ಕರ್ನಾಟಕ

karnataka

By

Published : May 19, 2021, 6:29 PM IST

Updated : May 19, 2021, 7:35 PM IST

ETV Bharat / state

ಆಮ್ಲಜನಕ ಪೂರೈಸುವ 1000 ಹಾಸಿಗೆಯ ಜೆಎಸ್‍ಡಬ್ಲ್ಯೂ ಕೋವಿಡ್ ಕೇರ್ ಸೆಂಟರ್​ಗೆ ಸಿಎಂ ಚಾಲನೆ

ಈ ಆಸ್ಪತ್ರೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರ್ವಹಿಸಲಿದೆ. ವೈದ್ಯರು / ತಜ್ಞರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ, ಮೇಲ್ವಿಚಾರಕರು ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ಹೊಂದಿದ್ದು, ಅವರು ವಿವಿಧ ಪಾಳಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದಾರೆ..

bsy
bsy

ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇಂದು ಜೆಎಸ್‍ಡಬ್ಲ್ಯೂ ಸ್ಟೀಲ್ ಸಂಸ್ಥೆಯ ವತಿಯಿಂದ ಆಯೋಜಿಸಿರುವ 1,000 ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ ಉದ್ಘಾಟಿಸಿದರು.

ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೋವಿಡ್-19ನ ಎರಡನೇ ಅಲೆಯ ನಿಯಂತ್ರಣ ಹಾಗೂ ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಈ ಪ್ರಯತ್ನದಲ್ಲಿ ಖಾಸಗಿ ಸಂಸ್ಥೆಗಳೂ ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.

ಪೈಪ್ ಲೈನ್ ವ್ಯವಸ್ಥೆ:ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಇಡೀ ದೇಶದಲ್ಲಿ ಆಮ್ಲಜನಕದ ಕೊರತೆ ಇದೆ. ಇಂತಹ ಸಂಕಟದ ಪರಿಸ್ಥಿತಿಯಲ್ಲಿ ಈ ಕೋವಿಡ್ ಕೇರ್ ಸೌಲಭ್ಯವು ಈ ಭಾಗದ ಸಂಜೀವಿನಿಯಾಗಲಿದೆ ಎಂಬ ಆಶಾಭಾವ ವ್ಯಕ್ತಪಡಿಸಿದರು.

ಈ ಆಸ್ಪತ್ರೆಗೆ ನಿರಂತರವಾಗಿ ಆಮ್ಲಜನಕ ಪೂರೈಸಲು ಜೆಎಸ್​ಡಬ್ಲ್ಯು ಉಕ್ಕಿನ ಸ್ಥಾವರದಿಂದ 4.8 ಕಿ.ಮೀ. ಪೈಪ್‍ಲೈನ್ ವ್ಯವಸ್ಥೆ ಮಾಡಲಾಗಿದ್ದು, ಈ ಮೂಲಕ ಸೌಕರ್ಯವನ್ನು ದಾಖಲೆಯ ಕೇವಲ 15 ದಿನಗಳಲ್ಲಿ ನಿರ್ಮಿಸಲಾಗಿದೆ ಎಂದ್ರು.

ರೋಗಿಗಳಿಗೆ ನೇರ ಆಮ್ಲಜನಕ ಪೂರೈಸುವ ಈ ಪರಿಕಲ್ಪನೆಯನ್ನು ಸಾಕಾರಗೊಳಿಸಿದ ಜೆಎಸ್‍ಡಬ್ಲ್ಯು ಅಧ್ಯಕ್ಷ ಸಜ್ಜನ್ ಜಿಂದಾಲ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಈ ಆಸ್ಪತ್ರೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರ್ವಹಿಸಲಿದೆ. ವೈದ್ಯರು / ತಜ್ಞರು, ನರ್ಸ್, ಅರೆವೈದ್ಯಕೀಯ ಸಿಬ್ಬಂದಿ, ಮೇಲ್ವಿಚಾರಕರು ಮತ್ತು ವೈದ್ಯಕೀಯೇತರ ಸಿಬ್ಬಂದಿಯನ್ನು ಹೊಂದಿದ್ದು, ಅವರು ವಿವಿಧ ಪಾಳಿಗಳಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದಾರೆ.

ಆಮ್ಲಜನಕ ಪೂರೈಸುವ 1000 ಹಾಸಿಗೆಯ ಜೆಎಸ್‍ಡಬ್ಲ್ಯೂ ಕೋವಿಡ್ ಕೇರ್ ಸೆಂಟರ್​ಗೆ ಸಿಎಂ ಚಾಲನೆ

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕೋವಿಡ್ ನಿಯಂತ್ರಣದೊಂದಿಗೆಯೇ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಸ್ಪತ್ರೆಗಳ ಮೂಲಸೌಕರ್ಯ ಬಲಪಡಿಸುವ ಪ್ರಕ್ರಿಯೆ ಇನ್ನೂ ಮುಂದುವರೆದಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡಲಾಗುತ್ತಿದೆ ಎಂದು ವಿವರಿಸಿದರು.

ಮೂರು ಅಂಶಗಳ ಕಾರ್ಯತಂತ್ರ :ರಾಜ್ಯದಲ್ಲಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಸರಿದೂಗಿಸಲು ಮೂರು ಅಂಶಗಳ ಕಾರ್ಯತಂತ್ರವನ್ನು ರೂಪಿಸಿದೆ.

ಅದರಂತೆ ಲಿಕ್ವಿಡ್ ಆಕ್ಸಿಜನ್ ಪೂರೈಕೆ ಹೆಚ್ಚಳ, ಆಕ್ಸಿಜನ್ ಜನರೇಟರುಗಳ ಮೂಲಕ ಸ್ಥಳೀಯವಾಗಿ ಆಮ್ಲಜನಕ ಉತ್ಪಾದನೆ ಹೆಚ್ಚಳ ಹಾಗೂ ಆಕ್ಸಿಜನ್ ಕಾನ್ಸಂಟ್ರೇಟರುಗಳು ಹಾಗೂ ಸಿಲಿಂಡರ್​ಗಳನ್ನು ಹೆಚ್ಚಾಗಿ ಖರೀದಿಸುವ ಮೂಲಕ ಆಮ್ಲಜನಕ ಕೊರತೆ ನೀಗಿಸಲು ಪ್ರಯತ್ನಿಸಲಾಗುತ್ತಿದೆ.

ಖಾಸಗಿ ಕಂಪೆನಿಗಳು, ಸ್ವಯಂ ಸೇವಾ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ನಾಗರಿಕ ಬಂಧುಗಳು ಕೋವಿಡ್ ನಿರ್ವಹಣೆಯಲ್ಲಿ ಕೈಜೋಡಿಸುತ್ತಿರುವುದು ಒಂದು ಮಾದರಿ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಮಾತನಾಡಿ, ಈ ಕೋವಿಡ್ ಆಸ್ಪತ್ರೆಯು ಸ್ಥಳೀಯ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾತನಾಡಿದ ಸಜ್ಜನ್ ಜಿಂದಾಲ್ ಅವರು ಈ ಆಸ್ಪತ್ರೆಯನ್ನು ಬಳ್ಳಾರಿ ಹಾಗೂ ಸುತ್ತಮುತ್ತಲ ಜಿಲ್ಲೆಗಳ ಗ್ರಾಮೀಣ ಜನರಿಗೆ ಅರ್ಪಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೊದಲಾದವರು ಭಾಗವಹಿಸಿದ್ದರು.

Last Updated : May 19, 2021, 7:35 PM IST

ABOUT THE AUTHOR

...view details