ಕರ್ನಾಟಕ

karnataka

ಗೌರಿ ಲಂಕೇಶ್ ಪ್ರಕರಣದ ಸಾಕ್ಷ್ಯಗಳ ಗೌಪ್ಯ ವಿಚಾರಣೆಗೆ ನ್ಯಾಯಾಲಯದ ಅನುಮತಿ

By

Published : Jan 17, 2023, 9:15 PM IST

ಗೌರಿ ಹತ್ಯೆ ಪ್ರಕರಣ ತನಿಖೆ ನಡೆಸಿರುವ ವಿಶೇಷ ತನಿಖಾ ದಳವು (ಎಸ್ಐಟಿ) ಪ್ರಾಥಮಿಕ ಮತ್ತು ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ. 2022ರ ಜುಲೈ 4ರಂದು ಪ್ರಕರಣದ ವಿಚಾರಣೆ ಆರಂಭವಾಗಿದ್ದು, 200 ಸಾಕ್ಷಿಗಳ ಪೈಕಿ ಇದುವರೆಗೆ 30ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ.

ಹೈಕೋರ್ಟ್​
ಹೈಕೋರ್ಟ್​

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಪ್ರಕರಣದಲ್ಲಿ ಸಾಕ್ಷಿಗಳನ್ನು ಗೌಪ್ಯ ವಿಚಾರಣೆ ನಡೆಸಲು ಕೋರಿ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಮನವಿಯನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ (ಕೋಕಾ) ಕಾಯಿದೆಯ ಸೆಕ್ಷನ್ 20 (3) ಅಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ್ ಮನವಿಯನ್ನು ಪುರಸ್ಕರಿಸಿ ಗೌಪ್ಯ ವಿಚಾರಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.

ಸರ್ಕಾರದ ಪರ ಅಭಿಯೋಜಕರು, ಕೋಕಾ ಕಾಯಿದೆ ಸೆಕ್ಷನ್ 20 (3)ರ ಅಡಿ ಪ್ರಕರಣವನ್ನು ಗೌಪ್ಯವಾಗಿ ವಿಚಾರಣೆ ನಡೆಸಲು ಅರ್ಜಿ ಸಲ್ಲಿಸಿದ್ದಾರೆ. ಯಾವೆಲ್ಲಾ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಬೇಕು ಎಂಬ ಹೆಸರುಗಳನ್ನು ಒಳಗೊಂಡ ಮೆಮೊ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಮೆಮೊದಲ್ಲಿ ಕೋರಿರುವಂತೆ ಸಾಕ್ಷಿಗಳಿಗೆ ಸಮನ್ಸ್ ಜಾರಿ ಮಾಡಲು ಆದೇಶಿಸಲಾಗಿದೆ ಎಂದು ನ್ಯಾಯಾಲಯವು ಆದೇಶದಲ್ಲಿ ಹೇಳಿದೆ.

ಗೌರಿ ಹತ್ಯೆ ಪ್ರಕರಣ ತನಿಖೆ ನಡೆಸಿರುವ ವಿಶೇಷ ತನಿಖಾ ದಳವು (ಎಸ್ಐಟಿ) ಪ್ರಾಥಮಿಕ ಮತ್ತು ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಸಿದೆ. 2022ರ ಜುಲೈ 4ರಂದು ಪ್ರಕರಣದ ವಿಚಾರಣೆ ಆರಂಭವಾಗಿದ್ದು, 200 ಸಾಕ್ಷಿಗಳ ಪೈಕಿ ಇದುವರೆಗೆ 30ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ.

ಪ್ರಕರಣದ ಹಿನ್ನೆಲೆ: 2017ರ ಸೆಪ್ಟೆಂಬರ್ 5 ರಂದು ಗೌರಿ ಲಂಕೇಶ್ ಅವರು ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆಯ ಸಂಚು ರೂಪಿಸಿದ ಪ್ರಮುಖ ರೂವಾರಿ ಎಂದು ಅಮೋಲ್ ಕಾಳೆ ಮೇಲೆ ಆರೋಪವಿದ್ದರೆ, ಗುಂಡು ಹಾರಿಸಿದ ಆರೋಪ ಪರಶುರಾಮ್ ವಾಗ್ಮೋರೆ ಮೇಲೂ ಹಾಗೂ ಆತನೊಂದಿಗೆ ಬೈಕ್ ಚಲಾಯಿಸಿ ತಪ್ಪಿಸಿಕೊಳ್ಳಲು ನೆರವಾದ ಆರೋಪವು ಗಣೇಶ್ ಮಿಸ್ಕಿನ್ ಮೇಲೆ ಇದೆ. ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿತ್ತು. ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ಎಸ್ಐಟಿ 18 ಆರೋಪಿಗಳನ್ನು ಬಂಧಿಸಿ, ಅವರ ವಿರುದ್ದ 8,500 ಪುಟಗಳ ಆರೋಪ ಪಟ್ಟಿ ಸಲ್ಲಿಸಿತ್ತು.

ಧಾರವಾಡದಲ್ಲಿ ಎಂ ಎಂ ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂ ಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ್ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್ಐಟಿ ಪತ್ತೆ ಹಚ್ಚಿತ್ತು. ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಅವರ ಮೇಲಿನ ಗುಂಡಿನ ದಾಳಿಯಲ್ಲಿ ಬಳಸಿದ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್ ವಿರುದ್ದ ದಾಖಲಾಗಿದ್ದ ಕೋಕಾ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್​ನಲ್ಲಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಪ್ರಶ್ನಿಸಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು.

ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಲಾಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ವಿಕಾಸ್ ಪಾಟೀಲ್, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಮತ್ತು ರುಶಿಕೇಶ್ ದಿಯೋದಿಕರ್ ಪ್ರಕರಣದ ಆರೋಪಿಗಳಾಗಿದ್ದಾರೆ.

ಓದಿ:ಬಾಲಬ್ರೂಯಿ ಗೆಸ್ಟ್ ಹೌಸ್‌ನಲ್ಲಿ ಕಾನ್ಸ್​ಸ್ಟಿಟ್ಯೂಷನ್​ ಕ್ಲಬ್ ಸ್ಥಾಪನೆಗೆ ಹೈಕೋರ್ಟ್ ಅನುಮತಿ

ABOUT THE AUTHOR

...view details