ಕರ್ನಾಟಕ

karnataka

By ETV Bharat Karnataka Team

Published : Dec 17, 2023, 6:34 PM IST

ETV Bharat / state

ಶಾಲಾ ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಚಗೊಳಿಸಿದ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಶಾಲಾ ಮಕ್ಕಳನ್ನು ಮಲದ ಗುಂಡಿಗಿಳಿಸಿ ದೈಹಿಕ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಘಟನೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

ಬಿ ವೈ ವಿಜಯೇಂದ್ರ ಹಾಗೂ ಬಸವರಾಜ ಬೊಮ್ಮಾಯಿ
ಬಿ ವೈ ವಿಜಯೇಂದ್ರ ಹಾಗೂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಲೂರು ಘಟನೆಯನ್ನು ರಾಜ್ಯ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊರಬೇಕು ಎಂದು ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಮಕ್ಕಳ ಮೇಲಿನ ದೌರ್ಜನ್ಯ ಕೋಲಾರದ ಮಾಲೂರು ಯಲುವಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ನಡೆದಿರುವುದು ನೋಡಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಹಳಿತಪ್ಪಿದ ಆಡಳಿತದಲ್ಲಿ ಮಹಿಳೆಯರು ಹಾಗೂ ಮಕ್ಕಳು ಸುರಕ್ಷಿತವಾಗಿರಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿರುವುದು ಬಿಂಬಿತವಾಗುತ್ತಿದೆ. ಅದರಲ್ಲೂ ಪರಿಶಿಷ್ಟ ಸಮುದಾಯಕ್ಕೆ ಸೇರಿದವರೇ ದೌರ್ಜನ್ಯ, ಶೋಷಣೆಗೆ ಗುರಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ.

ಮಾಲೂರಿನ ಘಟನೆಯಲ್ಲಿ ಮಕ್ಕಳನ್ನು ಮಲದ ಗುಂಡಿಗಿಳಿಸಿ ದೈಹಿಕ ದೌರ್ಜನ್ಯ ನಡೆಸಿರುವುದು ಅತ್ಯಂತ ಹೇಯ ಘಟನೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಅಲ್ಲದೇ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ನೈತಿಕ ಹೊಣೆ ಹೊರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ: ರಾಜ್ಯದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಮಾಡಲಾಗಿದೆ. ಮಾಲೂರು ತಾಲೂಕಿನಲ್ಲಿ ದಲಿತ ಶಾಲಾ ಮಕ್ಕಳನ್ನು ಮಲದ ಗುಂಡಿಗಿಳಿಸಿ ಸ್ವಚ್ಚ ಮಾಡಲು ಬಳಕೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ. ಯಾರಿಗೂ ಭಯ ಇಲ್ಲ. ಸರ್ಕಾರ ಅಧಿಕಾರಿಗಳ ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡಿದೆ. ಇಲ್ಲಿ ಮಹಿಳೆಯರು, ಮಕ್ಕಳು, ದಲಿತರಿಗೆ ಸುರಕ್ಷತೆ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಇದ್ದೂ ಸತ್ತಂತಾಗಿದ್ದು, ನಿರ್ಜೀವ ಸರ್ಕಾರಕ್ಕೆ ರಾಜ್ಯದ ಜನತೆ ಹಿಡಿಶಾಪ ಹಾಕುವಂತಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಸರ್ಕಾರ ಕಠಿಣ ಕ್ರಮ ಜರುಗಿಸಲಿ: ಕೋಲಾರದಲ್ಲಿ ನಡೆದ ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಗುರುಗಳು ಮಕ್ಕಳಿಗೆ ಸುಜ್ಞಾನವನ್ನು ನೀಡುವ ಬದಲಾಗಿ ಈ ರೀತಿಯಾದ ಅಪಾಯವಾದ ಕೆಲಸಕ್ಕೆ ನಿಯೋಜನೆ ಮಾಡಿ ಅವರ ಜೀವಕ್ಕೆ ಸಂಚಕಾರ ಮಾಡುವ ಕೆಲಸ ಮಾಡುತ್ತಿರುವುದು ಅಮಾನವೀಯ, ಹೇಯ ಹಾಗೂ ಖಂಡನೀಯ ಮತ್ತು ಇದು ಶಿಕ್ಷಾರ್ಹ ಅಪರಾಧ. ಅದೂ ಅಲ್ಲದೆ, ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ಈ ರೀತಿಯಾದ ಅಪಾಯಕಾರಿ ಕೆಲಸ ಮಾಡಿಸುವುದು ಸಹ ಕಾನೂನುರೀತ್ಯ ಅಪರಾಧವಾಗುತ್ತದೆ. ಹಾಗಾಗಿ ತಪ್ಪಿತಸ್ಥರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ, ಸರ್ಕಾರ ಕಠಿಣ ಕ್ರಮ ಜರುಗಿಸಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

ವಿಷಯವನ್ನು ತಿರುಚುವುದು, ವಿಷಯಾಂತರ ಮಾಡುವುದು ಕೆಪಿಸಿಸಿಯ ಡಿ.ಎನ್.ಎಯಲ್ಲಿ ಅಡಕವಾಗಿದೆ. ಬೆಳಗಾವಿಯಲ್ಲಿ ನಡೆದ ಅಮಾನುಷ ಘಟನೆಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ರಾಜ್ಯ ಕಾಂಗ್ರೆಸ್​ಗೆ, ಸಂತ್ರಸ್ತ ಪರಿಶಿಷ್ಟ ಪಂಗಡದ ಮಹಿಳೆಯ ಬಗ್ಗೆ ಕಾಳಜಿ ಇಲ್ಲ. ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಹೀನ ಕೃತ್ಯ ನಡೆದರೂ, ಘಟನೆ ನಡೆದ ಸ್ಥಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವ ಸತೀಶ್ ಜಾರಕಿಹೊಳಿ ಅವರ ಕ್ಷೇತ್ರಕ್ಕೆ ಸಂಬಂಧಿಸಿದ್ದಲ್ಲ ಎಂದು ಕಾಂಗ್ರೆಸ್ ಪ್ರಬುದ್ಧಿಗಳು ತೇಪೆ ಸಾರುತ್ತಿದ್ದಾರೆ.

ಸಚಿವರುಗಳು ಅವರ ಕ್ಷೇತ್ರಕ್ಕಲ್ಲ, ಸಂಪೂರ್ಣ ರಾಜ್ಯಕ್ಕೆ ಸಂಬಂಧಿಸಿದವರು ಎಂಬ ಕನಿಷ್ಠ ಜ್ಞಾನವೂ ಕಾಂಗ್ರೆಸ್ ಜ್ಞಾನಿಗಳಿಗೆ ಇಲ್ಲ. ಅಂದಹಾಗೆ ಬೆಳಗಾವಿಯಲ್ಲಿಯೇ ಬೀಡುಬಿಟ್ಟಿದ್ದ ಸಿಎಂ ಸಿದ್ದರಾಮಯ್ಯ ಅವರು ಸಂತ್ರಸ್ತೆಯನ್ನು ಭೇಟಿ ಮಾಡಿ, ಸಾಂತ್ವನ ಹೇಳಿ, ಪರಿಹಾರ ತಲುಪಿಸಿದ ಪುರಾವೆ ಇದ್ದರೆ, ಜನರಿಗೆ ಒಪ್ಪಿಸಿ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ:ವಸತಿ ಶಾಲೆ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನಿಂಗ್​; ಕೋಲಾರದಲ್ಲಿ ಅಮಾನವೀಯ ಘಟನೆ

ABOUT THE AUTHOR

...view details