ಬೆಂಗಳೂರು: ಪ್ರಬಲ ಲಿಂಗಾಯತ ಹಾಗೂ ಒಕ್ಕಲಿಗರ ಮೀಸಲಾತಿಗಾಗಿ EWS 10% ಮೀಸಲಾತಿ ಮರುಹಂಚುವ ಸರ್ಕಾರದ ಚಿಂತನೆಗೆ ಬ್ರಾಹ್ಮಣ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. 10% EWS ಮೀಸಲಾತಿಯನ್ನು ಪ್ರಬಲ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಕಲ್ಪಿಸಲು ಉದ್ದೇಶಿರುವ ಪ್ರತ್ಯೇಕ ಪ್ರವರ್ಗಗಳಿಗೆ ಮರುಹಂಚುವ ನಿರ್ಧಾರಕ್ಕೆ ಬ್ರಾಹ್ಮಣ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ, ಸುಪ್ರಿಂ ಕೋರ್ಟ್ ಹಿರಿಯ ನ್ಯಾಯವಾದಿ ಅಶೋಕ್ ಹಾರನಹಳ್ಳಿ ವಿಡಿಯೋ ಸಂದೇಶದ ಮೂಲಕ ಸರ್ಕಾರದ ನಿರ್ಧಾರದ ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.
10% EWS ಮೀಸಲಾತಿಯಿಂದ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ಮೀಸಲಾತಿ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಅಶೋಕ್ ಹಾರನಹಳ್ಳಿ ಅವರು, ಇದು ಸರ್ಕಾರದ ಬ್ರಾಹ್ಮಣ ವಿರೋಧಿ ನಡೆಯಾಗಿದೆ ಎಂದು ದೂರಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ಒಪ್ಪಲು ಸಾಧ್ಯವಿಲ್ಲ. EWS ಮೀಸಲಾತಿಯನ್ನು ಹಂಚಿಕೆ ಮಾಡದಂತೆ ಸಮುದಾಯದ ಎಲ್ಲರೂ ಒಂದಾಗಿ ಹೋರಾಡಬೇಕಾಗಿದೆ ಎಂದು ಕರೆ ನೀಡಿದ್ದಾರೆ.
ಸರ್ಕಾರದ ಯೋಜನೆ ಏನು?:ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಗಳ ಮೀಸಲಾತಿ ಬೇಡಿಕೆ ಪೂರೈಸಲು ರಾಜ್ಯ ಸರ್ಕಾರ ಹೊಸದಾಗಿ 2C ಹಾಗೂ 2D ಪ್ರವರ್ಗ ಸೃಷ್ಟಿಸಲು ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತೀರ್ಮಾನಿಸಿತ್ತು. ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿತ್ತು. 3A ನಲ್ಲಿರುವ ಒಕ್ಕಲಿಗರಿಗೆ 2C ಪ್ರವರ್ಗ ಸೃಷ್ಟಿಸಲಾಗಿದ್ದರೆ, 3B ಯಲ್ಲಿದ್ದ ಪಂಚಮಸಾಲಿ ಸೇರಿ ಲಿಂಗಾಯತರಿಗೆ 2D ಕ್ಯಾಟಗರಿ ಸೃಷ್ಟಿಸಲು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ EWSನ 10% ಮೀಸಲಾತಿಯಲ್ಲಿ ಪ್ರತ್ಯೇಕ 2ಸಿ ಮತ್ತು 2ಡಿ ಪ್ರವರ್ಗಕ್ಕೆ ಹಂಚಲು ಸರ್ಕಾರ ನಿರ್ಧರಿಸಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರುವ ಜನರ ಸಂಖ್ಯೆಯ ಆಧಾರದಲ್ಲಿ ಅವರಿಗೆ ಮೀಸಲಾತಿ ನೀಡಿ, ಉಳಿದದ್ದನ್ನು 2C ಹಾಗೂ 2Dಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದರು. ಆದ್ರೆ ಎಷ್ಟು ಶೇಕಡಾ ಹಂಚಿಕೆ ಮಾಡಲಿದ್ದಾರೆ ಎಂದು ಸ್ಪಷ್ಟವಾಗಿ ಮಾಹಿತಿ ನೀಡಿಲ್ಲ.