ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಬಹು ನಿರೀಕ್ಷಿತ ಹಾಗೂ ನೈಜ ಘಟನೆ ಆಧಾರಿತ ಸಿನಿಮಾ 19.20.21 ನಾಳೆ ತೆರೆ ಕಾಣಲಿದೆ. ಕರಾವಳಿ ಭಾಗದಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡು ಬಂದಿದ್ದು, ಕಥೆ ಕೊನೆಗೂ ರಿವೀಲ್ ಆಗಿದೆ.
2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯಿಂದ ಬಂಧಿತರಾದ ವಿಠಲ್ ಮಲೆಕುಡಿಯ ಹಾಗೂ ಆತನ ತಂದೆ ಲಿಂಗಣ್ಣ ಮಲೆಕುಡಿಯ ಕಾನೂನು ಹೋರಾಟದ ಕಥೆಯೇ ಈ ಸಿನಿಮಾ. ನಕ್ಸಲರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಂದೆ ಮಗನನ್ನು ಬಂಧಿಸಲಾಗಿತ್ತು. ಆ ಸಮಯದಲ್ಲಿ ’ವಿಠಲ್ ಮಲೆಕುಡಿಯ‘ಮಂಗಳೂರಿನ ವಿವಿಯಲ್ಲಿ ಪತ್ರಿಕೋದ್ಯಮ ವಿದ್ಯಾಭ್ಯಾಸ ಮಾಡುತ್ತಿದ್ದರು. ವಿಠಲ್ ಪರೀಕ್ಷೆ ಬರೆಯುವಾಗ ಪೊಲೀಸರು ಕೈಯಲ್ಲಿದ್ದ ಕೋಳ ಕೂಡ ತೆಗೆದಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ತಮ್ಮ ಮೇಲಿನ ಆರೋಪದ ವಿರುದ್ಧ ಸತತ 9 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ್ದ ವಿಠಲ್ ಅವರಿಗೆ 2021ರಲ್ಲಿ ಕೋರ್ಟ್ ನಿರ್ದೋಷಿ ಎಂದು ತೀರ್ಪು ನೀಡಿತ್ತು.
ವಿಠಲ್ ಮಲೆಕುಡಿಯ ಅವರ ಈ ಹೋರಾಟದ ಕಥೆಯೇ 19.20.21 ಸಿನಿಮಾ. ಆಡಳಿತ ವ್ಯವಸ್ಥೆಯ ಅವ್ಯವಸ್ಥೆ ಹಾಗೂ ವಿಠಲ್ ಅವರ ಕಾನೂನು ಹೋರಾಟದ ರೋಚಕ ಕಥೆಯನ್ನು ಸೋಷಿಯಲ್ ಥ್ರಿಲ್ಲರ್ ಕಹಾನಿಯೊಂದಿಗೆ ತೆರೆ ಮೇಲೆ ತರುತ್ತಿದ್ದಾರೆ ನಿರ್ದೇಶಕ ಮಂಸೋರೆ. ಚಿತ್ರದಲ್ಲಿ ವಿಠಲ್ ಮಲೆಕುಡಿಯ ಪಾತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ.ವಿ ನಟಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್, ಸಂಪತ್, ಎಂ ಡಿ ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣವೇ ಈ ಚಿತ್ರದಲ್ಲಿದೆ.