕೋರ್ಟ್ ಹೊರಡಿಸುವ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿತ್ತು.

Last Updated : Nov 19, 2020, 7:53 PM IST

ABOUT THE AUTHOR

...view details