ಮೈಸೂರು : ಕೇರಳದ ವಯನಾಡು ಪ್ರದೇಶದಲ್ಲಿ ಹೆಚ್ಚಿದ ಮಳೆಯಿಂದಾಗಿ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರುತ್ತಿದೆ. ಜಲಾಶಯ ತುಂಬಲು ಇನ್ನು 2 ಅಡಿಯಷ್ಟೇ ಬಾಕಿ ಇದ್ದು, 30 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ಜಲಾಶಯದ ಮುಂಭಾಗದಲ್ಲಿರುವ ಸಂಪರ್ಕ ಸೇತುವೆ ಮುಳುಗಡೆಯಾಗಿ ಬಿದರಹಳ್ಳಿ ಹಾಗೂ ಎನ್. ಬೇಗೂರು ಗ್ರಾಮ ಪಂಚಾಯತ್ಗೆ ಸೇರಿದ 50ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಚಾರ ಸ್ಥಗಿತಗೊಂಡಿದೆ.
ಈ ಭಾಗದ ಜನರಿಗೆ ಕಬಿನಿ ಜಲಾಶಯದ ಅಣೆಕಟ್ಟು ಮೇಲ್ಭಾಗದ ರಸ್ತೆಯಲ್ಲಿ ಸಂಚರಿಸುವಂತೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಕಬಿನಿ ಜಲಾಶಯದಿಂದ ಹೆಚ್ಚು ನೀರನ್ನು ಯಾವುದೇ ಕ್ಷಣದಲ್ಲಿ ನದಿಗೆ ಬಿಡುವ ಸಾಧ್ಯತೆಯಿದೆ. ಇದರಿಂದ ಪ್ರವಾಸಿಗರಿಗೆ ಜಲಾಶಯ ವೀಕ್ಷಣೆಗೆ ಅವಕಾಶವಿಲ್ಲ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
16 ಕಾಲು ಮಂಟಪ ಮುಳುಗಡೆ: ಕಬಿನಿ ಜಲಾಶಯದಿಂದ ಕಪಿಲ ನದಿಗೆ ಹೆಚ್ಚು ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದ ನಂಜನಗೂಡು ಬಳಿಯ ಶ್ರೀಕಂಠೇಶ್ವರ ದೇವಸ್ಥಾನದ ಸ್ನಾನ ಘಟ್ಟದ ಸಮೀಪದ ಐತಿಹಾಸಿಕ 16 ಕಾಲು ಮಂಟಪ ಮುಳುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ನೀರನ್ನು ನದಿಗೆ ಬಿಡುವ ಸಾಧ್ಯತೆ ಇರುವುದರಿಂದ ನಂಜನಗೂಡು ಪಟ್ಟಣದ ಪಕ್ಕದಲ್ಲಿರುವ ತೋಪಿನ ಬೀದಿ, ಕುರುಬರ ಕೇರಿ, ಗೌರಿಗಟ್ಟ, ಹಳ್ಳದಕೇರಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ನಂಜನಗೂಡು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಪ್ರವಾಹ ಉಂಟಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರನ್ನು ಸ್ಥಳಾಂತರಿಸಲಾಗಿತ್ತು.