ಹೈದರಾಬಾದ್:ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಭಾರತ ಮುಂಬರುವ ಶ್ರೀಲಂಕಾ ಪ್ರವಾಸವನ್ನು ಮುಂದೂಡಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆಟ ನಡೆಸಲು ಸಾಧ್ಯವಾಗುವುದಿಲ್ಲ ಎಂದು ಎರಡೂ ಮಂಡಳಿಗಳು ಹೇಳಿವೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆಟಗಾರರು ಶ್ರೀಲಂಕಾ ಪ್ರವಾಸ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶ್ರೀಲಂಕಾ ಕ್ರಿಕೆಟ್ಗೆ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.
ಈ ತಿಂಗಳ ಕೊನೆಯಲ್ಲಿ ಭಾರತ ಶ್ರೀಲಂಕಾ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಟೂರ್ನಿಯನ್ನು ಮುಂದೂಡಲಾಗುತ್ತಿದೆ ಎಂದು ಐಸಿಸಿ ಟ್ವೀಟ್ ಮಾಡಿದೆ.
ಭಾರತವು ಮೂರು ಏಕದಿನ ಮತ್ತು 3 ಟಿ-20 ಪಂದ್ಯಗಳನ್ನು ಜೂನ್ ಅಂತ್ಯದಿಂದ ಪ್ರಾರಂಭಿಸಿ ಜುಲೈವರೆಗೆ ಶ್ರೀಲಂಕಾದಲ್ಲಿ ಆಡಲಿದೆ ಎಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಪಂದ್ಯಗಳ ದಿನಾಂಕಗಳನ್ನು ಅಂತಿಮಗೊಳಿಸಿರಲಿಲ್ಲ. ಕೋವಿಡ್-19 ಸಾಂಕ್ರಾಮಿಕದಿಂದಾಗಿ 3 ಏಕದಿನ ಮತ್ತು 3 ಟಿ-20 ಪಂದ್ಯಗಳನ್ನು ಒಳಗೊಂಡ ಸರಣಿಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು ಶ್ರೀಲಂಕಾ ಕ್ರಿಕೆಟ್ ಸಂಸ್ಥೆ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾರತೀಯ ಆಟಗಾರರು ಇನ್ನೂ ತರಬೇತಿ ಪುನಾರಂಭಿಸದ ಕಾರಣ ಟೂರ್ನಿ ರದ್ದಾಗುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿತ್ತು.