ಕರ್ನಾಟಕ

karnataka

ದೇಶದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆಯಾದ್ರೆ ಮಾತ್ರ ಸಮ ಸಮಾಜ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆಯಾಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ.

By ETV Bharat Karnataka Team

Published : Sep 9, 2023, 9:42 AM IST

Published : Sep 9, 2023, 9:42 AM IST

siddaramaiah
ಮುಖ್ಯಮಂತ್ರಿ ಸಿದ್ದರಾಮಯ್ಯ

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ದೇಶದ ಆಸ್ತಿ ಮತ್ತು ಉತ್ಪಾದನೆ ಕೆಲವೇ ವ್ಯಕ್ತಿಗಳ ಕೈಯಲ್ಲಿ ಸಂಗ್ರಹ ಆಗುತ್ತಿರುವುದರಿಂದ ಇನ್ನೂ ಸಾಮಾಜಿಕ, ಆರ್ಥಿಕ ಅಸಮಾನತೆ ಮುಂದುವರೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ 'ಬೆಳಕು ಬಿತ್ತಿದವರು', 'ಪ್ರಾಕೃತಾ ಕಥಾ ಸಾಹಿತ್ಯ' ಮತ್ತು 'ದ ಜರ್ನಿ ಆಫ್ ಲೈಫ್' ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಸಿಎಂ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ, ಸಾಮಾಜಿಕ‌, ಆರ್ಥಿಕ‌ ತಳಹದಿಯ ಮೇಲೆ ರೂಪುಗೊಳ್ಳದಿದ್ದರೆ ಸ್ವಾತಂತ್ರ್ಯದ ಉದ್ದೇಶ ಈಡೇರುವುದಿಲ್ಲ ಎಂದಿದ್ದರು. ಹೀಗಾಗಿ, ಸ್ವಾತಂತ್ರ್ಯದ ಉದ್ದೇಶ ಈಡೇರಬೇಕಾದರೆ ಸಮಾಜದಲ್ಲಿ ಅವಕಾಶ ಮತ್ತು ಸಂಪತ್ತು ಸಮಾನ ಹಂಚಿಕೆ ಆಗಿ ಸಮ ಸಮಾಜ ನಿರ್ಮಾಣ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಪುಸ್ತಕ ಬಿಡುಗಡೆ ಕಾರ್ಯಕ್ರಮ

ಜಾತಿ ನಾಶವಾಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಅಂತರ್ಜಾತಿ ವಿವಾಹ ಜಾತಿ ವಿನಾಶದ ಪ್ರಥಮ ಹೆಜ್ಜೆ. ನಮ್ಮ ಸಂವಿಧಾನ ಕೂಡ ನಮ್ಮದು ಜಾತ್ಯತೀತ ಸಮಾಜ ಎಂದು ಹೇಳಿದೆ. ಆ ಕಾಲದಲ್ಲೇ ಅಂತರ್ಜಾತಿ ವಿವಾಹವಾಗಿ ತಮ್ಮ ಮೂವರೂ ಮಕ್ಕಳನ್ನು ಅಂತರ್ಜಾತಿ ವಿವಾಹ ಮಾಡಿರುವ ಹಂ.ಪ. ನಾಗರಾಜಯ್ಯ ಮತ್ತು ಕಮಲಾ ಹಂಪನ ಅವರು ನಿಜಕ್ಕೂ ಆದರ್ಶ ದಂಪತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾತಿ ಯಾವುದಿದ್ದರೂ ನಾವು ಅಂತಿಮವಾಗಿ ಮನುಷ್ಯರಾಗಬೇಕು. ಮನುಷ್ಯ ಮನುಷ್ಯನ ಪ್ರೀತಿಸುವುದೇ ಧರ್ಮ. ದ್ವೇಷಿಸುವುದು ಅಧರ್ಮ. ಆದರೆ, ಇಂದು ದ್ವೇಷವನ್ನು ಆರಾಧಿಸುವ ಸಮಾಜವನ್ನು ನಿರ್ಮಿಸುವ ಅಪಾಯಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಇದಕ್ಕೆ ಪ್ರಜ್ಞಾವಂತರಾದ ನಾವೆಲ್ಲರೂ ತಡೆ ಹಾಕಬೇಕು, ದ್ವೇಷಕ್ಕೆ ಒತ್ತು ಕೊಡಬಾರದು, ಸಮಾಜಮುಖಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಇದನ್ನೂ ಓದಿ :ಶಿಕ್ಷಕರು, ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ, ನಮ್ಮನ್ನು ಬೆಂಬಲಿಸುತ್ತಾರೆ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ನಾವು ಇಂದಿನ ದಿನಗಳಲ್ಲಿ ಮನುಷ್ಯರಿಗಿಂತ ಪ್ರಾಣಿಗಳನ್ನೇ ಹೆಚ್ಚು ಪ್ರೀತಿಸುತ್ತಿದ್ದೇವೆ. ಎಲ್ಲರಲ್ಲೂ ನಾನು ಒಬ್ಬ ಎಂಬ ಮನೋಭಾವ ಬಂದರೆ ಒಂದು ಸುಂದರವಾದ ಸಮಾಜ ಕಟ್ಟಲು ಸಾಧ್ಯ. ಸಮಾಜ ಸುಮ್ಮನೆ ಬದಲಾವಣೆ ಆಗುವುದಿಲ್ಲ, ಜಾತಿ ವ್ಯವಸ್ಥೆಯು ಸಹ ಅದಾಗಿಯೇ ಬದಲಾಗುವುದಿಲ್ಲ. ಈ ಸಾಮಾಜಿಕ ವ್ಯವಸ್ಥೆಗೆ ಚಲನೆ ಸಿಕ್ಕಿದ್ದಾಗ ಮಾತ್ರ ಬದಲಾವಣೆ ಸಾಧ್ಯ. ಜಡತ್ವ ಇದ್ದರೆ ಅಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದರು.

ಇದನ್ನೂ ಓದಿ :ಅನೈತಿಕ ಪೊಲೀಸ್​ಗಿರಿ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ತಕ್ಕ ಕಾನೂನಿನ ಶಾಸ್ತಿ : ಸಿಎಂ

ಹಂ. ಪ ನಾಗರಜಯ್ಯ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಕೃತಿಗಳ ಕುರಿತು ಮಾತನಾಡಲಾಯಿತು. ಈ ವೇಳೆ ಲೇಖಕ ಜಿ ಎನ್ ಮೋಹನ್ ಮತ್ತು ಕಮಲಾ ಹಂಪನಾ ವೇದಿಕೆಯಲ್ಲಿದ್ದರು.

ಇದನ್ನೂ ಓದಿ :ಧರ್ಮಕ್ಕೋಸ್ಕರ ಮನುಷ್ಯ ಅಲ್ಲ , ಮನುಷ್ಯನಿಗಾಗಿ ಧರ್ಮ : ಸಿಎಂ ಸಿದ್ದರಾಮಯ್ಯ

ABOUT THE AUTHOR

...view details