ಬೆಂಗಳೂರು:ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಬಂದರುಗಳು ಹಾಗೂ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಂದಿಸಿದ್ದಾರೆಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ವಿಚಾರ ಕುರಿತು ಸಿಎಂ ಜೊತೆ ಜಿಲ್ಲೆಯ ಜನಪ್ರತಿನಿಧಿಗಳ ಸಭೆ ನಡೆಯಿತು. ಸಿಎಂ ಜೊತೆ ಸಭೆಯ ನಂತರ ಮಾತನಾಡಿದ ಸಂಸದ ಅನಂತಕುಮಾರ್ ಹೆಗಡೆ, ಉತ್ತರ ಕರ್ನಾಟಕದ ಕೈಗಾರಿಕಾ ವಲಯ ಮತ್ತು ಉಳಿದ ವ್ಯಾಪಾರ-ವ್ಯವಹಾರ ಚೆನ್ನಾಗಿ ನಡೆಯಬೇಕು ಎನ್ನುವ ದೃಷ್ಟಿಯಿಂದ ಕಾರವಾರ, ಗೇಣಿ ಬೇಲಿಕೆರೆ, ಕುಮಟಾ, ಹೊನ್ನಾವರ ಸೇರಿ ಜಿಲ್ಲೆಯ ಎಲ್ಲಾ ಮೀನುಗಾರಿಕೆ ಮತ್ತು ಆರ್ಥಿಕ ಬಂದರು ಅಭಿವೃದ್ಧಿಪಡಿಸಲು ಮನವಿ ಮಾಡಿದ್ದೆವು. ಅದಕ್ಕಾಗಿ ಮುಖ್ಯಮಂತ್ರಿ ಅವರು ಇಂದು ಸಭೆ ಕರೆದು ನಮ್ಮ ಬೇಡಿಕೆ ಬಗ್ಗೆ ಹೆಚ್ಚಿನ ಕಾಳಜಿ ತೋರಿಸಿದ್ದಾರೆ. ಲಕ್ಷಾಂತರ ಕೋಟಿ ರೂ.ಗಳ ಯೋಜನೆ ಇದಾಗಿದ್ದು, ಕೇಂದ್ರ ಸರ್ಕಾರ ಕೂಡ ಖಂಡಿತ ಯೋಜನೆಗೆ ಕೈಜೋಡಿಸಲಿದೆ ಎಂದು ತಿಳಿಸಿದರು. ಖಾಸಗಿ ಸಹಭಾಗಿತ್ವದಲ್ಲಿ ಕೆಲಸ ಆರಂಭಿಸಲಾಗುತ್ತದೆ. ಇದಕ್ಕೆ ಹೆಚ್ಚಿನ ವೇಗ ನೀಡಬೇಕಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಇದರ ಜೊತೆಗೆ ಉತ್ತರ ಕರ್ನಾಟಕ ಮತ್ತು ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿದೇಶಿ ಕಂಪನಿಗಳನ್ನು ಕರೆತಂದು, ಅವರ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸಬೇಕು. ಪ್ರವಾಸೋದ್ಯಮ ಬೆಳೆಯಬೇಕು ಎನ್ನುವ ಕಾರಣಕ್ಕೆ ಹೊಸ ನೀತಿ ತರಲು ಅವಕಾಶ ಕೇಳಿದ್ದೇವೆ. ಅದಕ್ಕೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದರಿಂದ ಕರ್ನಾಟಕದ ಪ್ರವಾಸೋದ್ಯಮ ನಕ್ಷೆಯನ್ನು ನಾವು ಖಂಡಿತ ಬದಲಿಸಲು ಸಾಧ್ಯವಿದೆ ಎಂದು ಸಂಸದರು ಅಭಿಪ್ರಾಯಪಟ್ಟರು.