ಕರ್ನಾಟಕ

karnataka

ಜಿಎಸ್​ಟಿ ತೆರಿಗೆ ವಂಚನೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

By

Published : Nov 11, 2019, 7:03 PM IST

ತೆರಿಗೆ ಸಂಗ್ರಹದಲ್ಲಿ ಇತರ ರಾಜ್ಯಗಳಿಗಿಂತ ಉತ್ತಮ ಸ್ಥಿತಿಯಲ್ಲಿದ್ದರೂ ನಾವು ಇನ್ನಷ್ಟು ಸಾಧನೆಗೆ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು:ರಾಜ್ಯದಲ್ಲಿ ತೆರಿಗೆ ಸಂಗ್ರಹ ಬೆಳವಣಿಗೆ ಶೇ.10.3 ರಷ್ಟಿದ್ದು, ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ಅಧಿಕಾರಿಗಳು ಶ್ರಮಿಸಬೇಕು, ಈ ನಿಟ್ಟಿನಲ್ಲಿ ತೆರಿಗೆ ವಂಚನೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಎಸ್‍ಟಿ, ಕೆಎಸ್‍ಟಿ ಹಾಗೂ ವೃತ್ತಿ ತೆರಿಗೆ ಸಂಗ್ರಹ ಪ್ರಗತಿಯ ಪರಿಶೀಲನೆ ನಡೆಸಿ, ವಾಣಿಜ್ಯ ತೆರಿಗೆ ಇಲಾಖೆಗೆ 2019-20ನೇ ಸಾಲಿನಲ್ಲಿ 76,046 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ಇದ್ದು, ಈ ವರೆಗೆ ಒಟ್ಟು 42,823 ಕೋಟಿ ರೂ. ಸಂಗ್ರಹವಾಗಿದೆ. ಒಟ್ಟಾರೆ ಬೆಳವಣಿಗೆ ದರ ಶೇ. 10.3 ರಷ್ಟಿದ್ದು, ವಾರ್ಷಿಕ ಗುರಿಯ ಶೇ. 56.3 ರಷ್ಟು ತೆರಿಗೆ ಸಂಗ್ರಹವಾಗಿದೆ. ಇದರಲ್ಲಿ ಜಿಎಸ್​ಟಿ ಒಂದರಿಂದಲೇ 33,060 ಕೋಟಿ ರೂ. ಗಳಷ್ಟಿದ್ದು, ಜಿಎಸ್‍ಟಿ ಬೆಳವಣಿಗೆ ದರ ಶೇ.12.2 ರಷ್ಟಿದೆ.

ರಾಜ್ಯದಲ್ಲಿ ತೆರಿಗೆ ಬಾಕಿ ಇರುವ ಸುಮಾರು 9,592 ಸಂಸ್ಥೆಗಳಿಗೆ ಭೇಟಿ ನೀಡಿ 465.3 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿದೆ. ತೆರಿಗೆ ಸರಿಯಾಗಿ ಪಾವತಿಸದ 74,598 ನೋಂದಣಿ ರದ್ದುಪಡಿಸಲಾಗಿದೆ. 1,08,315 ಆಡಿಟ್ ಪ್ರಕರಣಗಳಲ್ಲಿ, 833.07 ಕೋಟಿ ರೂ. ಸಂಗ್ರಹವಾಗಿದೆ. ವರ್ತಕರ ನೋಂದಣಿ ಪರಿಶೀಲನೆಯ ವೇಳೆ 8,942 ತಪಾಸಣೆಗಳಲ್ಲಿ 463 ನಕಲಿ ನೋಂದಣಿ ಪ್ರಕರಣಗಳು ಪತ್ತೆಯಾಗಿದ್ದು, 9 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ದೇಶದಲ್ಲಿ ಜಿಎಸ್‍ಟಿ ಸಂಗ್ರಹದ ಒಟ್ಟಾರೆ ಸರಾಸರಿಗಿಂತ ಕರ್ನಾಟಕದ ಸರಾಸರಿ ಹೆಚ್ಚಾಗಿದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ಕರ್ನಾಟಕದ ಕೊಡುಗೆ ಶೇ. 9.55 ರಷ್ಟಿದ್ದು, ಎರಡನೇ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ವಿವರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮುಂದಿನ ದಿನಗಳಲ್ಲಿ ತೆರಿಗೆ ಸಂಗ್ರಹವನ್ನು ಇನ್ನಷ್ಟು ಉತ್ತಮ ಪಡಿಸಬೇಕು. ಈ ನಿಟ್ಟಿನಲ್ಲಿ ತೆರಿಗೆ ವಂಚನೆ, ನಕಲಿ ನೋಂದಣಿ ಮೊದಲಾದ ಪ್ರಕರಣಗಳನ್ನು ತನಿಖೆ ನಡೆಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರಕು ಸಾಗಾಣಿಕೆ ಸಂದರ್ಭದಲ್ಲಿ ತಪಾಸಣೆ ಕೈಗೊಂಡು, ಸದಾ ಜಾಗೃತರಾಗಿರಬೇಕು ಎಂದು ಸೂಚಿಸಿದರು.

ತೆರಿಗೆ ಸಂಗ್ರಹದಲ್ಲಿ ಇತರ ರಾಜ್ಯಗಳಿಗಿಂತ ಉತ್ತಮ ಸ್ಥಿತಿಯಲ್ಲಿದ್ದರೂ ನಾವು ಇನ್ನಷ್ಟು ಸಾಧನೆಗೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಹೆಚ್ಚು ತೆರಿಗೆ ಪಾವತಿಸುವ ಕರದಾತರ ಬಗ್ಗೆ ಹೆಚ್ಚು ಗಮನ ನೀಡುವ ನಿಟ್ಟಿನಲ್ಲಿ ಜಿಎಸ್‍ಟಿ ಪ್ರೊ ಎಂಬ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಇತರ ರಾಜ್ಯಗಳು ಹಾಗೂ ಭಾರತ ಸರ್ಕಾರವೂ ಇದರಲ್ಲಿ ಆಸಕ್ತಿ ತೋರಿದೆ. ಛತ್ತೀಸ್‍ಗಢ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಈ ವ್ಯವಸ್ಥೆಯನ್ನು ಯಥಾವತ್ತಾಗಿ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಇ-ವೇ ಬಿಲ್ಲುಗಳ ತಪಾಸಣೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಾಗಿ ನಡೆಸಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ಐಎಸ್‍ಎನ್ ಪ್ರಸಾದ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ವಾಣಿಜ್ಯ ತೆರಿಗೆ ಇಲಾಖೆ ಅಪರ ಆಯುಕ್ತ ನಿತೇಶ್ ಪಾಟೀಲ್ ಉಪಸ್ಥಿತರಿದ್ದರು.

ABOUT THE AUTHOR

...view details