ಬೆಂಗಳೂರು: ನಗರದ ಮಲ್ಲತ್ತಹಳ್ಳಿ ಕೆರೆ ಪ್ರದೇಶದ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಮಾಡುವುದಕ್ಕಾಗಿ ಒಳಚರಂಡಿ ನೀರು ಘಟಕದಿಂದ ಮಳೆನೀರು ಕಾಲುವೆಯನ್ನು ತಿರುಗಿಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿರುವ ಬೆಂಗಳೂರು ಮಹಾನಗರ ಪಾಲಿಕೆ, ಮುಖ್ಯಮಂತ್ರಿ ನವ ನಗರೋತ್ಥಾನ ಯೋಜನೆಯಡಿ ಕೆರೆಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದಾಗಿ ಹೈಕೋರ್ಟ್ಗೆ ತಿಳಿಸಿದೆ.
ನಗರದ ಕೆರೆಗಳ ಸಂರಕ್ಷಣೆ ಮತ್ತು ಪುನಶ್ಚೇತನ ಸಂಬಂಧ ಸಿಟಿಜನ್ ಆ್ಯಕ್ಷನ್ ಗ್ರೂಪ್ ಮತ್ತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಬಿಬಿಎಂಪಿ ತಿಳಿಸಿದೆ.
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ಹಾಜರಾಗಿ, ಬಿಬಿಎಂಪಿ ಮಳೆ ನೀರು ನಿರ್ವಹಣಾ ವಿಭಾಗದ ಮುಖ್ಯ ಇಂಜಿನಿಯರ್ ಬಸವರಾಜ್ ಆರ್. ಕಬಡೆ ಅವರು ಸಲ್ಲಿಸಿರುವ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಮಲ್ಲತ್ತಹಳ್ಳಿ ಕೆರೆ ಪ್ರದೇಶದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು 2019ರ ಸೆ.20ರಂದು ಸರ್ಕಾರ ನೀಡಿರುವ ನಿರ್ದೇಶನಗಳ ಅನುಸಾರ ಕೈಗೊಳ್ಳಲಾಗಿದೆ. ಆ ಆದೇಶದಲ್ಲಿ ಸರ್ಕಾರ ಮುಖ್ಯಮಂತ್ರಿ ನವ ನಗರೋತ್ಥಾನ ಯೋಜನೆಯಡಿಯಲ್ಲಿ ಮಲ್ಲತ್ತಹಳ್ಳಿ ಕೆರೆ ಅಭಿವೃದ್ಧಿಯ ಕ್ರಿಯಾ ಯೋಜನೆಯನ್ನು ಅನುಮೋದಿಸಿದೆ. ಅದರ ಪ್ರಕಾರ ಕೆರೆ ಏರಿ ಮತ್ತು ಕಾಲುದಾರಿ ಅಭಿವೃದ್ಧಿ, ತಡೆಗೋಡೆ ನಿರ್ಮಾಣ ಮತ್ತು ಗಾಜಿನ ಮನೆ, ತೂಗುಸೇತುವೆ ನಿರ್ಮಾಣ ಮತ್ತು ಮಕ್ಕಳ ಆಟದ ರೈಲಿಗೆ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡಿದೆ. ಈ ಕಾಮಗಾರಿಗಳಿಗೆ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಮಧ್ಯೆ ತಡೆಗೋಡೆ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.