ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಸಾಂಕೇತಿಕ ಪ್ರತಿಭಟನೆ: ಬೊಮ್ಮಾಯಿ, ಅಶೋಕ್ ಸೇರಿ ಕಾರ್ಯಕರ್ತರು ಪೊಲೀಸ್​ ವಶಕ್ಕೆ

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ನೀತಿಗಳನ್ನು ಖಂಡಿಸಿ ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

By

Published : Jun 20, 2023, 12:30 PM IST

Updated : Jun 20, 2023, 7:39 PM IST

ಬಿಜೆಪಿಯಿಂದ ಸಾಂಕೇತಿಕ ಪ್ರತಿಭಟನೆ
ಬಿಜೆಪಿಯಿಂದ ಸಾಂಕೇತಿಕ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಸಾಂಕೇತಿಕ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿ ಮತ್ತು 10 ಕೆಜಿ ಅಕ್ಕಿ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯದ 10 ವಿಭಾಗ ಕೇಂದ್ರಗಳಲ್ಲಿ ಬಿಜೆಪಿ ಬೃಹತ್​ ಪ್ರತಿಭಟನೆ ನಡೆಸಲು ಸಿದ್ದತೆ ನಡೆಸಿತ್ತು. ಆದರೆ, ವ್ಯಾಪಕವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿನ ಬೃಹತ್ ಪ್ರತಿಭಟನೆ ರದ್ದುಪಡಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿತು. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ನಗರದ ಮೌರ್ಯ ವೃತ್ತದಲ್ಲಿ ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು. 50ಕ್ಕೂ ಹೆಚ್ಚಿನ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ತುಂತುರು ಮಳೆಯಲ್ಲಿಯೇ ರಾಜ್ಯ ಸರ್ಕಾರದ ವಿರುದ್ಧ ಭಿತ್ತಿ ಪತ್ರ ಪ್ರದರ್ಶನ ಮಾಡಿ ಘೋಷಣೆ ಕೂಗಿದರು. ಪ್ರತಿಭಟನೆ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನಾಯಕರೇ ನಿಮಗೆ ಮಾನ ಮರ್ಯಾದೆ ಇದೆಯಾ‌‌..? ಡೋಂಗಿ ರಾಜಕಾರಣ ಮಾಡ್ತೀರಾ..? ಅಕ್ಕಿ ಕೊಡೋದನ್ನು ಮುಂದೆ ಹಾಕಿದರೆ ದುಡ್ಡು ಉಳಿಸಬಹುದು ಎಂಬುದು ಅವರ ಉದ್ದೇಶವಾಗಿದೆ ಎಂದು ಕಿಡಿಕಾರಿದರು.

ಈ ವೇಳೆ ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಕ್ಕೆ ಆಕ್ರೋಶಗೊಂಡ ಅಶೋಕ್, ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ, ಇವರದ್ದು ಗೂಂಡಾ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ನಂತರ ಮಾಜಿ ಡಿಸಿಎಂ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳದಿಂದ ಕರೆದೊಯ್ದರು.

ಮಾಜಿ ಸಿಎಂ ಬೊಮ್ಮಾಯಿ ವಶಕ್ಕೆ:ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಯಿತು. ಪ್ರತಿಭಟನೆಗೆ ಅವಕಾಶ ಇಲ್ಲ ಎಂದ ಪೊಲೀಸರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡುವ ಸಂದರ್ಭದಲ್ಲಿಯೇ ಬೊಮ್ಮಾಯಿ ಅವರನ್ನು ವಶಕ್ಕೆ ಪಡೆದರು. ಪೊಲೀಸರ ನಡೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆದರು. ಕಾಂಗ್ರೆಸ್​​​ನವರಿಗೆ ಪ್ರತಿಭಟನೆಗೆ ಅವಕಾಶ ಕೊಟ್ಟಿದ್ದಾರೆ ನಮಗೂ ಅವಕಾಶ ಕೊಡಲಿಲ್ಲ, ನಮ್ಮನ್ನು ಅರೆಸ್ಟ್ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದರೂ ಬೊಮ್ಮಾಯಿ ಅವರನ್ನು ವಶಕ್ಕೆ ಪಡೆದ ಪೊಲೀಸರು ಸ್ಥಳದಿಂದ ಕರೆದೊಯ್ದರು.

ರದ್ದುಗೊಂಡ ಪ್ರತಿಭಟನೆಗೆ ಸಾಂಕೇತಿಕ ರೂಪ: ಇಂದು ಬೆಳಗ್ಗೆಯೇ ನಗರದಲ್ಲಿ ಭಾರಿ ಮಳೆ ಆರಂಭವಾಯಿತು. 8 ಗಂಟೆಯಿಂದಲೇ ತುಂತುರು ಮಳೆಯಾಗುತ್ತಾ 9 ಗಂಟೆ ನಂತರ ಭಾರಿ ಪ್ರಮಾಣದ ಮಳೆಯಾಯಿತು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ರದ್ದುಗೊಳಿಸುವ ಈ ನಿರ್ಧಾರಕ್ಕೆ ಬರಲಾಯಿತು. ಆದರೆ ಕಾಂಗ್ರೆಸ್ ಪ್ರತಿಭಟನೆ ರದ್ದುಗೊಳಿಸುವ ನಿರ್ಧಾರ ಪ್ರಕಟ ಮಾಡದ ಹಿನ್ನಲೆಯಲ್ಲಿ ಮತ್ತೆ ಬಿಜೆಪಿ ನಿರ್ಧಾರ ಬದಲಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುವ ನಿರ್ಣಯಕ್ಕೆ ಬಂದಿತು. ಹಾಗಾಗಿ ಅಶೋಕ್ ನೇತೃತ್ವದಲ್ಲಿ ಐವತ್ತಕ್ಕೂ ಹೆಚ್ಚಿನ ಕಾರ್ಯಕರ್ತರು ಬೆರಳೆಣಿಕೆಯ ಶಾಸಕರ ಉಪಸ್ಥಿತಿಯಲ್ಲಿ ಬಿಜೆಪಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿತು.

ಇದನ್ನೂ ಓದಿ:ಬೆಂಗಳೂರಿನಲ್ಲಿ ವರುಣನಾರ್ಭಟ: ಬಿಜೆಪಿ ಸಾಂಕೇತಿಕ ಪ್ರತಿಭಟನೆ...ಕಾಂಗ್ರೆಸ್ ಪ್ರತಿಭಟನೆಗೆ ಮಳೆ ಅಡ್ಡಿ! ​

Last Updated : Jun 20, 2023, 7:39 PM IST

ABOUT THE AUTHOR

...view details