ಬೆಂಗಳೂರು: ಗಣರಾಜ್ಯೋತ್ಸವದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ವಿರುದ್ಧದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಂಗಳಾಂತ್ಯದೊಳಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಭೇಟಿ ಮಾಡಿ ಕ್ರಮ ವಹಿಸುವುದಾಗಿ ದಲಿತ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ
ಗೃಹ ಕಚೇರಿ ಕೃಷ್ಣಾದಲ್ಲಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಹಾಗೂ ಇತರ ದಲಿತ ಸಂಘಟನೆಗಳ ಮುಖಂಡರೊಂದಿಗೆ ಸಿಎಂ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಗಣರಾಜ್ಯೋತ್ಸವದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ ಸಂಘಟನೆಗಳು ಫೆಬ್ರವರಿ 19 ರಂದು ಸಲ್ಲಿಸಿದ ಮನವಿಯ ಕುರಿತು ಸರ್ಕಾರದ ವತಿಯಿಂದ ಕೈಗೊಂಡಿರುವ ಕ್ರಮಗಳ ಕುರಿತಂತೆ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಮುಖ್ಯ ನ್ಯಾಯಾಧೀಶರ ಭೇಟಿ:ಬಾಬಾಸಾಹೇಬ್ ಅಂಬೇಡ್ಕರ್ ಅವರ ಗೌರವ ಹೆಚ್ಚಿಸುವಂತೆ ಈ ಸಮಸ್ಯೆಯನ್ನು ಇತ್ಯರ್ಥಪಡಿಸಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ವಿಷಯವು ನ್ಯಾಯಾಂಗದ ವ್ಯಾಪ್ತಿಗೆ ಬರುವುದರಿಂದ ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗಲು ಅವಕಾಶ ಒದಗಿಸುವಂತೆ ಸಂಘಟನೆಗಳು ಮನವಿ ಮಾಡಿದರು. ಈ ಕುರಿತು ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ಅವರೊಂದಿಗೆ ಮಾತನಾಡಿ, ಈ ತಿಂಗಳ ಅಂತ್ಯದೊಳಗೆ ಮುಖ್ಯ ನ್ಯಾಯಾಧೀಶರ ಸಮಯಾವಕಾಶ ಪಡೆದು, ಕಾನೂನು ಸಚಿವರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಮುಖ್ಯ ನ್ಯಾಯಾಧೀಶರನ್ನು ಭೇಟಿಯಾಗುವ ಕುರಿತು ಹಾಗೂ ಮುಖತಃ ಮಾತುಕತೆ ನಡೆಸುವ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಇದನ್ನೂ ಓದಿ: ಕೈ ನಾಯಕರಿಂದ ಗುತ್ತಿಗೆದಾರನ ಕುಟುಂಬಸ್ಥರಿಗೆ ಸಾಂತ್ವನ, ಉದ್ಯೋಗದ ಭರವಸೆ
ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.