ಬಾಗಲಕೋಟೆ:ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯಲ್ಲೂ ಸನ್ನದ್ದವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಸೂಚಿಸಿದರು.
ನಗರದ ಯುಕೆಪಿಯ ಸಂಗಮ ಸಭಾಂಗಣದಲ್ಲಿ ನಡೆದ ಕುಡಿಯುವ ನೀರು, ಕೋವಿಡ್ ಹಾಗೂ ಇತರೆ ಅಭಿವೃದ್ದಿ ಕಾರ್ಯಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿ ಚೆಕ್ಪೋಸ್ಟ್ಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಪ್ರತಿದಿನ 4 ಸಾವಿರ ಸ್ಯಾಂಪಲ್ ತೆಗೆದುಕೊಳ್ಳಬೇಕು. ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರು ಮಾಸ್ಕ್ ಹಾಕದಿದ್ದಲ್ಲಿ ದಂಡ ಹಾಕಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಈಗಾಗಲೇ 54 ಸಾವಿರ ಡೋಸ್ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರಲ್ಲಿ ಯಾವುದೇ ರೀತಿಯ ಆರೋಗ್ಯದ ಸಮಸ್ಯೆ ಕಂಡುಬಂದಿಲ್ಲ. ಕೆಎಸ್ಆರ್ಟಿಸಿಯ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಿ. ಯಾವುದೇ ರೀತಿಯ ವಯೋಮಿತಿ ಇರುವುದಿಲ್ಲ. ನಿರಾಶ್ರಿತರು, ಭಿಕ್ಷುಕರಿಗೂ ಸಹ ಕೊರೊನಾ ಲಸಿಕೆ ನೀಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಪ್ರಾರಂಭವಾಗುತ್ತಿದ್ದು, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವಂತೆ ಉಸ್ತುವಾರಿ ಕಾರ್ಯದರ್ಶಿಗಳು ತಿಳಿಸಿದಾಗ, ಇಲ್ಲಿಯವರೆಗೆ ಎಲ್ಲಿಯೂ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಜೂನ್ ಮಾಹೆಯವರೆಗೆ ಸಮಸ್ಯೆ ಇರುವುದಿಲ್ಲ. ಎಲ್ಲ ತಾಲೂಕಿನ ತಹಶೀಲ್ದಾರ್ರಿಗೆ 50 ಲಕ್ಷ ರೂ. ನೀರಿಗಾಗಿ ನೀಡಲಾಗಿದೆ. ಆರ್ಡಿಪಿಆರ್ನಲ್ಲಿ ಟ್ಯಾಂಕರ್ ಸರಬರಾಜಿಗಾಗಿ 80 ಲಕ್ಷ ರೂ.ಗಳ ಅನುದಾನವಿದೆ. ಜಿಎಲ್ಬಿಸಿ, ಜಿಆರ್ಬಿಸಿ, ಎಂಎಲ್ಬಿಸಿಯಲ್ಲಿ ನೀರು ಬಿಡುಗಡೆಯಾಗಿದೆ. ಬಾಗಲಕೋಟೆ ನಗರಕ್ಕೂ ನೀರಿನ ಸಮಸ್ಯೆ ಇಲ್ಲವೆಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ತಿಳಿಸಿದರು.