ಕರ್ನಾಟಕ

karnataka

HIGH COURT NEWS: ಕೊರೋನಾ ನಿರ್ಬಂಧದ ನಡುವೆ ಮೇಕೆದಾಟು ಯಾತ್ರೆ.. ಸಿಎಂ, ಡಿಸಿಎಂ ಮತ್ತಿತರರ ವಿರುದ್ಧದ ಪ್ರಕರಣ ರದ್ದು

By

Published : Jun 16, 2023, 2:10 PM IST

ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ನಡೆಸಿದ ಪಾದಯಾತ್ರೆ ವೇಳೆ, ಕೊರೋನಾ ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳ ಉಲ್ಲಂಘನೆಯ ಆರೋಪ ಹೊತ್ತಿದ್ದ ಕಾಂಗ್ರೆಸ್​ ಪಕ್ಷದ ನಾಯಕರ ಹಾಗೂ ಸದಸ್ಯರ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿದೆ.

ಮೇಕೇದಾಟು ಯೋಜನೆ ಅನುಷ್ಟಾನಕ್ಕೆ ನಡೆಸಿದ ಪಾದಯಾತ್ರೆ
ಮೇಕೇದಾಟು ಯೋಜನೆ ಅನುಷ್ಟಾನಕ್ಕೆ ನಡೆಸಿದ ಪಾದಯಾತ್ರೆ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಪಾದಯಾತ್ರೆ ನಡೆಸಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಪಕ್ಷದ ಸದಸ್ಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿದೆ.

ಇದರಿಂದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೊರೋನಾ ನಿಯಂತ್ರಣಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ನಡೆದ ಪಾದಯಾತ್ರೆಯ ವೇಳೆ ದಾಖಲಾಗಿದ್ದ ನಾಲ್ಕು ಪ್ರಕರಣಗಳು ರದ್ದಾದಂತಾಗಿದೆ. ಡಿ. ಕೆ. ಶಿವಕುಮಾರ್ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಪ್ರಕರಣವನ್ನು ರದ್ದು ಪಡಿಸಿ ಆದೇಶಿಸಿದೆ.

ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆ ಸೆಕ್ಷನ್ 1 ಮತ್ತು 5ನ್ನು ಉಲ್ಲಂಘಿಸಿದವರು ಶಿಕ್ಷೆಗೆ ಅರ್ಹರಾಗಿರುತ್ತಾರೆ. ಆದರೆ, ರಾಜ್ಯ ಸರ್ಕಾರ ಈ ಸಂಬಂಧ ನಿರ್ಬಂಧ ವಿಧಿಸಿ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಅದಕ್ಕೆ ಬದಲಾಗಿ ವಿಪತ್ತು ನಿರ್ವಹಣಾ ಕಾಯಿದೆಯಡಿ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಸಾಂಕ್ರಾಮಿಕ ರೋಗಗಳ ತಡೆ ಕಾಯಿದೆಯಡಿ ದಾಖಲಾಗಿರುವ ದೂರು ಮತ್ತು ಅದರ ವಿಚಾರಣೆಗೆ ಅರ್ಹವಿಲ್ಲ.

ಜೊತೆಗೆ, ಸಾಂಕ್ರಾಮಿಕ ರೋಗಗಳ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿರುವ ಪೀಠ ಪ್ರಕರಣವನ್ನು ರದ್ದು ಪಡಿಸಿ ಆದೇಶಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಂಡಿರುವ ವಿಚಾರಣಾ ನ್ಯಾಯಾಲಯದ ಕ್ರಮ ಕಾನೂನು ಬಾಹಿರವಾಗಿದೆ. ಹೀಗಾಗಿ ಪ್ರಕರಣವನ್ನು ರದ್ದು ಪಡಿಸುತ್ತಿರುವುದಾಗಿ ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ: 2022 ರ ಜನವರಿ ತಿಂಗಳಲ್ಲಿ ಕೊರೋನಾ ಮೂರನೇ ಅಲೆ ಸಂದರ್ಭದಲ್ಲಿ ರೋಗ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ಸಕಾರ ಹಲವು ನಿರ್ಬಂಧಗಳನ್ನು ವಿಧಿಸಿತ್ತು. ಈ ನಡುವೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೆರಿದಂತೆ ಹಲವು ಮಂದಿ ಮೇಕೇದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದರು.

ಇದಕ್ಕೆ ಸರ್ಕಾರ ಅನುಮತಿ ನೀಡಿರಲಿಲ್ಲ. ಆದರೂ ಅರ್ಜಿದಾರರು ಪಾದಯಾತ್ರೆ ಮುಂದುವರೆಸಿದ್ದರು. ಈ ಸಂಬಂಧ ರಾಮನಗರ ಜಿಲ್ಲೆ ತಹಶೀಲ್ದಾರ್ ಅವರು, ರಾಮನಗರ ಗ್ರಾಮೀಣ ಠಾಣೆಯಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆಯ 5 (3) ಎ, 143, 149, 290, 336, 141 ಅಡಿ ಎಫ್‌ಐಆರ್ ದಾಖಲಿಸಿದ್ದರು.

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ.ಸುರೇಶ್, ಮಾಜಿ ಸಂಸದ ಹಾಗೂ ಇತ್ತೀಚೆಗೆ ದಿವಂಗತರಾಗಿರುವ ಧ್ರುವನಾರಾಯಣ್, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಅಭಯ್ ಚಂದ್ರ ಜೈನ್, ಶರಣ ಪ್ರಕಾಶ್ ಪಾಟೀಲ್, ಕಿಮ್ಮನೆ ರತ್ನಾಕರ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಪುಟ್ಟರಂಗ ಶೆಟ್ಟಿ, ಎಚ್ ಆಂಜನೇಯ, ಶಾಸಕಿ ಅಂಜಲಿ ನಿಂಬಾಳ್ಕರ್, ಪರಿಷತ್ ಸದಸ್ಯರಾದ ದಿನೇಶ್ ಗೂಳೀಗೌಡ, ಸಲೀಂ ಅಹ್ಮದ್, ರವಿ ಎಸ್, ಮುಖಂಡರಾದ ಕೆ.ವೈ.ನಂಜೇಗೌಡ, ಬಿ.ಆರ್.ಯಾವಗಲ್, ಕೆ.ರಾಜು, ಡಾ. ರವೀಂದ್ರ, ಕುಸುಮಾ, ಮೊಹಮ್ಮದ್ ನಲಪಾಡ್, ಇಕ್ಬಾಲ್ ಹುಸೇನ್, ಕೆ.ಸಿ.ವೀರೇಗೌಡ, ಬಿ.ಪಿ.ಮಂಜೇಗೌಡ, ಪಾರ್ವತಮ್ಮ ಅವರನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ:ಮೇಕೆದಾಟು ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಹೈಕೋರ್ಟ್ ಮೊರೆ ಹೋದ ಡಿಕೆಶಿ

ABOUT THE AUTHOR

...view details