ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸೂಚನೆಯ ಮೇರೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳ ತಡೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟರು. ಉಪಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆಯಲ್ಲಿ ಪಾಲಿಕೆ ಕ್ರಮ ಕೈಗೊಂಡು ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳು ಕಂಡರೆ 50 ಸಾವಿರ ರೂ. ದಂಡ ನಿಗದಿ ಮಾಡಿದೆ. ಯಾವುದೇ ಕಾರಣಕ್ಕೂ ಅಳವಡಿಕೆಗೆ ಅವಕಾಶವಿಲ್ಲ. ದಂಡದೊಂದಿಗೆ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಹುತೇಕ ಕಡೆ ಈಗಾಗಲೇ ಪಾಲಿಕೆ ಸಿಬ್ಬಂದಿ ತೆರವು ಕಾರ್ಯ ಕೈಗೊಂಡಿದ್ದಾರೆ. ನಗರದಾದ್ಯಂತ ಅಳವಡಿಸಲಾಗಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಇತ್ಯಾದಿಗಳನ್ನು ತೆರವುಗೊಳಿಸುವ ಜವಾಬ್ದಾರಿ ಸಂಬಂಧಪಟ್ಟ ಜಂಟಿ ಆಯುಕ್ತ ಮತ್ತು ಮುಖ್ಯ ಎಂಜಿನಿಯರ್ ಅವರದ್ದಾಗಿರುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದರು.
ನಗರದಲ್ಲಿ ಒಂದೇ ಒಂದು ಅನಧಿಕೃತ ಪ್ಲೆಕ್ಸ್ ಕಂಡುಬಂದರೆ, ಪಾಲಿಕೆ ಹಾಗೂ ರಾಜ್ಯ ಸರಕಾರ ತಲಾ 50 ಸಾವಿರ ರೂ.ಗಳನ್ನು ಠೇವಣಿ ಇಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಕೂಡಲೇ ತುರ್ತು ಕ್ರಮ ಕೈಗೊಂಡು ಅನಧಿಕೃತ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಹಾಗು ಎಲ್ಇಡಿ ಇನ್ನಿತರೆ ಜಾಹಿರಾತು ಫಲಕಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಈ ಕುರಿತು ಅಂಕಿ-ಅಂಶದ ದಾಖಲೆಗಳ ಸಮೇತ ಅನುಪಾಲನಾ ವರದಿಯನ್ನು ಸಲ್ಲಿಸಲು ಮುಖ್ಯ ಆಯುಕ್ತರು ಸೂಚಿಸಿದ್ದರು.