ಕರ್ನಾಟಕ

karnataka

ETV Bharat / city

ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು.. ಸಿಎಂ ಬಸವರಾಜ ಬೊಮ್ಮಾಯಿ ಕರೆ

ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ. ಹೀಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

By

Published : Aug 13, 2022, 2:15 PM IST

World Organ Donation Day
ಅಂಗಾಂಗ ದಾನ ದಿನಾಚರಣೆ

ಬೆಂಗಳೂರು: ಅಂಗಾಂಗ ದಾನ ಮಾನವೀಯತೆಯ ಕೆಲಸ. ಅಂಗಾಂಗಗಳನ್ನು ದಾನಕ್ಕೆ ಸಂಕಲ್ಪ ಮಾಡುವ ಮುಖಾಂತರ ಸಾವಿನ ನಂತರವೂ ಬದುಕು ನೀಡುವ ಸಾರ್ಥಕ ಕಾರ್ಯ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಮುಂಭಾಗ ಆಯೋಜಿಸಿದ್ದ ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ. ಹೀಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಾವಿನ ನಂತರವೂ ಬದುಕುವವನು ಸಾಧಕ:ವಿಜ್ಞಾನಿಗಳ, ವೈದ್ಯರ ಪರಿಶ್ರಮದಿಂದ ನಮ್ಮ ಸಾವಿನ ನಂತರ ಅಂಗಾಂಗಗಳನ್ನು ನೀಡುವ ಮೂಲಕ ಇತರರ ಜೀವವನ್ನು ಬದುಕಿಸಬಹುದಾಗಿದೆ. ಒಬ್ಬ ವ್ಯಕ್ತಿ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ 8 ಜೀವಗಳನ್ನು ಉಳಿಸಬಹುದು. ಚರ್ಮದಿಂದ ಹಿಡಿದು ಎಲ್ಲ ಅಂಗಾಂಗಳನ್ನು ದಾನ ಮಾಡಬಹುದು. ಸ್ವಾಮಿ ವಿವೇಕಾನಂದರು ಹೇಳಿದಂತೆ 'ಸಾಧಕನಿಗೆ ಸಾವು ಅಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ'. ಮಾನವ ಜನ್ಮ ಶ್ರೇಷ್ಠವಾದುದು. ಅಂಗಾಂಗ ದಾನ ಮೂಲಕ ಈ ಶ್ರೇಷ್ಠ ಜೀವವನ್ನು ಉಳಿಸಿದಂತಾಗುತ್ತದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ 18 ಅಂಗಾಂಗ ಮರುಪಡೆಯುವಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಿಮಾನ್ಸ್​​ನಲ್ಲಿ ಮೆದುಳು ದಾನ ಹಾಗೂ ಹುಬ್ಬಳ್ಳಿ ಕಿಮ್ಸ್​​ನಲ್ಲಿ ಮೂತ್ರಪಿಂಡ ದಾನಗಳನ್ನು ಮಾಡಬಹುದಾಗಿದೆ. ಇದು ಸರ್ಕಾರದ ದೊಡ್ಡ ಸಾಧನೆ. ಅಂಗಾಂಗ ದಾನ ಮಾನವೀಯತೆ ಕೆಲಸ ಎಂದರು.

ಅಂಗಾಂಗ ದಾನ ದಿನಾಚರಣೆ

ಮಾರ್ಕೋನಳ್ಳಿಯ ಕೃಷ್ಣಪ್ಪ, ನವೀನ ಕುಮಾರ್ ಇವರು ಅತ್ಯಂತ ಬಡಕುಟುಂಬದವರು. ಇವರ ಕುಟುಂಬದವರು ಮಗನನ್ನು ಅಪಘಾತದಲ್ಲಿ ಕಳೆದುಕೊಂಡಿದ್ದರೂ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಉದಾತ್ತ ಗುಣ ಮೆರೆದಿದ್ದಾರೆ. ಇವರ ಈ ಗುಣ ಎಲ್ಲರಿಗೂ ಅನುಕರಣೀಯ ಎಂದರು.

ಪುನೀತ್ ರಾಜ್‍ಕುಮಾರ್, ಸಂಜಾರಿ ವಿಜಯ್ ಅವರನ್ನು ನೆನೆದ ಸಿಎಂ:ಅಂಗಾಂಗ ದಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ, ದಿ.ನಟ ಪುನೀತ್ ರಾಜ್​ಕುಮಾರ್ ಮತ್ತು ದಿ.ನಟ ಸಂಚಾರಿ ವಿಜಯ್ ಅವರನ್ನು ನೆನೆದರು. ಇವರು ತಮ್ಮ ಕಣ್ಣುಗಳನ್ನು ದಾನ ಮಾಡಿ ಇತರರಿಗೆ ಬೆಳಕಾಗಿದ್ದಾರೆ ಎಂದು ಸ್ಮರಿಸಿದರು.

ಅಂಗಾಂಗ ದಾನ ದಿನಾಚರಣೆ

ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು.

ಅಂಗಾಂಗ ದಾನ ದಿನಾಚರಣೆ

ಇದಕ್ಕೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಅಂಗಾಂಗ ದಾನ ದಿನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮತ್ತು ಇತರರು ಉಪಸ್ಥಿತರಿದ್ದರು. ನಂತರ ವಿಧಾನಸೌಧ ಮಾರ್ಗ ಮಧ್ಯೆ ಸಾಗುವಾಗ ವಿದ್ಯಾರ್ಥಿಗಳೆಡೆಗೆ ಕೈ ಬೀಸಿ ಶುಭ ಕೋರಿದರು.

ಇದನ್ನೂ ಓದಿ:ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ... ಶಕ್ತಿಸೌಧದ ಮುಂದೆ ರಾರಾಜಿಸಿದ ರಾಷ್ಟ್ರಧ್ವಜ

ABOUT THE AUTHOR

...view details