ಮಂಗಳೂರು:ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಸಿಎಂ ಯೋಗಿ ಆದಿತ್ಯನಾಥ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು ನಗರದ ಕಾಂಗ್ರೆಸ್ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.
ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ತೊಂದರೆ ಕೊಟ್ಟ ಈ ಹ್ಯೇಯ ಕೃತ್ಯ ಖಂಡಿಸಿದ ಪ್ರತಿಭಟನಾಕಾರರು ಯೋಗಿ ಆದಿತ್ಯನಾಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ. ಈ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ನೂರು ವರ್ಷಗಳ ಹಿಂದೆ ದಲಿತರು, ದುರ್ಬಲರು ಹಾಗೂ ಹಿಂದುಳಿದವರ ಮೇಲೆ ಎಸಗುತ್ತಿದ್ದ ಶೋಷಣೆಯಂತೆಯೇ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಅದು ಮರುಕಳಿಸುತ್ತಿದೆ ಎಂದು ಆರೋಪಿಸಿದರು.
ಇತ್ತೀಚೆಗೆ ಉತ್ತರಪ್ರದೇಶದ ಗ್ರಾಮವೊಂದರಲ್ಲಿ ಪಂಚಾಯಿತಿ ಅಧ್ಯಕ್ಷರೊಬ್ಬರು 10 ಜನರನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. ಬಿಹಾರದಲ್ಲಿ ಮೂವರನ್ನು ಹೊಡೆದು ಸಾಯಿಸಲಾಗಿದೆ. ಇದೇ ರೀತಿ ದೇಶದ ನಾನಾ ಭಾಗಗಳಲ್ಲಿ ಇಂತಹ ಘಟನೆಗಳು ಜರುಗುತ್ತಿವೆ. ಧರ್ಮದ ಹೆಸರಿನಲ್ಲೂ ಹಿಂಸೆಗಳು ನಡೆಯುತ್ತಿವೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಸಮಾಜಕ್ಕೂ ನೂರಾರು ಸೌಲಭ್ಯಗಳನ್ನು ನೀಡಿದೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಸಲಾಗಿತ್ತು. ಆದರೆ, ಬಿಜೆಪಿ ಸರ್ಕಾರ ಅದೇ ದುರ್ಬಲ ವರ್ಗದವರನ್ನು ಶೋಷಿಸುತ್ತಿದೆ. ಗುಂಡಿನ ದಾಳಿಗೆ ಬಲಿಯಾದ 10 ಮಂದಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಹೋಗಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಲಾಗಿದೆ. ಅಲ್ಲದೆ, ನೀರು ಮತ್ತು ವಿದ್ಯುತ್ ಸಂಪರ್ಕ ನೀಡದೇ ಪ್ರವಾಸಿ ಮಂದಿರದಲ್ಲಿ ಕೂಡಿಹಾಕಿದ್ದರು. ಇದು ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.