ಕರ್ನಾಟಕ

karnataka

By

Published : Apr 18, 2022, 3:21 PM IST

ETV Bharat / state

ಶರದ್ ಪವಾರ್ ಭೇಟಿ ಮಾಡಿ ಚರ್ಚಿಸಿದ ಡಿಕೆಶಿ ; ಚುನಾವಣಾ ಪೂರ್ವ ಮೈತ್ರಿ ಚರ್ಚೆ!?

ಕರ್ನಾಟಕದಲ್ಲಿ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಎನ್​ಸಿಪಿ ಜೊತೆ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯರಾಜಕಾರಣದಲ್ಲಿ ನಡೆಯಬಹುದಾದ ವಿದ್ಯಮಾನಗಳು ಹಾಗೂ ಅಗತ್ಯವಿದ್ದರೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಖಂಡರು ಈ ಸಂದರ್ಭ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ..

ಶರದ್​ ಪವಾರ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಡಿಕೆಶಿ
ಶರದ್​ ಪವಾರ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ ಡಿಕೆಶಿ

ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಮಾಜಿ ಸಿಎಂ ಶರದ್ ಪವಾರ್ ಅವರನ್ನು ಬೆಂಗಳೂರಿನಲ್ಲಿ ಸೋಮವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜಧಾನಿಗೆ ಭೇಟಿ ನೀಡಿರುವ ಶರದ್ ಪವಾರ್ ಬೆಂಗಳೂರಿನಲ್ಲಿ ತಮ್ಮ ಪಕ್ಷದ ಕಚೇರಿಯನ್ನು ಆರಂಭಿಸುತ್ತಿದ್ದಾರೆ. ಮಹಾರಾಷ್ಟ್ರದಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ಪಕ್ಷದ ಕಾರ್ಯಕರ್ತರು ಸೇಬಿನ ಹಾರ ಹಾಕಿ ಸ್ವಾಗತಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಂಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು..

ನಗರದ ಖಾಸಗಿ ಹೋಟೆಲ್​​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಇಂದು ದೇವನಹಳ್ಳಿ ಟೋಲ್ ಗೇಟ್​ನಿಂದ ಬಾಣಸವಾಡಿವರೆಗೆ ಬೃಹತ್ ಮೆರವಣಿಗೆ ಕೈಗೊಂಡಿರುವ ಎಂಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಮಧ್ಯಾಹ್ನ 3 ಗಂಟೆಗೆ ಬಾಣಸವಾಡಿಯಲ್ಲಿ ತಮ್ಮ ಪಕ್ಷದ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಅಲ್ಲಿಯೇ ಬಹಿರಂಗ ಸಮಾವೇಶ ಉದ್ದೇಶಿಸಿ ಮಾತನಾಡುವ ಅವರು, ಸಂಜೆ ನಗರದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ವಿವಿಧ ರಾಜಕೀಯ ವಿಚಾರಗಳನ್ನು ಪ್ರಸ್ತಾಪಿಸಲಿದ್ದಾರೆ.

ಅತ್ಯಂತ ಮುಖ್ಯವಾಗಿ 2023ರಲ್ಲಿ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಿದ್ಧತೆ ಆರಂಭಿಸಿರುವ ಅವರು, ಈ ವಿಚಾರವಾಗಿ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲಿ ಸದ್ಯ ಶಿವಸೇನೆ-ಕಾಂಗ್ರೆಸ್ ಹಾಗೂ ಎನ್​ಸಿಪಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎನ್​ಸಿಪಿ ಕರ್ನಾಟಕದಿಂದ 14 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಈ ಸಾರಿಯೂ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿರುವ ಎನ್​ಸಿಪಿ ಜೊತೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರದಲ್ಲಿ ಚುನಾವಣಾ ನಂತರ ಮಾಡಿಕೊಂಡ ಮೈತ್ರಿಯನ್ನು ಕರ್ನಾಟಕದಲ್ಲಿ ಚುನಾವಣಾ ಪೂರ್ವವಾಗಿಯೇ ಮಾಡಿಕೊಳ್ಳುವ ನಿಟ್ಟಿನಲ್ಲಿಯೂ ಮಾತುಕತೆ ನಡೆದಿರುವ ಸಾಧ್ಯತೆ ಇದೆ. ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿರುವ ಮರಾಠಿಗ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಎನ್ಸಿಪಿ ಪ್ರಯತ್ನ ಆರಂಭಿಸಿದೆ.

ಕರ್ನಾಟಕದಲ್ಲಿ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಎನ್​ಸಿಪಿ ಜೊತೆ ಮೈತ್ರಿ ಮಾಡಿಕೊಂಡರೂ ಅಚ್ಚರಿಯಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯರಾಜಕಾರಣದಲ್ಲಿ ನಡೆಯಬಹುದಾದ ವಿದ್ಯಮಾನಗಳು ಹಾಗೂ ಅಗತ್ಯವಿದ್ದರೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಉಭಯ ಪಕ್ಷಗಳ ಮುಖಂಡರು ಈ ಸಂದರ್ಭ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.

ಓದಿ:ಹುಬ್ಬಳ್ಳಿಯಲ್ಲಿ ಗಲಭೆ ನಡೆಸಲು ವ್ಯವಸ್ಥಿತವಾಗಿ ಸಂಚು ರೂಪಿಸಲಾಗಿತ್ತು : ಗೃಹ ಸಚಿವ ಆರಗ ಆರೋಪ

For All Latest Updates

ABOUT THE AUTHOR

...view details