ಬೆಂಗಳೂರು:ಕಲಬುರ್ಗಿ ಹಾಗು ಬಾಗಲಕೋಟೆ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಜನತೆ ಸಂಕಷ್ಟದಲ್ಲಿರುವುದನ್ನು ಗಮನಿಸಿ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿ ಪಡೆದು, ಮುಂಜಾಗ್ರತಾ ಕ್ರಮ ಕೈಗೊಂಡು, ಮನೆ ಹಾನಿಗೊಳಗಾದ ಸಂತ್ರತ್ತರಿಗಾಗಿ ಕಾಳಜಿ ಕೇಂದ್ರ ಸ್ಥಾಪಿಸಿ, ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತಮಗೆ ಹಾಗೂ ತಮ್ಮ ಇಡೀ ಕುಟುಂಬಕ್ಕೆ ಕೊವಿಡ್-19 ಸೊಂಕು ತಗಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದೇವೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ನಲ್ಲಿದ್ದೇವೆ. ಅನಿವಾರ್ಯ ಕಾರಣದಿಂದ ನಿನ್ನೆ ತುಮಕೂರು ಜಿಲ್ಲೆಯ ಶಿರಾಕ್ಕೆ ಭೇಟಿ ನೀಡಿದ್ದೆ. ಆದರೆ ಇನ್ನೂ ಮೈಯಲ್ಲಿ ಸುಸ್ತು ಇರುವ ಕಾರಣ ಇನ್ನು ವಿಶ್ರಾಂತಿ ಪಡೆಯಬೇಕಿದ್ದು, ಪ್ರವಾಸ ಕೈಗೊಳ್ಳದಂತೆ ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಿಗೆ ಭೇಟಿ ನೀಡಲಾಗಿಲ್ಲ ಎಂದರು.
ಆದರೆ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣದ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಮನೆಹಾನಿಗೊಳಗಾಗಿ ಸಂತ್ರಸ್ತರಾಗಿರುವವರಿಗೆ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಿ, ಆಹಾರ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಪೂರೈಕೆ ಮಾಡುವಂತೆ ಸೂಚಿಸಿರುವುದಾಗಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಾನವ ಹಾನಿ, ಜಾನುವಾರುಗಳ ಹಾನಿ, ಮನೆ ಹಾನಿ, ಬೆಳೆ ಹಾನಿ, ರಸ್ತೆ, ಸೇತುವೆ, ಕಟ್ಟಡ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ, ಕೂಡಲೇ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಸಮನ್ವಯತೆಯಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿರುವುದಾಗಿ ಡಿಸಿಎಂ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮುಂಜಾಗ್ರತಾ ಕ್ರಮಕೈಗೊಂಡು ತ್ವರಿತವಾಗಿ ಪರಿಹಾರವನ್ನು ವಿತರಿಸುವಂತೆ ಸೂಚಿಸಿದ್ದಾರೆ. ಸಾರ್ವಜನಿಕರು, ಸಂತ್ರಸ್ತರು ಆತಂಕಕ್ಕೊಳಗಾಗಬಾರದು. ಸರ್ಕಾರವು ಅವರೊಂದಿಗಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.