ಬೆಂಗಳೂರು:ಇಂದು ಮಾಧ್ಯಮಗಳು ಸಮಾಜದ ಅಭಿವೃದ್ದಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಅವರಿಂದಲೇ ಕ್ಷೇತ್ರದ ಸಮಸ್ಯೆಗಳನ್ನು ತಿಳಿದು ಬಗೆಹರಿಸುತ್ತಿದ್ದೇನೆ ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪತ್ರಕರ್ತರ ಸಂಘದ ಆಶ್ರಯದಲ್ಲಿ ದೇವನಹಳ್ಳಿಯ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಸಮಸ್ಯೆಗಳನ್ನು ಸುದ್ದಿ ರೂಪದಲ್ಲಿ ನೀಡಿ ಗಮನ ಸೆಳೆಯುವ ಪತ್ರಕರ್ತರೂ ಕೂಡ ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಪತ್ರಕರ್ತರು ಸಮಾಜದ ಸಮಸ್ಯೆಗಳ ಬಗ್ಗೆ ವಸ್ತುನಿಷ್ಟವಾದ ವರದಿ ನೀಡಿದರೆ ಜನಪ್ರತಿನಿಧಿಗಳು, ಸರ್ಕಾರ ಕೂಡ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಸಹಕಾರಿಯಾಗುತ್ತದೆ ಎಂದ ಅವರು, ತಮ್ಮ ಕ್ಷೇತ್ರದಲ್ಲಿ ಪತ್ರಿಕಾ ವರದಿಗಳಿಂದ ಸಾಕಷ್ಟು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು.
ಪತ್ರಕರ್ತರು ಜನರ ಮಧ್ಯೆ ಇರುವುದರಿಂದ ಅವರಿಗೆ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆಯೂ ಅರಿವು ಇರುತ್ತದೆ. ಇಂತಹ ಸಮಸ್ಯೆಗಳ ಕುರಿತು ಪತ್ರಕರ್ತರು ಪ್ರತಿಕೆಗಳ ಮೂಲಕ ಗಟ್ಟಿ ಧ್ವನಿಯಾಗಬೇಕಿದೆ. ಈ ಜಿಲ್ಲೆಯ ಪತ್ರಕರ್ತರು ಉತ್ತಮ ಕೆಲಸ ಮಾಡುತ್ತಿದ್ದು, ಅವರ ಸಮಸ್ಯೆಗಳನ್ನು ನಮಗೆ ತಿಳಿಸಿದ್ದಾರೆ. ಅದನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ನಿಸರ್ಗ ನಾರಾಯಣಸ್ವಾಮಿ ಭರವಸೆ ನೀಡಿದರು.