ಕರ್ನಾಟಕ

karnataka

By

Published : Jun 28, 2020, 4:36 PM IST

ETV Bharat / state

ಸೋಂಕಿತ ವಿದ್ಯಾರ್ಥಿ ಜೊತೆ ಪರೀಕ್ಷೆ ಬರೆದ 18 ವಿದ್ಯಾರ್ಥಿಗಳ ವರದಿ ನೆಗೆಟಿವ್: ಸಚಿವ ಸುರೇಶ್ ​ಕುಮಾರ್

ಹಾಸನ ಜಿಲ್ಲೆ ಅರಕಲಗೂಡಲ್ಲಿ ಕೊರೊನಾ ಸೋಂಕಿತ ವಿದ್ಯಾರ್ಥಿ ಜೊತೆಗೆ ಪರೀಕ್ಷೆ ಬರೆದಿದ್ದ ಎಲ್ಲಾ 18 ಎಸ್​​ಎಸ್​​​ಎಲ್​​ಸಿ ವಿದ್ಯಾರ್ಥಿಗಳ ಕೋವಿಡ್​ ವರದಿ ನೆಗೆಟಿವ್​ ಬಂದಿದ್ದು, ನಿರಾತಂಕವಾಗಿ ಮುಂದಿನ ಪರೀಕ್ಷೆ ಬರಿಯಿರಿ ಎಂದು ಶಿಕ್ಷಣ ಸಚಿವರು ಆತ್ಮಸ್ಥೈರ್ಯ ತುಂಬಿದ್ದಾರೆ.

18 students kovid report negative
ವರದಿ ನೆಗೆಟಿವ್

ಬೆಂಗಳೂರು: ಆರೋಗ್ಯ ಇಲಾಖೆಯ ಸಲಹೆಯಂತೆ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ನಿರಾತಂಕವಾಗಿ ನಡೆಯುತ್ತಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ಗಣಿತ ಪರೀಕ್ಷೆಗೆ ಹಾಜರಾಗಿದ್ದ ಕೊರೊನಾ ಸೋಂಕಿತ ವಿದ್ಯಾರ್ಥಿಯೊಬ್ಬನ ಜೊತೆ ಪರೀಕ್ಷೆ ಬರೆದಿದ್ದ 18 ವಿದ್ಯಾರ್ಥಿಗಳು ಹಾಗೂ ಒಬ್ಬ ಪರೀಕ್ಷಾ ಮೇಲ್ವಿಚಾರಕರ ಪೈಕಿ ಯಾರೊಬ್ಬರಿಗೂ ಕೋವಿಡ್ ಸೋಂಕು ತಗುಲಿಲ್ಲವೆಂದು ವೈದ್ಯಕೀಯ ತಪಾಸಣೆ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲವೆಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಪರೀಕ್ಷಾ ಕೊಠಡಿಗೆ ಬೀಗ:
ಕೋವಿಡ್ ಸೋಂಕಿತ ವಿದ್ಯಾರ್ಥಿ ಪರೀಕ್ಷೆಗೆ ಹಾಜರಾದ ಕೊಠಡಿಯನ್ನು ಮುಚ್ಚಲಾಗಿದ್ದು, ಸೋಂಕು ನಿವಾರಕ ಕ್ರಮಗಳನ್ನು ಈಗಾಗಲೇ ಕಟ್ಟುನಿಟ್ಟಾಗಿ ತೆಗೆದುಕೊಳ್ಳಲಾಗಿದೆ. ಈ ಕೇಂದ್ರದಲ್ಲಿ ಕೋವಿಡ್ ಸೋಂಕಿತ ವಿದ್ಯಾರ್ಥಿಯನ್ನು ಹೊರತುಪಡಿಸಿ ಇದೇ ಕೊಠಡಿಯಲ್ಲಿ ನಿನ್ನೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳೆಲ್ಲರೂ ನಾಳೆಯಿಂದ ಎಂದಿನಂತೆ ಪರೀಕ್ಷೆ ಬರೆಯಲಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸೋಂಕಿತ ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಮುಂದುವರೆದಿದ್ದು, ಆತನೂ ಸಹ ಸ್ವಲ್ಪ ಜ್ವರ ಹೊರತುಪಡಿಸಿ ಬೇರಾವ ಗುಣಲಕ್ಷಣಗಳನ್ನು ಹೊಂದಿರದೇ ಸುರಕ್ಷಿತವಾಗಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಆರೋಗ್ಯ ಇಲಾಖೆ ಸ್ಪಷ್ಟನೆ:
ಈಗಾಗಲೇ ರಾಜ್ಯಾದ್ಯಂತ ಕೋವಿಡ್ ಸೋಂಕು ಹೊಂದಿದ 25 ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಪ್ರಸ್ತುತ ನಡೆಯುತ್ತಿರುವ ಎಸ್​​ಎಸ್​​ಎಲ್​​ಸಿ ಪರೀಕ್ಷೆಗಳನ್ನು ಬರೆಯಲು ಇವರೆಲ್ಲರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಯಾವುದೇ ರೋಗ ಲಕ್ಷಣಗಳಿಲ್ಲದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ನಡೆಸುವ ರ‍್ಯಾಂಡಮ್​ ಟೆಸ್ಟ್ ನಲ್ಲಿ ಕೋವಿಡ್ ಸೋಂಕು ಹರಡಿರುವುದು ದೃಢಪಟ್ಟಲ್ಲಿ ಅಂತಹ ವಿದ್ಯಾರ್ಥಿಯ ಸುತ್ತಮುತ್ತ ಕುಳಿತು ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಬಾಕಿ ಉಳಿದ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಬಹುದೇ ಎಂಬ ಬಗ್ಗೆ ಆರೋಗ್ಯ ಇಲಾಖೆಯ ಸ್ಪಷ್ಟೀಕರಣ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ, ಪರೀಕ್ಷಾ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗೂ ಕೋವಿಡ್ 19 ಸೋಂಕು ದೃಢಪಟ್ಟಿದ್ದಲ್ಲಿ ಆರೋಗ್ಯ ಇಲಾಖೆಯ ಸಲಹೆಯ ಮೇರೆಗೆ ಆತ/ಆಕೆಯ ಜೊತೆ ಪರೀಕ್ಷೆ ಬರೆದಿದ್ದ ಇತರೆ ವಿದ್ಯಾರ್ಥಿಗಳಿಗೆ ಎಂದಿನಂತೆ ಸುರಕ್ಷಿತವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಪ್ರತಿ ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿ ಹಾಗೂ ಡೆಸ್ಕ್ ಗಳ ನಡುವೆ ಆರು ಅಡಿ ಅಂತರವಿರುವಂತೆ ಕ್ರಮ ವಹಿಸಿ ಅಂತಹ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಶಿಕ್ಷಣ ಇಲಾಖೆ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆಯನ್ನು ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ್ದು ಯಾರೂ ಸಹ ವಿಚಲಿತರಾಗದೇ, ಕೇವಲ ತಮ್ಮ ಓದಿನ ಬಗ್ಗೆ ಮನಸ್ಸನ್ನು ಕೇಂದ್ರೀಕರಿಸಬೇಕು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕೆಂದು ವಿದ್ಯಾರ್ಥಿಗಳಿಗೆ ಸಚಿವರು ಸಲಹೆ ನೀಡಿದ್ದಾರೆ.
ಯಾವುದೇ ಪೋಷಕರು ಆತಂಕಕ್ಕೊಳಗಾಗದೇ, ತಮ್ಮ ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ತೆಗೆದುಕೊಂಡಿರುವ ಈ ಕ್ರಮದ ಕುರಿತು ಭರವಸೆಯೊಂದಿಗೆ ತಮ್ಮ ಮಕ್ಕಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡುವಂತೆ ಅವರು ಮನವಿ ಮಾಡಿದ್ದಾರೆ.

ABOUT THE AUTHOR

...view details