ಕರ್ನಾಟಕ

karnataka

By

Published : Jul 23, 2021, 2:27 PM IST

ETV Bharat / city

ಆಷಾಢ ಮಾಸದ ರಜಾ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿಲ್ಲ: ಜಿಲ್ಲಾಧಿಕಾರಿ

ಆಷಾಢ ಮಾಸದ ಅಮಾವಾಸ್ಯೆ, ಶುಕ್ರವಾರ, ಚಾಮುಂಡಿ ವರ್ಧಂತಿ ಹಾಗೂ ಆಷಾಢ ಮಾಸದಲ್ಲಿ ಬರುವ ಎಲ್ಲ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಸಾರ್ವಜನಿಕರು ಚಾಮುಂಡಿ ಬೆಟ್ಟಕ್ಕೆ ಆಗಮಿಸಬಾರದು ಎಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಚಾಮುಂಡಿ ಬೆಟ್ಟ
ಚಾಮುಂಡಿ ಬೆಟ್ಟ

ಮೈಸೂರು: ಕೋವಿಡ್ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನ, ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾ ತ್ರಿಪುರ ಸುಂದರಿ ದೇವಾಲಯಗಳಿಗೆ ಆಷಾಢ ಮಾಸದ ಅಮಾವಾಸ್ಯೆ, ಶುಕ್ರವಾರ, ಚಾಮುಂಡಿ ವರ್ಧಂತಿ ಹಾಗೂ ಆಷಾಢ ಮಾಸದಲ್ಲಿ ಬರುವ ಎಲ್ಲ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಅವರು ಆದೇಶಿಸಿದ್ದಾರೆ.

ನಿಷೇಧಿತ ಸಮಯದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆದು ಬಂದಿರುವ ರೂಢಿ ಸಂಪ್ರದಾಯದಂತೆ ಜರುಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ದೇವಾಲಯದ ಅಧಿಕಾರಿಗಳು, ಅರ್ಚಕರು ಸಿಬ್ಬಂದಿ ಮಾತ್ರ ದೇವಾಲಯದ ಆವರಣದಲ್ಲಿ ನಡೆಸಲು ಅನುಮತಿ ನೀಡಲಾಗಿದೆ.

ನಿಷೇಧಿತ ಅವಧಿಯಲ್ಲಿ ಮೆಟ್ಟಿಲು ಮಾರ್ಗದಿಂದ ಚಾಮುಂಡಿಬೆಟ್ಟಕ್ಕೆ ಭಕ್ತರು ಮತ್ತು ಸಾರ್ವಜನಿಕರು ಬರುವುದನ್ನು ನಿಷೇಧಿಸಲಾಗಿದೆ. ಮತ್ತು ದೇವಾಲಯಗಳಲ್ಲಿ ದಾಸೋಹ, ಊಟದ ವ್ಯವಸ್ಥೆ ಮಾಡುವುದು ಅಥವಾ ಪ್ರಸಾದ ವಿತರಣೆ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ನಿಗದಿತ ಪ್ರವೇಶ ದಿನಗಳಂದು ಪೂರ್ತಿದಿನ ಹಾಗೂ ಇತರ ದಿನಗಳಂದು ಸಂಜೆ 6 ಗಂಟೆಯ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಚಾಮುಂಡಿ ಬೆಟ್ಟದ ಗ್ರಾಮಸ್ಥರ ವಾಹನಗಳು ಮತ್ತು ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಇತರ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.

ಇನ್ನು ಚಾಮುಂಡಿ ಬೆಟ್ಟದ ಗ್ರಾಮಸ್ಥರು ವಾಹನ ಬಳಸುವ ಅನಿವಾರ್ಯ ಸಂದರ್ಭದಲ್ಲಿ ವಾಸಸ್ಥಳ ದೃಢೀಕರಣ ಚೀಟಿಯನ್ನು ಇಟ್ಟುಕೊಂಡಿರಬೇಕು. ದೇವಾಲಯದಲ್ಲಿ ನಡೆದು ಬಂದಿರುವ ಸಂಪ್ರಾದಾಯ ಮತ್ತು ಪದ್ಧತಿಯಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ.

ಹಾಗಾಗಿ ಇದಕ್ಕೆ ಅಗತ್ಯ ಇರುವವರು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರವು ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು ಹಾಗೂ ಚಾಮುಂಡಿಬೆಟ್ಟದ ಗ್ರಾಮಸ್ಥರಿಗೆ ಮಾತ್ರ ದೇವಾಲಯದಲ್ಲಿ ಪೂಜಾ ಕೈಂಕರ್ಯಗಳು ನಡೆಯುವ ಸಂದರ್ಭದಲ್ಲಿ ಆಗಮಿಸಿದಲ್ಲಿ, ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನ ಮೇಲೆ ಪ್ರವೇಶಕ್ಕೆ ಅನುಮತಿಸಿದೆ.

ದೇವಾಲಯದ ರೂಢಿ ಸಂಪ್ರದಾಯದಂತೆ ಮಹಾ ಮಂಗಳಾರತಿ ಮುಕ್ತಾಯಗೊಂಡ ತಕ್ಷಣ ದೇವಾಲಯವನ್ನು ಮುಚ್ಚಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details