ಕರ್ನಾಟಕ

karnataka

By ETV Bharat Karnataka Team

Published : Dec 26, 2023, 5:51 PM IST

ETV Bharat / state

ಹೊಸ ತಂಡದೊಂದಿಗೆ ನಾಳೆ ಬಿ.ವೈ.ವಿಜಯೇಂದ್ರ ಮೊದಲ ಸಭೆ: ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳ ಆಯ್ಕೆಗೆ ಚಾಲನೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಳೆ ಪಕ್ಷದ ರಾಜ್ಯ ಪದಾಧಿಕಾರಿಗಳೊಂದಿಗೆ ಮೊದಲ ಬಾರಿಗೆ ಸಭೆ ನಡೆಸುವರು.

ನಾಳೆ ಬಿ.ವೈ.ವಿಜಯೇಂದ್ರ ಮೊದಲ ಸಭೆ
ನಾಳೆ ಬಿ.ವೈ.ವಿಜಯೇಂದ್ರ ಮೊದಲ ಸಭೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕವಾದ ಬಳಿಕ ಮೊದಲ ಬಾರಿಗೆ ಬುಧವಾರ ಪಕ್ಷದ ರಾಜ್ಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೊಡುವ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾತನಾಡಿದ ಪಿ.ರಾಜೀವ್, ಜಿಲ್ಲೆಗಳಿಗೆ ತೆರಳಿ ಜಿಲ್ಲೆಯ ಎಲ್ಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಆಯಾ ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತೀರ್ಮಾನ ರಾಜ್ಯಾಧ್ಯಕ್ಷರದು ಎಂದರು.

ಡಿಸೆಂಬರ್ 28ರಂದು ರಾಜ್ಯ ಪ್ರಮುಖರ ಸಭೆಯನ್ನು ರಾಜ್ಯಾಧ್ಯಕ್ಷರು ಕರೆದಿದ್ದು, ಆ ಸಭೆಯಲ್ಲಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾಜಿ ಸಚಿವರು, ಪ್ರಮುಖರು ಭಾಗವಹಿಸಲಿದ್ದಾರೆ. ಅವರ ಅಭಿಪ್ರಾಯ ಪಡೆದು ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷದ ಸಂಘಟನೆ ಹಾಗೂ ಲೋಕಸಭಾ ಚುನಾವಣೆ ಎದುರಿಸುವುದರ ಕುರಿತು ಎಲ್ಲರ ಸಲಹೆ ಪಡೆಯಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ತಳಮಟ್ಟದಲ್ಲಿ ಪಕ್ಷ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ರೈತರ ಸಾವಿನ ಸುದ್ದಿಗಳು ಮತ್ತೆ ಮತ್ತೆ ಕೇಳಿಬರುತ್ತಿರುವುದು ಬಹಳಷ್ಟು ಆಘಾತಕಾರಿ. ರೈತ ಸಮುದಾಯ ಧೈರ್ಯ ವಹಿಸಬೇಕು. ಬಿಜೆಪಿ, ರೈತ ಸಮುದಾಯಕ್ಕೆ ಆತ್ಮವಿಶ್ವಾಸವನ್ನು ತುಂಬಲಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಇರುವಾಗಲೆಲ್ಲ ಆತ್ಮಹತ್ಯೆಗಳು ಹೆಚ್ಚಾಗುತ್ತವೆ. ಇಲ್ಲಿವರೆಗೆ ರೈತರಿಗೆ ಭರವಸೆ ಮೂಡಿಸುವ ಯಾವ ಹೇಳಿಕೆಯನ್ನೂ ಸರಕಾರ ಕೊಟ್ಟಿಲ್ಲ. ಸಚಿವರು ರೈತರ ಜೀವ, ಬದುಕಿನ ಜೊತೆ ಚೆಲ್ಲಾಟವಾಡುವ ಭಾವನೆಯಿಂದ ಹೊರಬರಬೇಕು. ಈ ಸರಕಾರ ರೈತರಿಗೆ ತಕ್ಷಣವೇ ಪರಿಹಾರ ಮೊತ್ತವನ್ನು ವಿತರಿಸಬೇಕು ಎಂದು ಈ ಸಂದರ್ಭದಲ್ಲಿ ಪಿ.ರಾಜೀವ್​ ಒತ್ತಾಯಿಸಿದರು.

ಇದನ್ನೂ ಓದಿ:ಲೋಕಸಭಾ ಚುನಾವಣೆಯ ವೀಕ್ಷಕರಾಗಿ ವಿಜಯಪುರಕ್ಕೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ

ABOUT THE AUTHOR

...view details