ಬೆಂಗಳೂರು: ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ವಾಷ್ ರೂಂನಲ್ಲಿ ಶವ ಪತ್ತೆಯಾಗಿದ್ದು, ಈ ಸಂಬಂಧ ಪೀಣ್ಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹನುಮಂತರಾಯ (42), ಹೊನ್ನಮ್ಮ (34) ಮೃತ ದಂಪತಿ. ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರು. ಹಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದಾರೆ. ಬೃಂದಾವನ ನಗರದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಹನುಮಂತರಾಯ ಸೆಕ್ಯೂರಿಟಿ ಗಾರ್ಡ್ ಆಗಿ, ಪತ್ನಿ ಹೊನ್ನಮ್ಮ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ದಂಪತಿ ಕಚೇರಿಯಲ್ಲೇ ವಾಸ್ತವ್ಯ ಹೂಡಿದ್ದರು. ಎಂದಿನಂತೆ ಗುರುವಾರ ಕಚೇರಿಗೆ ಬಂದ ಸಿಬ್ಬಂದಿ ಬಾಗಿಲು ತೆಗೆಯದೆ ಇದ್ದಾಗ ಅನುಮಾನಗೊಂಡು ಆತಂಕದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಮುರಿದು ಒಳಪ್ರವೇಶಿದಾಗ ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಗೊತ್ತಾಗಿದೆ.