ಬೆಂಗಳೂರು: ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗು ಕೇಂದ್ರ ಚುನಾವಣಾ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನವದೆಹಲಿಗೆ ತೆರಳುವ ಮುನ್ನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ವೈ, ದೆಹಲಿಯಲ್ಲಿಂದು ಪಕ್ಷದ ಚುನಾವಣೆ ಸಮಿತಿ ಸಭೆ ಇದೆ. ನಾನು ಈ ಸಭೆಗೆ ಅಪೇಕ್ಷಿತನಿರುವುದರಿಂದ ಇವತ್ತು ದೆಹಲಿಗೆ ಹೋಗಿ ನಾಳೆ ರಾಜ್ಯಕ್ಕೆ ವಾಪಸ್ ಬರುತ್ತೇನೆ. ಸಭೆಯಲ್ಲಿ ಲೋಕಸಭಾ ಚುನಾವಣೆ ಬಗ್ಗೆಯೂ ಚುನಾವಣೆ ಚರ್ಚೆ ಆಗಬಹುದು. ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಅಂತಿಮವಾಗಿ ಅಮಿತ್ ಶಾ ಹಾಗೂ ನರೇಂದ್ರ ಮೋದಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದಕ್ಕೆ ನಾವು ಬದ್ಧ ಎಂದರು.
ಇಂದು ಕಾವೇರಿ ನೀರಿನ ಬಗ್ಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ನನಗೂ ಆಹ್ವಾನ ನೀಡಿದ್ದರು. ಆದರೆ ಅನಿವಾರ್ಯ ಕಾರಣದಿಂದ ದೆಹಲಿಗೆ ಹೋಗಬೇಕಾಗಿದೆ. ಹೀಗಾಗಿ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದೇನೆ. ಇತರ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.