ಕರ್ನಾಟಕ

karnataka

By ETV Bharat Karnataka Team

Published : Dec 13, 2023, 9:31 PM IST

ETV Bharat / state

ಪೊಲೀಸರಿಂದ ವಕೀಲನ ಮೇಲೆ ಹಲ್ಲೆ ಪ್ರಕರಣ: ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ  ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವೂ ಪೊಲೀಸರಿಂದ ವಕೀಲನ ಮೇಲೆ ನಡೆದ ಹಲ್ಲೆ ಪ್ರಕರಣದ ಅರ್ಜಿ ವಿಚಾರಣೆ ನಡೆಸಿತು.

high court
ಹೈಕೋರ್ಟ್

ಬೆಂಗಳೂರು:ಚಿಕ್ಕಮಗಳೂರಿನ ಪೊಲೀಸರು ವಕೀಲ ಪ್ರೀತಮ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದಡಿ ಸಿಐಡಿ ತನಿಖೆ ಆರಂಭಿಸಲಾಗಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ಸರ್ಕಾರದ ಭರವಸೆ ಹಿನ್ನೆಲೆ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಅಲ್ಲದೇ ಪ್ರಕರಣದ ಸಂಬಂಧ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದನ್ನು ನಾವು ನೋಡುತ್ತಿದ್ದೇವೆ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಈಗಾಗಲೇ ತನಿಖೆ ಆರಂಭಿಸಿರುವುದರಿಂದ ಈ ಹಂತದಲ್ಲಿ ಯಾವುದೇ ನಿರ್ದೇಶನ ನೀಡಲಾಗದು. ಅರ್ಜಿಯ ಉದ್ದೇಶ ಈಡೇರಿದೆ. ಹಾಗಾಗಿ ಅರ್ಜಿಯನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ. ಆದ್ದರಿಂದ ವಿಲೇವಾರಿ ಮಾಡಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ವಿಚಾರಣೆ ವೇಳೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿ ವಿವೇಕ್ ಸುಬ್ಬಾರೆಡ್ಡಿ, ಪೊಲೀಸರಿಂದ ವಕೀಲ ಪ್ರೀತಮ್ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಸ್ಥಳೀಯ ಪೊಲೀಸರ ನೆರವು ಪಡೆಯುತ್ತಿದೆ. ಸ್ಥಳೀಯ ಪೊಲೀಸರು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಿರುಕುಳ ನೀಡುತ್ತಿದ್ದಾರೆ. ಜತೆಗೆ ಪ್ರಕರಣ ನಡೆದು ಇಷ್ಟು ದಿನವಾದರೂ ಇನ್ನೂ ತಪ್ಪಿತಸ್ಥರನ್ನು ಬಂಧಿಸಿಲ್ಲ ಎಂದು ಆರೋಪಿಸಿದರು. ಅಲ್ಲದೇ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಸ್ವತಂತ್ರ ತನಿಖಾ ಪಡೆಯನ್ನು ನೇಮಕ ಮಾಡಬೇಕು ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತನಿಖೆಯನ್ನು ಹೀಗೆಯೇ ನಡೆಸಬೇಕು ಎಂದು ನ್ಯಾಯಾಲಯ ಹೇಳಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳಿಸಲು ಕಾಲಮಿತಿ ನೀಡುವುದಕ್ಕೆ ಸಾಧ್ಯವಿಲ್ಲ, ಆದರೆ, ಶೀಘ್ರ ತನಿಖೆ ಪೂರ್ಣಗೊಳಿಸಬೇಕು. ಒಂದು ವೇಳೆ ತನಿಖೆ ಸಮಪರ್ಕವಾಗದಿದ್ದರೆ ಕಾನೂನಿನ ಪ್ರಕ್ರಿಯೆ ಅನುಸರಿಸಲು ನಿಮಗೆ ಎಲ್ಲ ಸ್ವಾತಂತ್ರ್ಯವಿದೆ. ಸಿಐಡಿ ತನಿಖೆ ಆರಂಭವಾಗಿರುವುದರಿಂದ ಈ ಹಂತದಲ್ಲಿ ಎಸ್‌ಐಟಿ ರಚನೆ ಮಾಡಲಾಗದು ಎಂದು ಹೇಳಿತು.

ಅಡ್ವೋಕೆಟ್ ಜನರಲ್‌ ಶಶಿಕಿರಣ್ ಶೆಟ್ಟಿ, ಪ್ರಕರಣದ ಬಗ್ಗೆ ಈಗಾಗಲೇ ಸಿಐಡಿ ತನಿಖೆ ಆರಂಭವಾಗಿದ್ದು, ತಪ್ಪಿಸ್ಥರನ್ನು ನ್ಯಾಯಕ್ಕೆ ಗುರಿಪಡಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅಲ್ಲದೇ, ತನಿಖೆಯ ಹಂತ ಏನು ? ತನಿಖೆಯ ಮೇಲ್ವಿಚಾರಣೆ ನ್ಯಾಯಾಲಯದ ಕರ್ತವ್ಯವಲ್ಲ. ಆರೋಪಿಯನ್ನು ಬಂಧಿಸಬೇಕು ಎಂದು ಹೇಳಲಾಗದು. ಅಲ್ಲದೇ ಯಾರನ್ನು ಒಳಗೊಂಡು ತನಿಖೆ ನಡೆಸಬೇಕು ಯಾರು ಬೇಡ ಎಂದು ಪೀಠ ಹೇಳಲು ಸಾಧ್ಯವಿಲ್ಲ. ಒಂದೊಮ್ಮೆ ಮಾಡಿದರೆ ಜನರು ಪೀಠ ವಕೀಲರ ಪರವಾಗಿದೆ ಎಂದು ಹೇಳಬಹುದು.

ಪ್ರಕರಣದ ಹಿನ್ನೆಲೆ ಏನು?ಚಿಕ್ಕಮಗಳೂರಿನಲ್ಲಿ ನ. 30 ರಂದು ಹೆಲ್ಮೆಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ ಎಂಬುವವರ ಮೇಲೆ ಪೊಲೀಸ್ ಸಿಬ್ಬಂದಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆ ಠಾಣೆ ಎದುರು ವಕೀಲರು ಜಮಾಯಿಸಿ ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಅವರು ಪಿಎಸ್‌ಐ ಸೇರಿದಂತೆ ಆರು ಸಿಬ್ಬಂದಿ ಅಮಾನತು ಮಾಡಿದ್ದರು. ಜೊತೆಗೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ತದನಂತರ ಡಿ. 5 ರಂದು ವಿಚಾರಣೆ ನಡೆಸಿದ ವಿಚಾರಣಾ ಪೀಠ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲು ಸಮ್ಮತಿ ನೀಡಿತ್ತು. ಅಲ್ಲದೇ ಡಿ. 9 ರಂದು ಅಡ್ವೋಕೇಟ್ ಜನರಲ್ ಕಚೇರಿಯಲ್ಲಿ ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಲು ಸೂಚನೆ ನೀಡಿತ್ತು.

ಇದನ್ನೂಓದಿ:ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಆರೋಪ: ವರದಿ ನೀಡಲು​ ಸಮಿತಿಗೆ ಹೈಕೋರ್ಟ್​ ಗಡುವು

ABOUT THE AUTHOR

...view details