ಬೆಂಗಳೂರು:ಆಲಮಟ್ಟಿ-ಪೆನ್ನಾರ್ ನದಿ ಜೋಡಣೆ ಯೋಜನೆ ಬಗ್ಗೆ ಈಗಾಗಲೇ ಕರ್ನಾಟಕ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟೀಯ ಜಲ ಅಭಿವೃದ್ಧಿ ಸಂಸ್ಥೆಯು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಪ್ರಕ್ರಿಯೆ ಮುಂದುವರೆಸಬಾರದು ಎಂದು ಕರ್ನಾಟಕ ಪ್ರತಿಪಾದಿಸಿತು. ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರ ಅಧ್ಯಕ್ಷತೆಯಲ್ಲಿ ರಾಷ್ಟೀಯ ಜಲ ಅಭಿವೃದ್ಧಿ ಸಂಸ್ಥೆಯ 36ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ನದಿ ಜೋಡಣೆ ವಿಶೇಷ ಸಮಿತಿ (SCILR) 20ನೇ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭಾಗವಹಿಸಿ ರಾಜ್ಯದ ನಿಲುವುಗಳನ್ನು ಪ್ರತಿಪಾದಿಸಿದರು.
ಕೃಷ್ಣಾ ಮತ್ತು ಕಾವೇರಿ ಕಣಿವೆಯಲ್ಲಿ ಮಹಾನದಿ ಮತ್ತು ಗೋದಾವರಿ ಕಣಿವೆ ನದಿ ಜೋಡಣೆಯ ಮೂಲಕ ನೀರು ತಿರುವುಗೊಳಿಸುವ ಯೋಜನೆಯಲ್ಲಿ ಕರ್ನಾಟಕದ ಪಾಲನ್ನು ಕಡಿತಗೊಳಿಸಲಾಗಿದೆ ಎಂದು ಸಚಿವರು ಸಭೆಯ ಗಮನಕ್ಕೆ ತಂದರು. 2010ರಿಂದಲೂ ಕರ್ನಾಟಕ ಈ ಅನ್ಯಾಯವನ್ನು ಸರಿಪಡಿಸುವಂತೆ ಕೇಂದ್ರ ಸರ್ಕಾರ ಮತ್ತು NWDAಯನ್ನು ಕೋರುತ್ತಿದೆ. ಈ ನಿಲುವನ್ನು ಕರ್ನಾಟಕದ ಮುಖ್ಯಮಂತ್ರಿಯವರು ದಕ್ಷಿಣ ರಾಜ್ಯಗಳ ಪರಿಷತ್ತಿನ ಸಭೆಗಳಲ್ಲಿ ಬಲವಾಗಿ ಪ್ರತಿಪಾದಿಸಿದ್ದಾರೆ ಎಂದು ಸಭೆಗೆ ತಿಳಿಸಿದರು.