ಬೆಂಗಳೂರು: ಅಫೆಕ್ಸ್ ಬ್ಯಾಂಕ್ ಅವ್ಯವಹಾರದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡದ ಕಾರಣ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಧರಣಿ ನಡೆಸಿದರು.
ಜೆಡಿಎಸ್ ಶಾಸಕರಾದ ಹೆಚ್.ಡಿ. ರೇವಣ್ಣ, ಎ.ಮಂಜುನಾಥ್ ಸೇರಿದಂತೆ ಮತ್ತಿತರರು ಅಫೆಕ್ಸ್ ಬ್ಯಾಂಕ್ನಲ್ಲಿ ನಡೆದಿದೆ ಎನ್ನಲಾದ 462 ಕೋಟಿ ಗೂ. ಅಧಿಕ ಮೊತ್ತದ ಅವ್ಯವಹಾರ ಕುರಿತು ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ರು. ಈ ವಿಚಾರ ನಿಲುವಳಿ ಸೂಚನೆಯಡಿ ಬರುವುದಿಲ್ಲ. ಬೇರೊಂದು ರೂಪದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದು ಸ್ಪೀಕರ್ ಭರವಸೆ ನೀಡಿದರು. ಆಗ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ನಿಲುವಳಿಯಡಿ ಬರುವುದಿಲ್ಲ ಎಂದ ಮೇಲೆ ಮತ್ತೆ ಚರ್ಚೆಗೆ ಕೊಡುವುದೇಕೆ? ಸರ್ಕಾರ ಇದನ್ನು ಯಾವ ರೀತಿ ಪರಿಭಾವಿಸಬೇಕು ಎಂದು ಪ್ರಶ್ನಿಸಿದರು. ಸಚಿವರ ಆಕ್ಷೇಪವನ್ನು ಪರಿಗಣಿಸಿದ ಸ್ಪೀಕರ್, ನಿಯಮ 69ರ ಅಡಿ ಸಂಜೆ ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದು ತಿಳಿಸಿದರು. ಆದರೆ ಇದನ್ನು ಕೇಳದ ಹೆಚ್.ಡಿ. ರೇವಣ್ಣ ಹಾಗೂ ಜೆಡಿಎಸ್ ಸದಸ್ಯರು, ನಿಲುವಳಿ ಸೂಚನೆಯ ಪೂರ್ವಭಾವಿ ಪ್ರಸ್ತಾಪಕ್ಕೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದರು. ಸ್ಪೀಕರ್ ಅದಕ್ಕೆ ಒಪ್ಪದಿದ್ದಾಗ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ಸಭಾಧ್ಯಕ್ಷರು ಹೇಳಿದ್ದಾರೆ. ಧರಣಿ ಕೈಬಿಡಿ ಎಂದು ಕಾಂಗ್ರೆಸ್ ಸದಸ್ಯರು ಸಲಹೆ ನೀಡಿದ್ರು.