ಕರ್ನಾಟಕ

karnataka

ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ.. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಂತಾಪ

By

Published : May 21, 2023, 8:22 PM IST

ಮಾಜಿ ಶಾಸಕ ಯು.ಆರ್ ಸಭಾಪತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

cm-and-dcm-condoled-the-demise-of-former-mla-ur-sabhapati
ಮಾಜಿ ಶಾಸಕ ಯು.ಆರ್ ಸಭಾಪತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ, ಡಿಸಿಎಂ

ಬೆಂಗಳೂರು:ಉಡುಪಿಯ ಮಾಜಿ ಶಾಸಕ ಯು. ಆರ್ ಸಭಾಪತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕನ ಅಗಲಿಕೆಗೆ ಸಿಎಂ, ಡಿಸಿಎಂ ಮಾತ್ರವಲ್ಲದೆ ಹಲವು ಕಾಂಗ್ರೆಸ್ ನಾಯಕರು ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದರೆ, ಡಿ ಕೆ ಶಿವಕುಮಾರ್ ಸಂತಾಪ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ, ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಯು. ಆರ್. ಸಭಾಪತಿ ಅವರ ಹಠಾತ್ ಸಾವಿಂದ ಆಘಾತಕ್ಕೀಡಾಗಿದ್ದೇನೆ. ಸಭಾಪತಿ ಅವರ ನಿಧನದಿಂದ ಕರಾವಳಿಯ ಕಾಂಗ್ರೆಸ್ ಹಿಂದುಳಿದ ಸಮುದಾಯಕ್ಕೆ ಸೇರಿರುವ ಒಬ್ಬ ಸರ್ವಜನಪ್ರಿಯ ನಾಯಕನನ್ನು ಕಳೆದುಕೊಂಡಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.

ಟ್ವೀಟ್​ ಮೂಲಕ ಸಂತಾಪ ಸೂಚಿದ ಸಿಎಂ ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ತಮ್ಮ ಸಂದೇಶದಲ್ಲಿ, ಸಭಾಪತಿ ಅವರ ಹಠಾತ್ ನಿಧನ ಸುದ್ದಿ ಕೇಳಿ ಆಘಾತವಾಗಿದೆ. ಉಡುಪಿಯ ಹಾಗೂ ಕರಾವಳಿ ಭಾಗದ ಸಭಾಪತಿ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿ ನಮ್ಮ ಜತೆ ಕೆಲಸ ಮಾಡಿದ್ದರು. ಕರಾವಳಿ ಭಾಗದಲ್ಲಿ ಪಕ್ಷ ಸಂಘಟನೆ ಮಾಡಿದ್ದ ಸಭಾಪತಿ ಅವರು ಪಕ್ಷಕ್ಕಾಗಿ ದುಡಿದಿದ್ದರು ಎಂದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ವರುಣನ ಆರ್ಭಟ.. ಮಳೆಗೆ ಯುವತಿ ಬಲಿ, 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಇತ್ತೀಚೆಗೆ ನಿಧನರಾಗಿದ್ದ ಡಾ. ಕೆ ಭುಜಂಗ ಶೆಟ್ಟಿ:ಖ್ಯಾತ ನೇತ್ರ ತಜ್ಞ, ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ಕೆ ಭುಜಂಗ ಶೆಟ್ಟಿ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದರು. ಶನಿವಾರ ಅವರ ಅಂತ್ಯಕ್ರಿಯೆ ನಗರದ ಹರಿಶ್ಚಂದ್ರ ಘಾಟ್​ನಲ್ಲಿ ನೆರವೇರಿತು. ಶುಕ್ರವಾರ ರೋಗಿಗಳನ್ನು ನೋಡಿ ಸಂಜೆ ಮನೆಗೆ ತೆರಳಿದ್ದ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿತ್ತು. ತಕ್ಷಣ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಶನಿವಾರ ರಾಜಾಜಿನಗರದಲ್ಲಿನ ಇಸ್ಕಾನ್ ಬಳಿಯಿರುವ ನಾರಾಯಣ ನೇತ್ರಾಲಯದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ನೇತ್ರದಾನದ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದ ಡಾಕ್ಟರ್ ಭುಜಂಗ ಶೆಟ್ಟಿ ಅವರ ಪಾರ್ಥಿವ ಶರೀರಕ್ಕೆ ಸಿಬ್ಬಂದಿ, ಅಭಿಮಾನಿಗಳು ಕುಟುಂಬಸ್ಥರು ಅಂತಿಮ ನಮನವನ್ನು ಅವರ ಕನಸಿನ ಕೂಸಾದ ನಾರಾಯಣ ನೇತ್ರಾಲಯದಲ್ಲಿ ಸಲ್ಲಿಸಿದ್ದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕರ್ನಾಟಕ ರಕ್ಷಣಾ ವೇದಿಕೆಯ ಮುಖ್ಯಸ್ಥ ಪ್ರವೀಣ್ ಶೆಟ್ಟಿ, ಚಿತ್ರನಟ ದೊಡ್ಡಣ್ಣ ಸೇರಿದಂತೆ ಹಲವು ಗಣ್ಯರು ಅವರ ಅಂತಿಮ ದರ್ಶನ ಪಡೆದಿದ್ದರು. ನಂತರ ಮಧ್ಯಾಹ್ನ 3.30ರ ಸುಮಾರಿಗೆ ಹರಿಶ್ಚಂದ್ರ ಘಾಟ್​ನಲ್ಲಿ ಅಂತ್ಯಕ್ರಿಯೆ ಸಕಲ ವಿಧಿ ವಿಧಾನದೊಂದಿಗೆ ನೆರವೇರಿತ್ತು.

ABOUT THE AUTHOR

...view details