ಬೆಂಗಳೂರು:2013ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರ ಮಗ ಉಮೇಶ್ ಕಾರಜೋಳ ಕಾರಿನ ಮೇಲೆ ದಾಳಿ ನಡೆಸಿದ ಆರೋಪದ ಹಿನ್ನೆಲೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮತ್ತು ಅವರ 14 ಜನ ಬೆಂಬಲಿಗರ ವಿರುದ್ಧ ಇದ್ದ ಪ್ರಕರಣವನ್ನು ಇಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಪಡಿಸಿ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು ಈ ತೀರ್ಪು ಪ್ರಕಟಿಸಿದರು. ನ್ಯಾಯಾಲಯ ನೀಡಿದ ಈ ತೀರ್ಪಿನಿಂದ ತಿಮ್ಮಾಪುರ ಹಾಗೂ ಮತ್ತವರ ಬೆಂಬಲಿಗರು ಸದ್ಯ ನಿರಾಳರಾಗಿದ್ದಾರೆ. ವಿಚಾರಣೆ ವೇಳೆ ತಿಮ್ಮಾಪುರ ಪರ ವಕೀಲ ಸಂಕೇತ್ ಏಣಗಿ ಅವರು ವಾದ ಮಂಡಿಸಿ, ಪ್ರಕರಣ ಸಂಬಂಧ ಆರೋಪಿಗಳು ಕಾನೂನು ಬಾಹಿರವಾಗಿ ಸಭೆ ನಡೆಸಿದ್ದಾರೆ ಎಂಬುದಾಗಿ ಪ್ರಾಸಿಕ್ಯೂಷನ್ ಆರೋಪಿಸಿದೆ. ಆದರೆ ಈ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಪ್ರಾಸಿಕ್ಯೂಷನ್ ಎಲ್ಲ ಆರೋಪಗಳು ಅನುಮಾನದಿಂದ ಕೂಡಿದ್ದು, ಈ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಲಯ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.