ಮಂಗಳೂರು :ನಗರದಲ್ಲಿ ಗುರುವಾರ ನಡೆದ ಪೌರತ್ವ ಗಲಭೆಗೆ ಸಂಬಂಧಿಸಿದಂತೆ ಎಸ್ಡಿಪಿಐನ ಇಬ್ಬರು ಮುಖಂಡರ ವಿರುದ್ಧ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಪ್ರಕರಣ ದಾಖಲಾಗಿದೆ.
ಸಿಎಬಿ ಮತ್ತು ಎನ್ಆರ್ಸಿ ಕಾಯ್ದೆಗೆ ಸಂಬಂಧಿಸಿದಂತೆ ವಾಟ್ಸ್ಆ್ಯಪ್ ಮೂಲಕ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ, ಎಸ್ಡಿಪಿಐ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿ ಸಾಹುಲ್ ಎಸ್. ಎಚ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಹುಟ್ಟುವಂತೆ ಮಾಡಿ, ಜನರನ್ನು ತಪ್ಪು ದಾರಿಗೆಳೆದು ಉದ್ರೇಕಿಸಲಾಗಿದೆ. ಸರ್ಕಾರವನ್ನು ದ್ವೇಷ ಭಾವನೆಯಿಂದ ಕಾಣಲಾಗಿದೆ. ಜನಸಮೂಹದ ಮಧ್ಯೆ ಭಯ ಉಂಟುಮಾಡಿ ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕದಡಿದ್ದಾರೆ. ಧರ್ಮಗಳು ಮತ್ತು ಸರ್ಕಾರದ ವಿರುದ್ಧ ಉದ್ದೇಶಪೂರ್ವಕವಾಗಿ ದೊಂಬಿ ನಡೆಸಲು ಉದ್ದೇಶಿಸಿದ್ದರು ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 124 ಎ, 153, 34ರಂತೆ ದೇಶದ್ರೋಹ ಪ್ರಕರಣ ದಾಖಲಾಗಿದೆ.