ಕರ್ನಾಟಕ

karnataka

ETV Bharat / jagte-raho

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ... 40ಕ್ಕೂ ಹೆಚ್ಚು ಯೋಧರು ಹುತಾತ್ಮ

ಶ್ರೀನಗರ: ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಸಿಆರ್​​ಪಿಎಫ್​ ಯೋಧರು ಚಲಿಸುತ್ತಿದ್ದ ವಾಹನದ ಮೇಲೆ ಉಗ್ರರು ಐಇಡಿ (ಸುಧಾರಿತ ಸ್ಫೋಟಕ) ಬಳಕೆ ಮಾಡಿ ಸ್ಫೋಟಗೊಳಿಸಿರುವ ಪರಿಣಾಮ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

By

Published : Feb 14, 2019, 9:50 PM IST

ಕೃಪೆ: ANI

ಶ್ರೀನಗರದ ಅವಂತಿಪುರ್​ ಪುಲ್ವಾಮ್​ ಮಾರ್ಗ ಮಧ್ಯೆ ಯೋಧರು ಬಸ್​​ನಲ್ಲಿ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇನ್ನು ಘಟನೆಯಲ್ಲಿ ಅನೇಕ ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ದಾಳಿಯ ಹೊಣೆಯನ್ನ ಜೈಷ್​-ಇ ಮೊಹಮ್ಮದ್​ ಉಗ್ರ ಸಂಘಟನೆ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಯನ್ನು ರವಾನಿಸಲಾಗಿದ್ದು, ಇಡೀ ಪ್ರದೇಶವನ್ನು ಈಗ ಸುತ್ತುವರಿಯಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಬಡಗಾಂವ್‌ನಲ್ಲಿ ನಿನ್ನೆಯಷ್ಟೇ ಭದ್ರತಾ ಪಡೆಗಳು ಎನ್‌ಕೌಂಟರ್‌ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು. ಭಾರತೀಯ ಯೋಧರು ಸರ್ಜಿಕಲ್​ ಸ್ಟ್ರೈಕ್​ ನಡೆಸಿದ ಮೇಲೆ ಯೋಧರ ಮೇಲೆ ನಡೆದ ಅತಿ ದೊಡ್ಡ ದಾಳಿ ಇದಾಗಿದೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ, ಸ್ಕಾರ್ಪಿಯೋ ಕಾರಿನಲ್ಲಿ ಬಂದ ಉಗ್ರರು ಸಿಆರ್​​ಪಿಎಫ್ ವಾಹನದ ಮೇಲೆ ಗ್ರೇನೆಡ್​ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 40ಕ್ಕೂ ಹೆಚ್ಚು ಯೋಧರು ಮೃತಪಟ್ಟು 40 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 13 ಯೋಧರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಇತ್ತ ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​ ನಾಳೆ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಯೋಧರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡುವಂತೆ ತಿಳಿಸಿರುವುದಾಗಿ ಅವರ ಹೇಳಿದ್ದಾರೆ.

ABOUT THE AUTHOR

...view details