ದಾವಣಗೆರೆ:ಮಹಾನಗರ ಪಾಲಿಕೆಯ ಚುನಾವಣೆಗೆ ಇನ್ನುಳಿದಿರುವುದು ಕೆಲವೇ ಕೆಲ ದಿನಗಳು ಮಾತ್ರ. ಕಾಂಗ್ರೆಸ್, ಬಿಜೆಪಿ ಪ್ರಚಾರ ಜೋರಾಗಿದೆ. ಕಮಲ ಅಭ್ಯರ್ಥಿಗಳ ಪರ ಘಟಾನುಘಟಿ ನಾಯಕರು ಪ್ರಚಾರಕ್ಕೆ ಇಳಿದರೆ, ಕಾಂಗ್ರೆಸ್ ಹುರಿಯಾಳುಗಳ ಪರ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
45 ವಾರ್ಡ್ಗಳ ಪೈಕಿ ಕಾಂಗ್ರೆಸ್ 44 ಸ್ಥಾನಗಳಲ್ಲಿ ಸ್ಪರ್ಧೆಗಿಳಿದಿದ್ದರೆ, ಬಿಜೆಪಿ ಎಲ್ಲಾ ವಾರ್ಡ್ಗಳಲ್ಲಿಯೂ ಕಣಕ್ಕಿಳಿದಿದೆ. ಇನ್ನು ಜೆಡಿಎಸ್, ಪಕ್ಷೇತರ ಅಭ್ಯರ್ಥಿಗಳು ಪ್ರಚಾರದಿಂದ ದೂರ ಉಳಿದಿಲ್ಲ. ಆಯಾ ಕ್ಷೇತ್ರಗಳಲ್ಲಿ ಮತದಾರರ ಮನಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಸಂಸದ ಜಿ. ಎಂ. ಸಿದ್ದೇಶ್ವರ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಕಮಲ ಹುರಿಯಾಳುಗಳ ಪರ ಮನೆ ಮನೆಗೆ ತೆರಳಿ ಮತಯಾಚಿಸಿದರೆ, ರೋಡ್ ಶೋ ಮಾಡುವ ಮೂಲಕ ಶಾಮನೂರು ಶಿವಶಂಕರಪ್ಪ ಕೈ ಉಮೇದುವಾರರ ಪರ ಬಿರುಸಿನ ಪ್ರಚಾರ ನಡೆಸಿದರು.
ಗಾಂಧಿನಗರದಲ್ಲಿ ಜಿ. ಡಿ. ಪ್ರಕಾಶ್ ಪರ ಶಾಮನೂರು ಶಿವಶಂಕರಪ್ಪ ರೋಡ್ ಶೋ ನಡೆಸಸಿ ಮತದಾರರ ಸೆಳೆಯುವ ಪ್ರಯತ್ನ ಮಾಡಿದರು. ಬೇರೆ ಬೇರೆ ಪಕ್ಷಗಳಿಂದ ಬಿಜೆಪಿಗೆ ಮುಖಂಡರನ್ನು ಬರ ಮಾಡಿಕೊಂಡ ಬಳಿಕ ಮಾತನಾಡಿದ ಸಂಸದ ಜಿ. ಎಂ. ಸಿದ್ದೇಶ್ವರ್, ನವೆಂಬರ್ 12 ರಂದು ಬಿಜೆಪಿಗೆ ಮತ ಹಾಕುವಂತೆ ಜನರನ್ನು ಸೆಳೆಯಿರಿ ಎಂದು ಕರೆ ನೀಡಿದರೆ, ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ, ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತದಿಂದ ದಾವಣಗೆರೆ ಜನರು ಬೇಸತ್ತಿದ್ದಾರೆ. ಹಾಗಾಗಿ, ಈ ಬಾರಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.