ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಫೆ.17ಕ್ಕೆ ತಮ್ಮ ಆಡಳಿತಾವಧಿಯ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಪೂರ್ಣ ಪ್ರಮಾಣದ ಹಾಗೂ ಹೆಚ್ಚುವರಿ ಆದಾಯದ ಬಜೆಟ್ ಮಂಡಿಸಲಿರುವ ಸಿಎಂ, ಚುನಾವಣೆ ಲೆಕ್ಕಾಚಾರದೊಂದಿಗೆ ಜನಪ್ರಿಯ, ಯಾವುದೇ ತೆರಿಗೆ ಹೇರದೆ ಹೊರೆ ಇಲ್ಲದ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ.
ಸಿಎಂ ಬೊಮ್ಮಾಯಿ ತಮ್ಮ ಅಧಿಕಾರವಧಿಯ ಎರಡನೇ ಬಜೆಟ್ ಮಂಡನೆಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಇದೇ ಶುಕ್ರವಾರ ಬೆಳಗ್ಗೆ 10.15ಕ್ಕೆ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಈಗಾಗಲೇ ಅಧಿಕಾರಿಗಳ ಜೊತೆ ಬಜೆಟ್ ಪೂರ್ವತಯಾರಿ ಸಭೆಗಳನ್ನು ನಡೆಸಿರುವ ಸಿಎಂ, ಇದೀಗ ಅಂತಿಮ ಟಚ್ ನೀಡುತ್ತಿದ್ದಾರೆ. 2022-23 ರ ಸಾಲಿನಲ್ಲಿ 2.7 ಲಕ್ಷ ಕೋಟಿ ಆಯವ್ಯಯ ಮಂಡಿಸಿದ್ದ ಬೊಮ್ಮಾಯಿ ಈ ಬಾರಿ 3 ಲಕ್ಷ ಕೋಟಿಗೂ ಅಧಿಕ ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಸರ್ಕಾರಕ್ಕೆ ಇದು ನಿರ್ಣಾಯಕ ಆಯವ್ಯಯ ಆಗಿದೆ. ಜನಪ್ರಿಯ ಘೋಷಣೆ, ಚುನಾವಣಾ ಲಾಭ ತರುವ ಆಯವ್ಯಯ ಮಂಡಿಸಲು ಸಿಎಂ ಬೊಮ್ಮಾಯಿ ತಯಾರಿ ನಡೆಸುತ್ತಿದ್ದಾರೆ. ಈ ಬಾರಿ ಗುರಿ ಮೀರಿ ಆದಾಯ ಸಂಗ್ರಹವಾಗುತ್ತಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಪ್ರಮುಖ ಆದಾಯ ಮೂಲಗಳು ಬಜೆಟ್ ಗುರಿಗಿಂತ 10% ಹೆಚ್ಚುವರಿ ಆದಾಯ ಸಂಗ್ರಹ ಮಾಡಲಿದ್ದು, ಸಿಎಂ ಹೊರೆ ಇಲ್ಲದ ಚುನಾವಣಾ ಬಜೆಟ್ ಮಂಡನೆ ಮಾಡುವುದು ಬಹುತೇಕ ಖಚಿತವಾಗಿದೆ.
ಕಳೆದ ವರ್ಷ 5 ಸಾವಿರ ಕೋಟಿ ರೂ. ರಾಜ್ಯದ ಬೊಕ್ಕಸಕ್ಕೆ ಆದಾಯ ಕೊರತೆಯಿತ್ತು. ಈ ಬಾರಿ ಈವರೆಗೆ ಬಜೆಟ್ ಗುರಿಗಿಂತ 13 ಸಾವಿರ ಕೋಟಿ ಅಧಿಕವಾಗಿ ಆದಾಯ ಸಂಗ್ರಹ ಮಾಡಲಾಗಿದೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದ್ದು, ಈ ವರ್ಷ 61 ಸಾವಿರಕ್ಕೆ ಮಿತಿಗೊಳಿಸಿ ಸಾಲ ಪಡೆಯಲು ಯೋಜಿಲಾಗಿದೆ. ಹಾಗಾಗಿ, ಈ ಸಲ ಸಿಎಂ ಬೊಮ್ಮಾಯಿ ಹೆಚ್ಚುವರಿ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಲಾ್ಡೌನ್ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡನೆಯಾಗಿತ್ತು. ಈ ಬಾರಿ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಲು ಸಿಎಂ ಸಿದ್ಧತೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.
ಜನಪ್ರಿಯ ಬಜೆಟ್ ಘೋಷಣೆ ಸಾಧ್ಯತೆ?: ಚುನಾವಣಾ ವರ್ಷವಾಗಿರುವುದರಿಂದ ಸಿಎಂ ಬೊಮ್ಮಾಯಿ ಈ ಬಾರಿ ಜನಪ್ರಿಯ ಆಯವ್ಯಯ ಮಂಡಿಸಲು ಮುಂದಾಗಿದ್ದಾರೆ. ಏಪ್ರಿಲ್ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗುವ ನಿಟ್ಟಿನಲ್ಲಿ ಬೊಮ್ಮಾಯಿ ಜನಪ್ರಿಯ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಬಡವರಿಗೆ, ಮಹಿಳೆಯರಿಗೆ ಹಾಗೂ ರೈತರನ್ನು ಕೇಂದ್ರೀಕರಿಸಿ ಹೊಸ ಯೋಜನೆಗಳನ್ನು ಘೋಷಿಸಲು ಸಿಎಂ ಬೊಮ್ಮಾಯಿ ತಯಾರಿ ನಡೆಸುತ್ತಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ರೈತರಿಗೆ ಡೀಸೆಲ್ ಸಹಾಯಧನ ವಿಸ್ತರಿಸುವ ಘೋಷಣೆಯನ್ನು ಈ ಬಾರಿಯ ಬಜೆಟ್ನಲ್ಲಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಸಾಂಪ್ರದಾಯಿಕ ವೃತ್ತಿ ಮಾಡಲು ಇಚ್ಚಿಸುವವರಿಗೆ 50,000 ರೂ. ಧನಸಹಾಯ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ. ಆ ಮೂಲಕ ಗ್ರಾಮೀಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆ ರೂಪಿಸಲಿದ್ದಾರೆ ಎನ್ನಲಾಗಿದೆ.
ಕೋವಿಡ್ ಹಾಗೂ ಪ್ರವಾಹದ ಕಾರಣದಿಂದ ದುಡಿಯುವ ವರ್ಗಕ್ಕೆ ಸಹಾಯ ಹಾಗೂ ಹೆಣ್ಣುಮಕ್ಕಳಿಗೆ ಸಹಾಯ ಮಾಡುವ ಯೋಜನೆಗಳನ್ನು ರೂಪಿಸುತ್ತಿದ್ದು, ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಯೋಜನೆಯನ್ನು ಆಯವ್ಯಯದಲ್ಲಿ ಘೋಷಿಸಲಾಗುವುದು.
ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಘೋಷಿಸಲಿದ್ದಾರೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1,000, 1,500, 2,000 ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ಯೋಜನೆ ಘೋಷಣೆ ಮಾಡಲಿದ್ದಾರೆ.