ಮೂಡುಬಿದಿರೆ (ಮಂಗಳೂರು): ಕಾನೂನು, ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮೂಡುಬಿದಿರೆ ತಾಲೂಕಿನ ನಿಡ್ಡೋಡಿ ಗ್ರಾಮದ ಬ್ರಹ್ಮರಸ್ಥಾನಕಟ್ಟೆ ಪ್ರದೇಶದಲ್ಲಿ ನಂದಿನಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕಿಂಡಿ ಅಣೆಕಟ್ಟು ಪರಿಶೀಲನೆ ನಡೆಸಿದರು.
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಕಿಂಡಿ ಅಣೆಕಟ್ಟು ಪರಿಶೀಲಿಸಿ ಬಳಿಕ ಮಾತನಾಡಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ 1,400 ಎಕರೆ ಜಾಗದಲ್ಲಿ ವೆಂಟೆಡ್ ಡ್ಯಾಂ ನಿರ್ಮಿಸಲು ಸರ್ವೇ ಕಾರ್ಯ ನಡೆಸಲಾಗಿದ್ದು, ಸುಮಾರು 4 ಸಾವಿರ ಕೋಟಿ ರೂಪಾಯಿ ಅನುದಾನದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದ್ದು, ಅನುದಾನ ಒದಗಿದ ಕೂಡಲೇ ವೆಂಟೆಡ್ ಡ್ಯಾಂ ನಿರ್ಮಾಣದ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು.