ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಜೆಡಿಎಸ್ನ ಎಲ್ಲಾ ಶಾಸಕರಿಗೂ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಪ್ ಜಾರಿಮಾಡಿದ್ದಾರೆ.
ಜೆಡಿಎಸ್ನ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಿದ ಮುಖ್ಯಮಂತ್ರಿ ಹೆಚ್ಡಿಕೆ.. - undefined
ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಆದರೆ, ಕೆಲ ಅತೃಪ್ತ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ತಮ್ಮ ಪಕ್ಷದ ಎಲ್ಲಾ ಶಾಸಕರಿಗೂ ಕಡ್ಡಾಯವಾಗಿ ಸದನಕ್ಕೆ ಹಾಜರಾಗಲು ವಿಪ್ ಜಾರಿ ಮಾಡಿದ್ದಾರೆ. ಗೈರು ಹಾಜರಾದರೆ ಪಕ್ಷಾಂತರ ಕಾಯ್ದೆಯಡಿ ಶಾಸಕರನ್ನು ಅನರ್ಹಗೊಳಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಹೆಚ್ಡಿಕೆ ಎಚ್ಚರಿಸಿದ್ದಾರೆ.
![ಜೆಡಿಎಸ್ನ ಎಲ್ಲಾ ಶಾಸಕರಿಗೂ ವಿಪ್ ಜಾರಿ ಮಾಡಿದ ಮುಖ್ಯಮಂತ್ರಿ ಹೆಚ್ಡಿಕೆ..](https://etvbharatimages.akamaized.net/etvbharat/prod-images/768-512-3819133-thumbnail-3x2-vickyjpg.jpg)
ಜೆಡಿಎಸ್ನ ಶಾಸಕಾಂಗ ಪಕ್ಷದ ನಾಯಕರೂ ಆದ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಶಾಸಕರಿಗೆ ವಿಪ್ ಜಾರಿಗೊಳಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್. ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯ ಅವರಿಗೂ ವಿಪ್ ನೀಡಲಾಗಿದೆ. ಶಾಸಕರ ಭವನದ ಕೊಠಡಿಗಳ ಬಾಗಿಲ ಬಳಿ ವಿಪ್ ಪ್ರತಿಯನ್ನು ಅಂಟಿಸಲಾಗಿದೆ ಎಂದಿದ್ದಾರೆ. ಉಳಿದ ಶಾಸಕರಿಗೆ ಈಗಾಗಲೇ ವಿಪ್ ಜಾರಿಗೊಳಿಸಲಾಗಿದೆ. ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿದ್ದು, ಸರ್ಕಾರದ ಪರವಾಗಿ ಮತ ಚಲಾಯಿಸಬೇಕು. ಗೈರು ಹಾಜರಾದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವಿಪ್ನಲ್ಲಿ ಸೂಚಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ದೇವನಹಳ್ಳಿ ಬಳಿಯ ರೆಸಾರ್ಟ್ನಲ್ಲಿ ತಂಗಿದ್ದ ಜೆಡಿಎಸ್ ಶಾಸಕರು ಇಂದು ಒಟ್ಟಾಗಿ ವಿಧಾನಸೌಧಕ್ಕೆ ಆಗಮಿಸಿದರು. ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗುವ ಮುನ್ನ ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ಸೇರಿ ಅಧಿವೇಶನ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಶಾಸಕರು ಸಮಾಲೋಚನೆ ನಡೆಸಿದರು.
ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ, ಶಾಸಕರು ಎಂದಿನಂತೆ ಒಗ್ಗಟ್ಟಿನಿಂದ ಇರಬೇಕು. ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಶಾಸಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.