ಕರ್ನಾಟಕ

karnataka

By

Published : Mar 23, 2023, 10:11 PM IST

ETV Bharat / state

ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ: ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂ ಲಂಚ ಪಡೆದ ಆರೋಪದಲ್ಲಿ ಎಸಿಬಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಸತ್ಯನಾರಾಯಣ ರಾವ್ ಅರ್ಜಿ ಇತ್ಯರ್ಥಗೊಳಿಸಿದ ಕೋರ್ಟ್​. ​

allegedly-receiving-bribe-for-providing-special-facility-in-central-jail
ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ: ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿ ಇತ್ಯರ್ಥ

ಬೆಂಗಳೂರು:ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಶಶಿಕಲಾ ಅವರಿಗೆ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಎರಡು ಕೋಟಿ ರೂ. ಲಂಚ ಪಡೆದ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿದ್ದ ಎಫ್‌ಐಆರ್ ರದ್ದು ಕೋರಿ ನಿವೃತ್ತ ಡಿಜಿಪಿ ಸತ್ಯನಾರಾಯಣ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

ತಮ್ಮ ವಿರುದ್ಧ ಎಸಿಬಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಸತ್ಯನಾರಾಯಣ ರಾವ್ 2018 ರಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ.ಹೊಸಮನಿ ಅವರ ಪೀಠ, ಪ್ರಕರಣ ಸಂಬಂಧ ರಾಜ್ಯ ಸರ್ಕಾರವು 2021ರ ಡಿಸೆಂಬರ್​ 30 ರಂದು ಹೊರಡಿಸಿದ ಆದೇಶದಲ್ಲಿ ಅರ್ಜಿದಾರರನ್ನು ನಿರಪರಾಧಿ ಎಂಬುದಾಗಿ ಹೇಳಿದೆ.

ಜತೆಗೆ ಈ ಸಂಬಂಧ ತನಿಖೆ ನಡೆಸಿರುವ ನಿಖಾಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಅರ್ಜಿದಾರರ ಹೆಸರಿಲ್ಲ. ಇತರೆ ಇಬ್ಬರ ವಿರುದ್ಧ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಅದ್ದರಿಂದ ಈ ಅರ್ಜಿಯನ್ನು ಮುಂದುವರೆಸುವ ಅಗತ್ಯವಿಲ್ಲ. ಅದರಂತೆ ಅರ್ಜಿ ಇತ್ಯರ್ಥಪಡಿಸಲಾಗುವುದು ಎಂದು ನ್ಯಾಯಪೀಠ ತಿಳಿಸಿತು. ಅಲ್ಲದೆ, ತಮ್ಮ ವಿರುದ್ಧ ಸರ್ಕಾರ ಯಾವುದಾದರೂ ಕ್ರಮ ಜರುಗಿಸಿದ ಪಕ್ಷದಲ್ಲಿ ಅರ್ಜಿದಾರರು ಸೂಕ್ತ ನ್ಯಾಯಾಲಯದ ಮೊರೆ ಹೋಗಲು ಸ್ವತಂತ್ರರಿದ್ದಾರೆ ಎಂದು ಆದೇಶದಲ್ಲಿ ನ್ಯಾಯಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ :ಪೊಲೀಸ್ ಸಿಬ್ಬಂದಿಯ ಅವ್ಯವಹಾರ ಸಹಿಸಲ್ಲ: ಪ್ರತಾಪ್ ರೆಡ್ಡಿ ಎಚ್ಚರಿಕೆ

ಪ್ರಕರಣದ ಹಿನ್ನೆಲೆ ಏನು? :ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಸೌಲಭ್ಯ ಒದಗಿಸಲು ಎರಡು ಕೋಟಿ ಲಂಚ ಪಡೆಯಲಾಗಿದೆ ಎಂದು 2017 ರಲ್ಲಿ ಅಂದಿನ ರಾಜ್ಯ ಬಂಧೀಖಾನೆ ಇಲಾಖೆ ಡಿಐಜಿಯಾಗಿದ್ದ ಡಿ ರೂಪ ಆರೋಪಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಅವರನ್ನು ಸರ್ಕಾರ ನೇಮಿಸಿತ್ತು. ವಿಚಾರಣೆ ಪೂರ್ಣಗೊಳಿಸಿದ್ದ ವಿನಯ್ ಕುಮಾರ್, 2017ರ ಅಕ್ಟೋಬರ್ 21 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಿದ್ದರು.

ಆ ವರದಿಯನ್ನು 2018 ರ ಫೆಭ್ರವರಿ 26 ರಂದು ಸಮ್ಮತಿಸಿದ್ದ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಕರಣ ಕುರಿತು ತನಿಖೆ ನಡೆಸುವಂತೆ ಎಸಿಬಿಗೆ ನಿರ್ದೇಶನ ನೀಡಿತ್ತು. ಅದರಂತೆ ಎಸಿಬಿ ಪೊಲೀಸರು ಮಾರ್ಚ 3 ರಂದು ಎಫ್‌ಐಆರ್ ದಾಖಲಿಸಿದ್ದರು. ಅದನ್ನು ರದ್ದುಪಡಿಸುವಂತೆ ಕೋರಿ 2018 ರಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಸತ್ಯನಾರಾಯಣ ರಾವ್, ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ತಾನು ಯಾವುದೇ ಲಂಚ ಪಡೆದಿಲ್ಲ ಎಂದು ಸಮರ್ಥಿಸಿಕೊಂಡಿದ್ದರು. ಈ ಅರ್ಜಿ ಇದೀಗ ವಿಲೇವಾರಿ ಮಾಡಲಾಗಿದೆ.

ಇದನ್ನೂ ಓದಿ:ಆಟೋ ಚಾಲಕರ ಜೊತೆ ಸಂವಾದ: ಆಟೋ ಚಾಲನೆ ಮಾಡಿ ಭರವಸೆ ನೀಡಿದ ಡಿ ಕೆ ಶಿವಕುಮಾರ್

ABOUT THE AUTHOR

...view details