ಬೆಂಗಳೂರು :ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ವಾರ್ಡ್ಗಳ ಮರು ವಿಂಗಡನೆ ಹಿನ್ನೆಲೆ ಅಧ್ಯಯನಕ್ಕಾಗಿ ಆಯೋಗ ರಚಿಸಿದ್ದೇವೆ. ಈ ಕುರಿತು ಅಧಿಸೂಚನೆ ಹೊರಡಿಸಲು ಅನುಮತಿ ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಇದರಿಂದಾಗಿ ಬಿಬಿಎಂಪಿ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಈಗಾಗಲೇ ಅವಧಿ ಪೂರ್ಣಗೊಂಡಿರುವ ಬಿಬಿಎಂಪಿಗೆ ತುರ್ತಾಗಿ ಚುನಾವಣೆ ನಡೆಸುವಂತೆ ಕೋರಿ ಪಾಲಿಕೆಯ ಮಾಜಿ ಸದಸ್ಯ ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಪೀಠಕ್ಕೆ ಮಾಹಿತಿ ನೀಡಿ, ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆ-1976 ಕ್ಕೆ ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು 198 ರಿಂದ 225 ಕ್ಕೆ ಹೆಚ್ಚಿಸಿ (ಗರಿಷ್ಠ 150 ಮೀರದಂತೆ) ಸುಗ್ರೀವಾಜ್ಞೆ ಹೊರಡಿಸಲಾಗಿದೆ. ವಾರ್ಡ್ ಮರು ವಿಂಗಡನೆ ಬಗ್ಗೆ ಅಧ್ಯಯನ ನಡೆಸಲು ಆಯೋಗ ರಚಿಸಲಾಗಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲು ಅನುಮತಿ ಕೋರಿ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ವಿವರಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಚುನಾವಣಾ ಆಯೋಗದ ಪರ ವಕೀಲರು, ಪಾಲಿಕೆಗೆ ಚುನಾವಣೆ ನಡೆಸಲು ಈಗಾಗಲೇ 198 ವಾರ್ಡ್ಗಳ ಮೀಸಲು ಪಟ್ಟಿ ಮತ್ತು ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಚುನಾವಣೆಯ ಬಹುತೇಕ ಕಾರ್ಯ ಪೂರ್ಣಗೊಂಡಿದೆ. ಈ ಹಂತದಲ್ಲಿ ಸರ್ಕಾರ ವಾರ್ಡ್ ಸಂಖ್ಯೆ ಹೆಚ್ಚಿಸಲು ಮುಂದಾಗಿರುವುದು ಸರಿ ಕಾಣುತ್ತಿಲ್ಲ. ಮುಖ್ಯವಾಗಿ ಚುನಾಯಿತ ಸದಸ್ಯರ ಅವಧಿ ಪೂರ್ಣಗೊಳ್ಳುವುದರ ಒಳಗೆ ಚುನಾವಣೆ ನಡೆಸಬೇಕೆಂಬ ನಿಯಮ ಉಲ್ಲಂಘನೆಯಾಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸರ್ಕಾರ ಕನಿಷ್ಟ ಒಂದು ವರ್ಷ ಬಿಬಿಎಂಪಿಗೆ ಚುನಾವಣೆ ನಡೆಸಬಾರದು ಎಂದು ಉದ್ದೇಶಿಸಿರುವಂತೆ ಕಾಣುತ್ತಿದೆ ಎಂದಿತು.
ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಸರ್ಕಾರಕ್ಕೆ, ಬಿಬಿಎಂಪಿಗೆ ಚುನಾವಣೆ ನಡೆಸುವ ಆಲೋಚನೆ ಇದ್ದಂತಿಲ್ಲ. ಈಗ ವಾರ್ಡ್ ಹೆಚ್ಚಿಸಲು 6 ತಿಂಗಳು ತೆಗೆದುಕೊಳ್ಳುತ್ತದೆ. ಮುಂದಿನ ವರ್ಷ ಜನಗಣತಿ ಇದೆ. ಆಗ ಯಾರಾದರೂ ಬಿಬಿಎಂಪಿಯ ವಾರ್ಡ್ ಮರು ವಿಂಗಡನೆ 2021 ರ ಜನಗಣತಿ ಪ್ರಕಾರ ನಡೆಸಬೇಕಿತ್ತು ಎಂದು ನ್ಯಾಯಾಲಯದ ಮೆಟ್ಟಿಲೇರಿ ಆಕ್ಷೇಪಿಸಬಹುದು. ಆಗ ಮತ್ತೊಂದು ಸಮಸ್ಯೆ ಉದ್ಭವಿಸಲಿದೆ. ಹೀಗಾಗಿ, ಪಾಲಿಕೆಗೆ ತುರ್ತಾಗಿ ಚುನಾವಣೆ ನಡೆಸುವಂತೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.
ವಾದ ಪ್ರತಿವಾದ ಆಲಿಸಿದರ ಪೀಠ, ಸರ್ಕಾರ ವಾರ್ಡ್ ಸಂಖ್ಯೆ ಹೆಚ್ಚಿಸಲು ಕಾಯ್ದೆಗೆ ತಿದ್ದುಪಡಿ ತಂದಿರುವ ಸುಗ್ರೀವಾಜ್ಞೆ ಪ್ರಶ್ನಿಸಿ, ಅರ್ಜಿ ತಿದ್ದುಪಡಿ ಮಾಡಿ ಸಲ್ಲಿಸಲು ಅರ್ಜಿದಾರರ ಪರ ವಕೀಲರಿಗೆ ಅವಕಾಶ ನೀಡಿ ವಿಚಾರಣೆಯನ್ನು ಅಕ್ಟೋಬರ್ 20 ಕ್ಕೆ ಮುಂದೂಡಿತು.