ಬೆಂಗಳೂರು :ವಿಧಾನಸಭೆ ಅಧಿವೇಶನವನ್ನು ಮೂರು ದಿನಕ್ಕೆ ಮೊಟಕುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮದ ಕುರಿತು ಪ್ರತಿಪಕ್ಷದ ನಾಯಕರು ಸಭೆ ಸೇರಿ ಚರ್ಚಿಸಿದ್ದಾರೆ. ವಿಧಾನಸಭೆ ಹೊರ ಆವರಣದಲ್ಲಿ ಶಾಸಕರಿಗಾಗಿ ನಿರ್ಮಿಸಿರುವ ಕ್ಯಾಂಟೀನ್ನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸುದೀರ್ಘ ಚರ್ಚೆ ನಡೆಸಿದ್ದಾರೆ.
ವಿಧಾನಮಂಡಲ ಅಧಿವೇಶನದ ಕಲಾಪ ಮೊಟಕುಗೊಳಿಸುವ ಸರ್ಕಾರದ ನಿರ್ಧಾರದ ಬಗ್ಗೆ ತೆಗೆದುಕೊಳ್ಳಬೇಕಾದ ನಿಲುವಿನ ಕುರಿತು ಪಕ್ಷದ ಮುಖಂಡರು ಹಾಗೂ ಶಾಸಕರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಕಲಾಪವನ್ನು 15ದಿನ ನಡೆಸುವಂತೆ ಈಗಾಗಲೇ ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದಾರೆ. ಸರ್ಕಾರ ಕೊರೊನಾ ಹೆಚ್ಚಾಗುತ್ತಿದೆ ಎಂಬ ಕಾರಣ ನೀಡಿ ಕಲಾಪವನ್ನು ಮೂರು ದಿನಕ್ಕೆ ಮೊಟಕುಗೊಳಿಸಲು ಮುಂದಾಗಿದೆ.
ಈ ಸಂಬಂಧ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಂಡಿಸಲು ನಿರ್ಧರಿಸಲಾಗಿದ್ದು, ಈ ಪ್ರಸ್ತಾಪವನ್ನು ಅಲ್ಲಿಯೇ ಹೇಗೆ ಖಂಡಿಸಬೇಕು ಎಂಬ ಬಗ್ಗೆ ಪ್ರತಿಪಕ್ಷ ನಾಯಕರು ಈ ಸಭೆಯಲ್ಲಿ ಚರ್ಚಿಸಿದ್ದಾರೆ. ರಾಜ್ಯ ಸರ್ಕಾರವು ತನ್ನ ಸಮಸ್ಯೆ ಮುಚ್ಚಿಕೊಳ್ಳುವ ಸಲುವಾಗಿ ಕಲಾಪವನ್ನು ಕಡಿಮೆ ಅವಧಿಗೆ ನಡೆಸಲು ಮುಂದಾಗಿದೆ. ಒಂದಿಷ್ಟು ಬಿಲ್ಗಳನ್ನು ಕಲಾಪದಲ್ಲಿ ಮಂಡಿಸಿ ಒಪ್ಪಿಗೆ ಪಡೆಯುವ ಸಲುವಾಗಿ ಮಾತ್ರ ಕಲಾಪ ನಡೆಸಲಾಗುತ್ತಿದೆ.
ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ರೈತ ವಿರೋಧಿ ತೀರ್ಮಾನವನ್ನು ವಿಧಾನಮಂಡಲ ಕಲಾಪದಲ್ಲಿ ಚರ್ಚಿಸಲು ಪ್ರತಿಪಕ್ಷ ನಾಯಕರು ತೀರ್ಮಾನಿಸಿದ್ದಾರೆ. ಹಾಗಾಗಿ,ಕಲಾಪವನ್ನು ಮೊಟಕುಗೊಳಿಸುವುದರಿಂದ ಚರ್ಚೆಗೆ ಅವಕಾಶ ಸಿಗುವುದಿಲ್ಲ ಎಂದು ಮೊದಲಿನಿಂದಲೂ ಕಾಂಗ್ರೆಸ್ ಕಿಡಿ ಕಾರುತ್ತಲೇ ಇದೆ. ಈಗಲೂ ಸಹ ಒಕ್ಕೊರಲಿನಿಂದ ಇದನ್ನು ಖಂಡಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.