ಬೆಂಗಳೂರು: ವಿಧಾನಸೌಧದಲ್ಲಿ ನಡೆಯುತ್ತಿರುವ ಪ್ರಧಾನ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಸಿಎಂ ಯಡಿಯೂರಪ್ಪ ಅತಿವೃಷ್ಠಿ ಪರಿಹಾರ ಕಾಮಗಾರಿ ಸಭೆಯಲ್ಲಿ ಮಾತನಾಡಿದರು. ನಮ್ಮ ಸರ್ಕಾರ ರಚನೆಯಾದ ನಂತರ ಚುನಾವಣೆ ಮತ್ತಿತರ ಕಾರಣಗಳಿಗೆ ಸರ್ಕಾರದ ಸ್ಥಿರತೆ ಬಗ್ಗೆ ನಿಮಗೆಲ್ಲರಿಗೂ ಅನುಮಾನವಿತ್ತು. ಈಗ ಅದೆಲ್ಲಾ ಬಗೆಹರಿದಿದೆ. ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪವಿದೆ. ನಾವು ಆಡಳಿತದಲ್ಲಿ ಬಿಗಿ ತರಬೇಕಾಗಿದೆ ಎಂದು ತಾಕೀತು ಮಾಡಿದರು.
ಅತಿವೃಷ್ಟಿ, ಪ್ರವಾಹ ಸಂದರ್ಭದಲ್ಲಿ ಅಧಿಕಾರಿಗಳು ಕೈಗೊಂಡ ಕಾರ್ಯ ಶ್ಲಾಘನೀಯ. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗಾಗಿ ಹೆಚ್ಚಿನ ಅನುದಾನ ಬೇಕಾಗಿದೆ. ಪ್ರತಿ ಇಲಾಖಾವಾರು ಕಾರ್ಯದರ್ಶಿಗಳು ಸಭೆ ನಡೆಸಬೇಕು. ಆ ರೀತಿಯ ಕೆಲಸ ಆಗುತ್ತಿಲ್ಲ. ಖರ್ಚಿನ ಬಗ್ಗೆ ಹೇಳುತ್ತೀರಾ, ಆದರೆ ಅಭಿವೃದ್ಧಿ ಬಗ್ಗೆ ಹೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಾವು ಇಷ್ಟೆಲ್ಲಾ ಪರಿಹಾರ ವಿತರಣೆ ಮಾಡಿದ್ದರೂ ಸಹ ಬೆಳೆ ಪರಿಹಾರ ಸಮರ್ಪಕವಾಗಿ ಆಗಿಲ್ಲ ಎಂದು ಮಾಧ್ಯಮಗಳಲ್ಲಿ ಟೀಕೆ ಬರುತ್ತಿವೆ. ಹಾಗಾಗಿ ವಾಸ್ತವಿಕ ಪರಿಸ್ಥಿತಿ ಏನು ಎಂಬುದನ್ನು ತಿಳಿದುಕೊಂಡು ಎಲ್ಲಿ ಕೊರತೆ ಇದೆಯೋ ಅಲ್ಲಿ ಸರಿಪಡಿಸಬೇಕು. ಸರ್ಕಾರಿ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಕರೆ ನೀಡಿದರು.
ಮುಖ್ಯ ಕಾರ್ಯದರ್ಶಿಗಳು ತಿಂಗಳಿಗೊಮ್ಮೆ ಜಿಲ್ಲಾ ಪ್ರವಾಸ ಮಾಡಬೇಕು ಎಂದು ಈ ಮೊದಲೇ ಸೂಚನೆ ನೀಡಿದ್ದೇನೆ. ಜೊತೆಗೆ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಹದಿನೈದು ದಿನಗಳಿಗೆ ಒಮ್ಮೆಯಾದರೂ ಜಿಲ್ಲೆಗಳಿಗೆ ಭೇಟಿ ಕೊಟ್ಟು, ಪ್ರಗತಿ ಪರಿಶೀಲನೆ ಮಾಡಬೇಕು. ಜಿಲ್ಲೆಯ ಕುಂದು ಕೊರತೆಗಳ ಬಗ್ಗೆ ವರದಿ ನೀಡುವಂತೆ ತಾಕೀತು ಮಾಡಿದರು.